ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳ (ಆರ್ಆರ್ಬಿ) ವಿಲೀನದ ಬಗ್ಗೆ ಸುಳಿವು ನೀಡಿರುವ ಕೇಂದ್ರ ಸರ್ಕಾರ ಶೀಘ್ರದಲ್ಲೇ ಇದನ್ನು ಕಾರ್ಯರೂಪಕ್ಕೆ ತರಲು ಯೋಜನೆ ರೂಪಿಸಿದೆ. ಕೇಂದ್ರ ಹಣಕಾಸು ಸಚಿವಾಲಯ ಈ ವಿಲೀನ ಪ್ರಕ್ರಿಯೆಗೆ ಮುಂದಾಗಿದ್ದು, ಒಂದು ದೇಶ ಒಂದು ಗ್ರಾಮೀಣ ಬ್ಯಾಂಕ್ ರೀತಿಯಲ್ಲಿ ಇದನ್ನು ಜಾರಿಗೊಳಿಸಲು ಚಿಂತನೆ ನಡೆಸಿದೆ.
ಸಧ್ಯ ವಿಲೀನಕ್ಕೆ ಸಂಬಂಧಿಸಿದ ಎಲ್ಲ ಪ್ರಕ್ರಿಯೆ ಪೂರ್ಣಗೊಂಡಿದೆ. ವಿವಿಧ ರಾಜ್ಯಗಳಲ್ಲಿ ಕಾರ್ಯಾಚರಿಸುತ್ತಿರುವ 15 ಬ್ಯಾಂಕುಗಳು ವಿಲೀನಗೊಳ್ಳಲಿವೆ ಎಂದು ಹಣಕಾಸು ಸಚಿವಾಲಯ ಹೇಳಿದೆ.
ಆಂಧ್ರಪ್ರದೇಶದಲ್ಲಿ ನಾಲ್ಕು ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳು ಕಾರ್ಯನಿರ್ವಹಿಸುತ್ತಿವೆ. ಉತ್ತರಪ್ರದೇಶ ಮತ್ತು ಪಶ್ಚಿಮ ಬಂಗಾಳದಲ್ಲಿ ತಲಾ ಮೂರು, ಕರ್ನಾಟಕ, ಗುಜರಾತ್, ಜಮ್ಮು-ಕಾಶ್ಮೀರ, ಮಧ್ಯಪ್ರದೇಶ, ಮಹಾರಾಷ್ಟ್ರ, ಒಡಿಶಾ ಮತ್ತು ರಾಜಸ್ಥಾನದಲ್ಲಿ ತಲಾ ಎರಡು ಆರ್ಆರ್ಬಿಗಳಿವೆ. ಈ ಬ್ಯಾಂಕ್ಗಳ ಕಾರ್ಯಾಚರಣೆ ವೆಚ್ಚ ಕಡಿತಗೊಳಿಸುವ ಉದ್ದೇಶದಿಂದ ಸರ್ಕಾರ ವಿಲೀನಕ್ಕೆ ಮುಂದಾಗಿದೆ.
ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳ ಬಂಡವಾಳ ವೆಚ್ಚ ಏರಿಕೆ ಇರುವಾಗಲೇ ಕೇಂದ್ರ ಸರ್ಕಾರ ಈ ನಿಲುವು ತೆಗೆದುಕೊಂಡಿರುವ ಬಗ್ಗೆ ಗ್ರಾಮೀಣ ಭಾಗದಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ. ಗ್ರಾಮೀಣ ಬ್ಯಾಂಕುಗಳು ಈಗಾಗಲೇ 7,571 ಕೋಟಿ ರೂ. ನಿವ್ವಳ ಲಾಭ ಗಳಿಸಿರುವ ಹಿನ್ನೆಲೆಯಲ್ಲಿ ಈ ವಿಲೀನದ ಅಗತ್ಯವಾದರೂ ಏನು ಎಂಬ ಬಗ್ಗೆ ಪ್ರಶ್ನೆಗಳು ಎದ್ದಿವೆ.