ರಾಷ್ಟ್ರೀಯ ಪರೀಕ್ಷಾ ಮಂಡಳಿ ನಡೆಸುವ NEET (ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ) ಪರೀಕ್ಷೆಯ ಬಗ್ಗೆ ದೇಶದ ಬಹುತೇಕ ರಾಜಕೀಯ ಪಕ್ಷಗಳು ವಿರೋಧ ವ್ಯಕ್ತಪಡಿಸಿದ್ದು, ಪರೀಕ್ಷೆಯನ್ನು ರದ್ದುಪಡಿಸಬೇಕೆಂದು ಒತ್ತಾಯಿಸಿದ್ದಾರೆ. ಇಂದು ಬಿಎಸ್ಪಿ ನಾಯಕಿ ಮಾಯಾವತಿಯವರು ಕೂಡ ರದ್ದುಗೊಳಿಸಬೇಕು ಮತ್ತು ವೈದ್ಯಕೀಯ ಪ್ರವೇಶದ ಹಳೆಯ ಪದ್ಧತಿಯನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸಿದ್ದಾರೆ.
ತಮ್ಮ ಸಾಮಾಜಿಕ ಜಾಲತಾಣ ‘X’ ಖಾತೆಯ ಮೂಲಕ ಪೋಸ್ಟ್ ಮಾಡಿರುವ ಅವರು, ‘ನೀಟ್-ಯುಜಿ ವೈದ್ಯಕೀಯ ಪರೀಕ್ಷೆಯಲ್ಲಿನ ಅಕ್ರಮಗಳು ಗಂಭೀರ ವಿಷಯವಾದಂತವು. ಇದರ ಬಗೆಗಿನ ಚರ್ಚೆ ಸಂಸತ್ ಮತ್ತು ಸುಪ್ರೀಂ ಕೋರ್ಟ್ವರೆಗೂ ತಲುಪಿದೆ. ಸುಪ್ರೀಂಕೋರ್ಟ್ ನ ತೀರ್ಪು ಏನೇ ಇರಲಿ, ಇದರಿಂದ ಲಕ್ಷಾಂತರ ಅಭ್ಯರ್ಥಿಗಳು ಮತ್ತು ಅವರ ಕುಟುಂಬಗಳಿಗೆ ಉಂಟಾದ ನೋವು ಹಾಗೂ ಮಾನಸಿಕ ಸಂಕಟ ಅವರನ್ನು ಯಾವಾಗಲೂ ಕಾಡುತ್ತದೆ’ ಎಂದು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.
ಮುಂದುವರೆದು ‘ಇಂತಹ ಮಹತ್ವದ ಪರೀಕ್ಷೆಯನ್ನು ಸರಿಯಾದ ಕ್ರಮದಲ್ಲಿ ನಡೆಸುವುದಾಗಿ ಜನರಿಗೆ ಭರವಸೆ ನೀಡುವಲ್ಲಿ ಕೇಂದ್ರ ವಿಫಲವಾಗಿದೆ. ಹಾಗೂ ಸರ್ಕಾರವೇ ಸಮಸ್ಯೆಯನ್ನು ಇನ್ನಷ್ಟು ಗಂಭೀರಗೊಳಿಸಿದೆ. ಆದ್ದರಿಂದ NEET – UG – PG ಪರೀಕ್ಷೆಯನ್ನು ರದ್ದುಗೊಳಿಸಿ, ಹಳೆಯ ವ್ಯವಸ್ಥೆಯನ್ನು ಮರುಸ್ಥಾಪಿಸಬೇಕು’ ಎಂಬುದು ಹಲವು ರಾಜ್ಯ ಸರ್ಕಾರಗಳ ಬೇಡಿಕೆಯಾಗಿದೆ ಎಂದು ಮಾಯಾವತಿ ಹೇಳಿದ್ದಾರೆ.