ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ನಾಡಪ್ರಭು ಕೆಂಪೇಗೌಡರ ಪ್ರತಿಮೆಯನ್ನು ಅನಾವರಣಗೊಳಿಸಲು ಶುಕ್ರವಾರದಂದು ಬೆಂಗಳೂರಿಗೆ ಬಂದಿದ್ದು, ಈ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಬಿಜೆಪಿಗರೇ ಪ್ರತಿಮೆ ರಾಜಕೀಯ ಬಿಡಿ. ಪ್ರಗತಿ ಎಲ್ಲಿದೆ ತೋರಿಸಿ? ಎಂದು ಬಿಜೆಪಿ ವಿರುದ್ದ ಕಿಡಿಕಾರಿದ್ದಾರೆ.
ನವೆಂಬರ್ 11 ರಂದು ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಭೇಟಿ ನೀಡಿದ್ದು, ಕೆಎಸ್ಆರ್ ರೈಲು ನಿಲ್ಧಾಣದಲ್ಲಿ ಭಾರತ್ ಎಕ್ಸ್ಪ್ರೆಸ್ ಮತ್ತು ಭಾರತ್ ಗೌರವ್ ಕಾಶಿ ದರ್ಶನ್ ರೈಲಿಗೆ ನೀಡಿದ್ದಲ್ಲದೆ, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-2 ಉದ್ಘಾಟಿಸಿ, ನಾಡಪ್ರಭು ಕೆಂಪೇಗೌಡರ 108 ಮೀ ಎತ್ತರದ ಕಂಚಿನ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಿ ಹೋಗಿದ್ದಾರೆ. ಈ ಕುರಿತು ಬಿಜೆಪಿ ಸರ್ಕಾರದ ವಿರುದ್ಧ ಡಿಕೆಶಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪ್ರಧಾನಿ ಬೆಂಗಳೂರಿಗೆ ಬಂದಿರುವುದರ ಬಗ್ಗೆ ಟ್ವೀಟ್ ಮಾಡಿರುವ ಡಿಕೆಶಿ, ʼಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರೇ ಪ್ರಧಾನಿ ನರೇಂದ್ರ ಮೋದಿಯವರಿಂದ ಕೆಂಪೇಗೌಡರ ಪ್ರತಿಮೆ ಅನಾವರಣ, ಸಂತ ಕನಕದಾಸರು, ವಾಲ್ಮೀಕಿ ಮಹರ್ಷಿಗಳ ಪ್ರತಿಮೆಗಳಿಗೆ ಮಾಲೆ ಹಾಕಿಸಿದ್ದರಿಂದ ಈ ಮಹನೀಯರ ಸಮುದಾಯದವರ ಹೊಟ್ಟೆ ತುಂಬುವುದಿಲ್ಲ, ಅವರ ಸಮಸ್ಯೆ ಬಗೆಹರಿಯುವುದಿಲ್ಲ, ಕಣ್ಣೀರು ಕೊನೆಯಾಗುವುದಿಲ್ಲ ಹೇಳಿದ್ದಾರೆ.
ಚುನಾವಣೆ ಸಮಯದಲ್ಲಿ ಟ್ರಬಲ್ ಇಂಜಿನ್ ಬಿಜೆಪಿ ಸರ್ಕಾರ ತನ್ನ ಭ್ರಷ್ಟಾಚಾರ, ಹಗರಣ, ಕರ್ತವ್ಯಲೋಪಗಳನ್ನು ಮುಚ್ಚಿಕೊಳ್ಳಲು ಮಹನೀಯರ ಪ್ರತಿಮೆಯ ವಿಚಾರ ಮುಂದಿಟ್ಟುಕೊಂಡು ರಾಜಕೀಯ ಮಾಡುತ್ತಿದೆ. ಆದರೆ ಬಿಜೆಪಿಯ ಭ್ರಷ್ಟಾಚಾರ ಸಾಧನೆ ಹಾಗೂ ಅಸಲಿಯತ್ತು ಈಗಾಗಲೇ ರಾಜ್ಯದ ಜನರ ಮುಂದೆ ಬಯಲಾಗಿದೆ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದಂತೆ ರೈತರ ಆದಾಯ ಡಬಲ್ ಆಗಲಿಲ್ಲ. ಬದಲಿಗೆ ವೆಚ್ಚ ತ್ರಿಬಲ್ ಆಗಿದೆ. ಕೋವಿಡ್ ಸಂತ್ರಸ್ತರಿಗೆ ನೀಡಿದ ಪರಿಹಾರದ ಭರವಸೆ ಇನ್ನೂ ಈಡೇರಿಲ್ಲ. ಅಚ್ಚೇ ದಿನ್ಗಾಗಿ ಎದುರು ನೋಡುತ್ತಿದ್ದ ಬಡವರ ಕಷ್ಟ ಇನ್ನೂ ನೀಗಿಲ್ಲ. ಬಿಜೆಪಿಗರೇ ಪ್ರತಿಮೆ ರಾಜಕೀಯ ಬಿಡಿ. ಪ್ರಗತಿ ಎಲ್ಲಿದೆ ತೋರಿಸಿ? ಎಂದು ಬಿಜೆಪಿಗೆ ಪ್ರಶ್ನೆ ಮಾಡಿದ್ದಾರೆ.