ಸರ್ಕಾರ ತೆಗೆದುಕೊಳ್ಳುವ ಪ್ರತಿಯೊಂದು ನಿರ್ಧಾರವನ್ನು ಬೆಂಬಲಿಸಲು ನಾನು ಬದ್ಧನಾಗಿಲ್ಲ. ಒಂದು ನಿರ್ಧಾರ ಸರಿಯಾಗಿಲ್ಲದಿದ್ದರೆ ಅದನ್ನು ವಿರೋಧಿಸುವ ಹಕ್ಕು ನನಗಿದೆ. ಅದೇ ರೀತಿ ಜಾತಿ ಗಣತಿ ವರದಿಯಲ್ಲಿ ಇರುವ ಲೋಪಗಳ ಬಗ್ಗೆ ಸಾರ್ವಜನಿಕ ಹಿತಾಸಕ್ತಿ ವಿರುದ್ಧವೇ ಆಗಿದ್ದರೆ ನಾನದನ್ನು ವಿರೋಧಿಸುತ್ತೇನೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
“ಜಾತಿ ಗಣತಿ ಬಗ್ಗೆ ಭಿನ್ನಾಭಿಪ್ರಾಯ ಹೊಂದಿರುವವರು ತಮ್ಮ ಅಭಿಪ್ರಾಯಗಳನ್ನು ಲಿಖಿತವಾಗಿ ಸಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ. ಇದೇ ನಿಜವಾದ ಪ್ರಜಾಪ್ರಭುತ್ವ. ಒಂದೇ ಸರ್ಕಾರದ ಭಾಗವಾಗಿದ್ದರೂ ಸರ್ವರ ಅಭಿಪ್ರಾಯಗಳನ್ನು ಸ್ವೀಕರಿಸಬೇಕು. ಸರ್ಕಾರ ನಮ್ಮ ಅಭಿಪ್ರಾಯಗಳನ್ನು ಪರಿಗಣಿಸುತ್ತದೆ ಎಂದು ವಿಶ್ವಾಸವಿದೆ” ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ಸಾಮಾನ್ಯ ಜನಗಣತಿಯ ಜೊತೆಗೆ ಜಾತಿ ಗಣತಿ ನಡೆಸುವ ಕೇಂದ್ರ ಸರ್ಕಾರದ ನಿರ್ಧಾರದ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, ಜಾತಿ ಗಣತಿ ವಿಚಾರದಲ್ಲಿ ಬಿಜೆಪಿ ಯೂಟರ್ನ್ ಹೊಡೆದಿದೆ. ಜಾತಿ ಗಣತಿ ಬಗ್ಗೆ ಅವರಿಗೆ ಏಕಾಏಕಿ ಪ್ರೀತಿ ಬಂದಿದೆ ಎಂದು ವ್ಯಂಗ್ಯವಾಡಿದರು.
ನಾವು ಜಾತಿ ಗಣತಿ ಮಾಡಿದಾಗ ಬಿಜೆಪಿಯವರು ವಿರೋಧ ಮಾಡಿದರು. ಈಗ ಕೇಂದ್ರ ಸರಕಾರ ಜಾತಿ ಗಣತಿ ಮಾಡುವ ತೀರ್ಮಾನ ಕೈಗೊಂಡಿರುವುದಕ್ಕೆ, ಪ್ರಧಾನಿಗೆ ದೂರದೃಷ್ಟಿಯಿದೆ ಎಂದು ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಟೀಕಿಸಿದರು.