ಬೆಂಗಳೂರು: ಮಾಜಿ ಸಚಿವ ಬಿ. ನಾಗೇಂದ್ರ ಅವರಿಗೆ ನೀಡಲಾಗಿರುವ ನಿರೀಕ್ಷಣಾ ಜಾಮೀನನ್ನು ರದ್ದುಗೊಳಿಸುವಂತೆ ಕೋರಿ ಸಿಬಿಐ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್, ಗುರುವಾರ ನಾಗೇಂದ್ರ ಅವರಿಗೆ ನೋಟಿಸ್ ಜಾರಿ ಮಾಡಿದೆ. ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು 2026ರ ಜನವರಿ 14ರಂದು ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ಇದನ್ನು ಪ್ರಶ್ನಿಸಿ ಸಿಬಿಐ ಹೈಕೋರ್ಟ್ ಮೆಟ್ಟಿಲೇರಿದೆ.
2023ರ ಮೇ ಮತ್ತು 2024ರ ಜೂನ್ ನಡುವೆ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರಾಗಿದ್ದ ನಾಗೇಂದ್ರ ಅವರು, ನಿಗಮದ ಇತರೆ ಬ್ಯಾಂಕ್ ಖಾತೆಗಳಿಂದ 187 ಕೋಟಿ ರೂಪಾಯಿಗಳನ್ನು ಬೆಂಗಳೂರಿನ ಎಂ.ಜಿ. ರಸ್ತೆಯಲ್ಲಿರುವ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಗೆ ವರ್ಗಾಯಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎಂದು ಸಿಬಿಐ ತಿಳಿಸಿದೆ. ನಂತರ 18 ನಕಲಿ ಬ್ಯಾಂಕ್ ಖಾತೆಗಳನ್ನು ಬಳಸಿಕೊಂಡು 89.63 ಕೋಟಿ ರೂಪಾಯಿಗಳನ್ನು ಅಕ್ರಮವಾಗಿ ಲಪಟಾಯಿಸಲಾಗಿದೆ ಎಂದು ಸಿಬಿಐ ಆರೋಪಿಸಿದೆ. ಈ ಸಂಬಂಧ ಯೂನಿಯನ್ ಬ್ಯಾಂಕ್ನ ಡೆಪ್ಯುಟಿ ಜನರಲ್ ಮ್ಯಾನೇಜರ್ ನೀಡಿದ ದೂರಿನ ಮೇರೆಗೆ 2024ರ ಜೂನ್ 3ರಂದು ಎಫ್ಐಆರ್ ದಾಖಲಿಸಲಾಗಿತ್ತು.
ನಿಗಮ ಮತ್ತು ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆಯಿಂದ (ಕೆಜಿಟಿಟಿಐ) ನಡೆದ ಹಣದ ಅಕ್ರಮ ವರ್ಗಾವಣೆಯ ತನಿಖೆಯ ಸಂದರ್ಭದಲ್ಲಿ ನಾಗೇಂದ್ರ ಅವರ ಪಾತ್ರ ಮತ್ತೆ ಮುನ್ನೆಲೆಗೆ ಬಂದಿದೆ. ಕೌಶಲ್ಯ ಅಭಿವೃದ್ಧಿ ಟೆಂಡರ್ ಅನ್ನು ‘ಎಸ್ಕೆಆರ್ ಇನ್ಫ್ರಾಸ್ಟ್ರಕ್ಚರ್ಸ್’ಗೆ ನೀಡಲು ನಾಗೇಂದ್ರ ಅವರು ಅಕ್ರಮ ಪ್ರತಿಫಲ (ಲಂಚ) ಪಡೆದಿದ್ದಾರೆ ಎಂದು ಸಿಬಿಐ ವಾದಿಸಿದೆ. ಟೆಂಡರ್ ನಂತರ 5.17 ಕೋಟಿ ರೂಪಾಯಿಗಳನ್ನು ನಾಗೇಂದ್ರ ಅವರಿಗೆ ಸಂಬಂಧಿಸಿದ ವ್ಯಕ್ತಿಗಳ ಖಾತೆಗಳಿಗೆ ಮತ್ತು ನಂತರ ಅಲ್ಲಿಂದ ಅವರ ಸಂಬಂಧಿಕರು ಹಾಗೂ ಆಪ್ತ ಕಾರ್ಯದರ್ಶಿಗಳ ಖಾತೆಗಳಿಗೆ ವರ್ಗಾಯಿಸಲಾಗಿದೆ ಎಂದು ತನಿಖಾ ಸಂಸ್ಥೆ ವಿವರಿಸಿದೆ. ಇದೇ ರೀತಿ ಅಲೆಮಾರಿ ಬುಡಕಟ್ಟು ಅಭಿವೃದ್ಧಿ ನಿಗಮದ ಕಾಮಗಾರಿಗಳ ಹಂಚಿಕೆಯಲ್ಲಿಯೂ ಅಕ್ರಮ ನಡೆದಿದೆ ಎಂದು ಸಿಬಿಐ ಉಲ್ಲೇಖಿಸಿದೆ.
ಅಪರಾಧದ ವ್ಯಾಪ್ತಿ ಹಿರಿದಾಗಿರುವುದರಿಂದ ಮತ್ತು ಈ ಪ್ರಕರಣದಲ್ಲಿ ದೊಡ್ಡಮಟ್ಟದ ಪಿತೂರಿ ನಡೆದಿರುವುದರಿಂದ, ನಾಗೇಂದ್ರ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುವುದು (Custodial interrogation) ಅತ್ಯಗತ್ಯವಾಗಿದೆ. ತನಿಖೆಯ ವೇಳೆ ಅವರು ಸಹಕರಿಸುತ್ತಿಲ್ಲ ಹಾಗೂ ಸುಳ್ಳು ಮಾಹಿತಿ ನೀಡುತ್ತಿದ್ದಾರೆ. ಆದರೆ ವಿಶೇಷ ನ್ಯಾಯಾಲಯವು ತನಿಖಾ ಸಾಕ್ಷ್ಯಗಳನ್ನು ಪರಿಗಣಿಸದೆ ಜಾಮೀನು ನೀಡಿದೆ ಎಂದು ಸಿಬಿಐ ಆಕ್ಷೇಪ ವ್ಯಕ್ತಪಡಿಸಿದೆ.
