Saturday, June 21, 2025

ಸತ್ಯ | ನ್ಯಾಯ |ಧರ್ಮ

ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರ ಸಿಇಸಿ ಸಭೆಯಲ್ಲಿ ಚರ್ಚೆಯಾಗಿಲ್ಲ: ಯಡಿಯೂರಪ್ಪ

ಬೆಂಗಳೂರು: ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರ ಕೇಸರಿ ಪಕ್ಷದ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಚರ್ಚೆಯಾಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ಹೇಳಿದ್ದಾರೆ.

ಹೊಸದಿಲ್ಲಿಯಿಂದ ಆಗಮಿಸಿದ ಬಳಿಕ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಜಿ20 ಶೃಂಗಸಭೆಯ ಯಶಸ್ಸಿನ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು ಎಂದರು.

”ದೆಹಲಿಯಲ್ಲಿನ ಉನ್ನತ ನಾಯಕರ ಜೊತೆ ರಾಜಕೀಯ ವಿಷಯಗಳನ್ನು ಚರ್ಚಿಸಿಲ್ಲ. ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮನಸ್ಸಿನಲ್ಲಿ ಏನಿದೆ ಎಂದು ನನಗೆ ತಿಳಿದಿಲ್ಲ. ಈ ನಿಟ್ಟಿನಲ್ಲಿ ಹೈಕಮಾಂಡ್ ಯಾವ ನಿರ್ಧಾರ ತೆಗೆದುಕೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕಿದೆ” ಎಂದರು.

“ಈ ಬಗ್ಗೆ ಯಾವುದೇ ವೈಯಕ್ತಿಕ ಅಭಿಪ್ರಾಯವಿಲ್ಲ. ಅವರು ಮೈತ್ರಿ ವಿಚಾರವನ್ನು ಚರ್ಚೆಗೆ ತಂದಿಲ್ಲ ಮತ್ತು ನಾನೂ ಕೇಳಿಲ್ಲ. ಎಲ್ಲವನ್ನೂ ಪ್ರಧಾನಿ ಮೋದಿ ಮತ್ತು ಅಮಿತ್ ಶಾ ನಿರ್ಧರಿಸುತ್ತಾರೆ. ಕೇಂದ್ರ ನಾಯಕರು ತೆಗೆದುಕೊಳ್ಳುವ ನಿರ್ಧಾರಕ್ಕೆ ಒಮ್ಮತವಿದೆ. ನಾನು ವಿಷಯವನ್ನು ನಿರ್ಧರಿಸಲು ಸಾಧ್ಯವಿಲ್ಲ, ಎಲ್ಲವನ್ನೂ ನವದೆಹಲಿಯಲ್ಲಿ ನಿರ್ಧರಿಸಬೇಕು,” ಎಂದು ಅವರು ಹೇಳಿದರು.

ಕಾವೇರಿ ವಿವಾದ ಕುರಿತು ಮಾತನಾಡಿದ ಯಡಿಯೂರಪ್ಪ, ತಮಿಳುನಾಡಿಗೆ ಒಂದು ಹನಿ ನೀರು ಬಿಡಬಾರದು. ತಮಿಳುನಾಡಿಗೆ ನೀರು ಬಿಡುವ ಮೂಲಕ ರಾಜ್ಯ ಸರ್ಕಾರ ದೊಡ್ಡ ಅಪರಾಧ ಮಾಡಿದ್ದು, ಕೂಡಲೇ ನೀರು ಬಿಡುವುದನ್ನು ನಿಲ್ಲಿಸಬೇಕು ಎಂದು ಅಭಿಪ್ರಾಯಪಟ್ಟರು.

ಕಾವೇರಿ ನೀರಿನ ಮೇಲೆ ಅವಲಂಬಿತವಾಗಿರುವ ಪ್ರದೇಶಗಳ ವಾಸ್ತವತೆಯನ್ನು ಸರ್ಕಾರ ಸುಪ್ರೀಂ ಕೋರ್ಟ್ ಮುಂದೆ ಮಂಡಿಸಬೇಕು. ಕರ್ನಾಟಕದ 195 ತಾಲ್ಲೂಕುಗಳಲ್ಲಿ ಬರದ ಪರಿಸ್ಥಿತಿಯಿದ್ದು, ಅದನ್ನು ಎದುರಿಸಲು ತಕ್ಷಣ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಯಡಿಯೂರಪ್ಪ ಹೇಳಿದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page