ಲಕ್ನೋ: ಅಯೋಧ್ಯೆಯ ರಾಮ ಮಂದಿರದ ದೇಣಿಗೆ ದುರುಪಯೋಗ ಮತ್ತು ನಿಧಿ ಕಳ್ಳತನಕ್ಕೆ ಸಂಬಂಧಿಸಿದಂತೆ ನನಗೆ ಅನೇಕ ಪ್ರಮುಖ ವಿಷಯಗಳು ತಿಳಿದಿವೆ ಎಂದು ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಹೊಸ ಬಾಂಬ್ ಸಿಡಿಸಿದ್ದಾರೆ.
ಆದರೆ, ಸದ್ಯದ ಪರಿಸ್ಥಿತಿಯಲ್ಲಿ ಈ ಬಗ್ಗೆ ಮಾತನಾಡಲು ತಾನು ಸಿದ್ಧನಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಬುಧವಾರ ಉತ್ತರ ಪ್ರದೇಶದ ವಿಷ್ಣೋಹರಪುರದಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಆ ಕಡೆ (ಮಂದಿರದ ಆಡಳಿತ ಮಂಡಳಿಯಲ್ಲಿ) ಅತ್ಯಂತ ಶಕ್ತಿಶಾಲಿ ವ್ಯಕ್ತಿಗಳಿದ್ದಾರೆ. ಒಂದು ವೇಳೆ ನಾನು ಈಗ ಸತ್ಯವನ್ನು ಮಾತನಾಡಿದರೆ ಕಷ್ಟಕ್ಕೆ ಸಿಲುಕುವುದು ಖಂಡಿತ,” ಎಂದು ಸಂಚಲನ ಮೂಡಿಸುವ ಹೇಳಿಕೆ ನೀಡಿದ್ದಾರೆ.
ರಾಮ ಮಂದಿರಕ್ಕಾಗಿ ಭಕ್ತರು ಕಾಣಿಕೆ ರೂಪದಲ್ಲಿ ನೀಡಿದ್ದ ಕೋಟ್ಯಂತರ ರೂಪಾಯಿ ಹಣ ನಾಪತ್ತೆಯಾಗಿದೆ ಎಂದು ಸಮಾಜವಾದಿ ಪಕ್ಷದ (SP) ಮುಖ್ಯಸ್ಥ ಅಖಿಲೇಶ್ ಯಾದವ್ ಇತ್ತೀಚೆಗೆ ಗಂಭೀರ ಆರೋಪ ಮಾಡಿದ್ದರು. ಅಲ್ಲದೆ, ಈ ಹಗರಣದ ಕುರಿತು ನ್ಯಾಯಾಲಯಗಳು ಸ್ವಯಂಪ್ರೇರಿತವಾಗಿ (ಸುಮೋಟೋ) ಪ್ರಕರಣ ದಾಖಲಿಸಿಕೊಂಡು ಸಮಗ್ರ ತನಿಖೆ ನಡೆಸಬೇಕು ಎಂದು ಅವರು ಆಗ್ರಹಿಸಿದ್ದರು.
ಇದರ ಬೆನ್ನಲ್ಲೇ, ರಾಮ ಮಂದಿರದ ಅಕೌಂಟ್ಸ್ ಇನ್ಚಾರ್ಜ್ ಆಗಿ ಕೆಲಸ ಮಾಡಿದ್ದಾಗಿ ಹೇಳಿಕೊಂಡಿರುವ ಮಹಿಪಾಲ್ ಸಿಂಗ್ ಎಂಬುವವರು ಕೂಡ, ಮಂದಿರದ ದೇಣಿಗೆ ಸಂಗ್ರಹಣೆಯಲ್ಲಿ ದೀರ್ಘಕಾಲದಿಂದಲೂ ದೊಡ್ಡ ಮಟ್ಟದ ಅವ್ಯವಹಾರಗಳು ನಡೆಯುತ್ತಿವೆ ಎಂದು ಬಹಿರಂಗಪಡಿಸಿರುವುದು ಹಗರಣದ ತೀವ್ರತೆಯನ್ನು ಹೆಚ್ಚಿಸಿದೆ. ಈ ಭ್ರಷ್ಟಾಚಾರದ ಕುರಿತು ತಾವು ಧ್ವನಿ ಎತ್ತಿದ್ದಕ್ಕಾಗಿಯೇ ತಮ್ಮನ್ನು ಹುದ್ದೆಯಿಂದ ವಜಾಗೊಳಿಸಲಾಗಿದೆ ಎಂದು ಮಹಿಪಾಲ್ ಸಿಂಗ್ ಆರೋಪಿಸಿದ್ದಾರೆ.
