ಬೆಂಗಳೂರಿನಲ್ಲಿ ಬಿಜೆಪಿ ಸ್ಥಳೀಯ ನಾಯಕಿ ಮಂಜುಳಾ ಅವರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬಿಜೆಪಿ ಪಕ್ಷದ ಕಾರ್ಯದರ್ಶಿಯೂ ಆಗಿದ್ದ ಮೃತ ಮಂಜುಳಾ ಮತ್ತಿಕೆರೆಯ ತಮ್ಮ ನಿವಾಸದಲ್ಲಿಯೇ ಇಂದು ಮಧ್ಯಾಹ್ನ 2:30ರ ಸುಮಾರಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
“ನನ್ನ ಸಾವಿಗೆ ನಾನೇ ಕಾರಣ” ಎಂದು ಡೆತ್ ನೋಟ್ ನಲ್ಲಿ ಬರೆದಿಟ್ಟಿರುವ ಮಂಜುಳಾ, ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಆದರೆ ನಿನ್ನೆ ಸೋಮವಾರವಷ್ಟೇ ಮಂಜುಳಾ ಅವರು ಬಿಜೆಪಿ ಪಕ್ಷದ ಕಾರ್ಯದರ್ಶಿ ಹುದ್ದೆಯಿಂದ ನಿರ್ಗಮಿಸಿದ್ದ ಬಗ್ಗೆ ಪಕ್ಷದ ಮೂಲಗಳಿಂದ ತಿಳಿದು ಬಂದಿದೆ.
ಮೃತ ಮಂಜುಳಾ ಬೆಂಗಳೂರಿನ ಮಲ್ಲೇಶ್ವರಂ ಮಂಡಲದ ಕಾರ್ಯದರ್ಶಿಯಾಗಿದ್ದರು. ಹುದ್ದೆಯಿಂದ ನಿರ್ಗಮಿಸಿದ ಮಾರನೇ ದಿನಕ್ಕೇ ಅವರು ಆತ್ಮಹತ್ಯೆ ಮಾಡಿಕೊಂಡ ಹಿನ್ನೆಲೆಯಲ್ಲಿ, ಸಾವಿನ ಕಾರಣಕ್ಕೆ ಹಲವು ಅನುಮಾನ ಹುಟ್ಟುವಂತಾಗಿದೆ.
ಘಟನಾ ಸ್ಥಳಕ್ಕೆ ಯಶವಂತಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಗೆ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ಮೃತದೇಹವನ್ನು ರವಾನಿಸಲಾಗಿದೆ. ಮಂಜುಳಾ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.