ಹಾವೇರಿ: ಮಾರ್ಚ್ನಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದ್ದು, ಫೆಬ್ರವರಿ ಮೊದಲ ವಾರದಲ್ಲಿ ರಾಜ್ಯ ಬಜೆಟ್ ಮಂಡಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಘೋಷಿಸಿದ್ದಾರೆ.
ಹಾವೇರಿಯ ನರಸಾಪುರ ಹೆಲಿಪ್ಯಾಡ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ಬೇಗನೇ ಬಜೆಟ್ ಮಂಡಿಸುತ್ತೇವೆ ಎಂದು ತಿಳಿಸಿದರು.
ಬರಗಾಲ ಎದುರಿಸುತ್ತಿರುವ ರೈತರಿಗೆ ತಾತ್ಕಾಲಿಕವಾಗಿ ರಾಜ್ಯ ಸರ್ಕಾರ ತಲಾ 2 ಸಾವಿರ ರೂಪಾಯಿ ಪರಿಹಾರ ನೀಡಿದೆ ಎಂದು ಸಿದ್ದರಾಮಯ್ಯ ಸಮರ್ಥಿಸಿಕೊಂಡರು.
ಕೇಂದ್ರ ಸರ್ಕಾರದಿಂದ ಪ್ಯಾಕೇಜ್ ದೊರೆತ ತಕ್ಷಣ ರೈತರಿಗೆ ಹೆಚ್ಚಿನ ಪರಿಹಾರ ನೀಡಲಾಗುವುದು ಎಂದು ಅವರು ಹೇಳಿದರು.
“ಸರ್ಕಾರವು ಪ್ರಸ್ತುತ ನೀಡುತ್ತಿರುವ ಪರಿಹಾರವು ಸಾಕಾಗುವುದಿಲ್ಲ ಎಂದು ನನಗೆ ತಿಳಿದಿದೆ. ಆದರೆ ಇದುವರೆಗೂ ಕೇಂದ್ರ ಸರ್ಕಾರದಿಂದ ಹಣ ಬಿಡುಗಡೆಯಾಗಿಲ್ಲ. ಬಿಜೆಪಿ ನಾಯಕರು ಟೀಕೆ ಮಾಡುವ ಬದಲು ಹಣ ಬಿಡುಗಡೆ ಮಾಡಿಸಲಿ” ಎಂದರು.
ಅವಹೇಳನಕಾರಿ ಹೇಳಿಕೆ ನೀಡುವ ಸಂಸ್ಕೃತಿ ಸಿಎಂ ಸಿದ್ದರಾಮಯ್ಯ ಅವರಿಂದ ಆರಂಭವಾಗಿದೆ ಎಂಬ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ: “ಸಂಸದ ಮತ್ತು ಮಾಜಿ ಕೇಂದ್ರ ಸಚಿವರಾಗಿ ಹೆಗಡೆಯವರ ಕೊಡುಗೆ ಶೂನ್ಯ. ಮೂರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಅವರು ಈ ರೀತಿಯ ಹೇಳಿಕೆ ನೀಡಿ ಗಮನ ಸೆಳೆಯಲು ಯತ್ನಿಸುತ್ತಿದ್ದಾರೆ. ಸಂಸ್ಕೃತಿಯೆಂದರೆ ಮಾನವೀಯತೆ. ಮನುಷ್ಯರಿಗೆ ಮಾನವೀಯತೆ ಇರಬೇಕು. ಈ ಹೇಳಿಕೆಯು ಕೇಂದ್ರ ಸಚಿವ ಜೋಶಿಯವರ ಸಂಸ್ಕೃತಿಯನ್ನು ಬಿಂಬಿಸುತ್ತದೆ” ಎಂದು ಹೇಳಿದರು.