ಹೊಸದಿಲ್ಲಿ: ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮತ್ತು ಕರ್ನಾಟಕದ ಮುಖ್ಯಮಂತ್ರಿಗಳೊಂದಿಗೆ ಬುಧವಾರ ಸಭೆ ನಡೆಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಈ ಸಮಸ್ಯೆಯನ್ನು ಸಾಂವಿಧಾನಿಕ ರೀತಿಯಲ್ಲಿ ಪರಿಹರಿಸಲು ಎರೆಡು ರಾಜ್ಯಗಳ ಮುಖ್ಯಮಂತ್ರಿಗಳು ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.
ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಕರ್ನಾಟಕದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಕರ್ನಾಟಕ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಭಾಗವಹಿಸಿದ್ದ ಈ ಸಭೆಯಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ನಡೆಯಿತು.
ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅಮಿತ್ ಶಾ ಅವರು, ʼಮಹಾರಾಷ್ಟ್ರ ಮತ್ತು ಕರ್ನಾಟಕದ ನಡುವೆ ನಡೆಯುತ್ತಿರುವ ಗಡಿ ವಿವಾದಗಳ ಬಗ್ಗೆ ನಾವು ಸಕಾರಾತ್ಮಕ ಚರ್ಚೆ ನಡೆಸಿದ್ದೇವೆ. ಎರಡೂ ಕಡೆಯವರು ಸಕಾರಾತ್ಮಕ ಮನೋಭಾವವನ್ನು ಉಳಿಸಿಕೊಂಡಿದ್ದಾರೆ ಮತ್ತು ಗಡಿ ವಿವಾದಗಳನ್ನು ರಸ್ತೆಗಳಲ್ಲಿ ಪರಿಹರಿಸಲು ಸಾಧ್ಯವಿಲ್ಲ ಮತ್ತು ಸಾಂವಿಧಾನಿಕ ವಿಧಾನಗಳ ಮೂಲಕ ಮಾತ್ರ ಮಾಡಬಹುದು ಎಂದು ಸರ್ವಾನುಮತದಿಂದ ನಿರ್ಧರಿಸಲಾಯಿತು ಎಂದು ಹೇಳಿದ್ದಾರೆ.
ʼಸಮಸ್ಯೆಯನ್ನು ಪರಿಹರಿಸುವ ಸಲುವಾಗಿ ಎರಡೂ ರಾಜ್ಯಗಳ ತಲಾ ಮೂವರು ಸಚಿವರು ಸೇರಿದಂತೆ ಒಟ್ಟು 6 ಸಚಿವರ ಸಮಿತಿಯು ವಿವರವಾದ ಮಾತುಕತೆ ನಡೆಸಲಿದೆ. ಇದಲ್ಲದೆ ಕಾನೂನು ಮತ್ತು ಸುವ್ಯವಸ್ಥೆಯನ್ನು ಖಚಿತಪಡಿಸಿಕೊಳ್ಳಲು, ಹಿರಿಯ ಐಪಿಎಸ್ ಅಧಿಕಾರಿಯ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗುವುದುʼ ಎಂದು ಹೇಳಿದ್ದಾರೆ.
ಉದ್ವಿಗ್ನತೆಯನ್ನು ಸೃಷ್ಟಿಸಲು ಟ್ವಿಟರ್ ಮೂಲಕ ಸುಳ್ಳು ಸುದ್ದಿಗಳನ್ನು ಹರಡಲಾಗುತ್ತಿದೆ ಎಂದು ಉಲ್ಲೇಖಿಸಿದ ಶಾ, ʼಹಿರಿಯ ನಾಯಕರ ಹೆಸರಿನ ನಕಲಿ ಟ್ವಿಟರ್ ಖಾತೆಗಳು ಈ ವಿಷಯವನ್ನು ಪ್ರಚೋದಿಸುವಲ್ಲಿ ಬಹಳ ದೊಡ್ಡ ಪಾತ್ರ ವಹಿಸಿವೆ ಎಂಬುದು ನಮ್ಮ ಗಮನಕ್ಕೆ ಬಂದಿದೆ. ಇದರ ಹಿಂದಿರುವ ಜನರ ವಿರುದ್ಧ ಎಫ್ಐಆರ್ಗಳನ್ನು ದಾಖಲಿಸಲು ನಿರ್ಧರಿಸಲಾಗಿದೆ ಮತ್ತು ಅವುಗಳನ್ನು ಆದಷ್ಟು ಬೇಗ ಬಹಿರಂಗಪಡಿಸಲಾಗುವುದುʼ ಎಂದರು.
ವಿರೋಧ ಪಕ್ಷಗಳು ಸಹಕರಿಸುವಂತೆ ಮನವಿ ಮಾಡಿದ ಅಮಿತ್ ಶಾ ಅವರು, ʼಈ ವಿಷಯವನ್ನು ರಾಜಕೀಯಗೊಳಿಸದಂತೆ ಮಹಾರಾಷ್ಟ್ರ ಮತ್ತು ಕರ್ನಾಟಕದ ವಿರೋಧ ಪಕ್ಷಗಳನ್ನು ನಾನು ಒತ್ತಾಯಿಸುತ್ತೇನೆ. ಈ ಸಮಸ್ಯೆಯನ್ನು ಪರಿಹರಿಸಲು ರಚಿಸಲಾದ ಸಮಿತಿಯ ಚರ್ಚೆಗಳ ಫಲಿತಾಂಶಕ್ಕಾಗಿ ಮತ್ತು ಸರ್ವೋಚ್ಚ ನ್ಯಾಯಾಲಯದ ನಿರ್ಧಾರಕ್ಕಾಗಿ ನಾವು ಕಾಯಬೇಕು. ಎನ್ಸಿಪಿ, ಕಾಂಗ್ರೆಸ್ ಮತ್ತು ಉದ್ಧವ್ ಠಾಕ್ರೆ ಗುಂಪು ಸಹಕರಿಸುತ್ತವೆ ಎಂಬ ವಿಶ್ವಾಸ ನನಗಿದೆ ಎಂದು ಹೇಳಿದರು.