ಮಂಡ್ಯ: ಕೃಷಿ ಸಚಿವರು ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕರುಗಳಿಗೆ ಹಣಕ್ಕೆ ಬೇಡಿಕೆ ಇಟ್ಟು ಕಿರುಕುಳ ನೀಡುತ್ತಿದ್ದಾರೆಂಬ ಎನ್ನುವ ಪ್ರಕರಣಕ್ಕೆ ಸಂಬಂದಪಟ್ಟಂತೆ ಸಿಎಂ ಸಿದ್ದರಾಮಯ್ಯ ಅವರು ತನಿಖೆಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಈ ಕುರಿತು ನಿನ್ನೆಯಿಂದ ದೊಡ್ಡ ಮಟ್ಟದಲ್ಲಿ ಗದ್ದಲ ಎಬ್ಬಿಸಿದ್ದವು, ಜೊತೆಗೆ ಇಂದು ಈ ಕುರಿತು ಸಿಎಮ್ ವಿರುದ್ಧ ಕುಮಾರಸ್ವಾಮಿಯವರೂ ಕೀಳು ಅಭಿರುಚಿ ಟ್ವೀಟ್ ಮಾಡಿದ್ದರು.
ಪ್ರಕರಣದ ಹಿನ್ನಲೆ: ಸಚಿವ ಎನ್.ಚಲುವರಾಯಸ್ವಾಮಿ ಅವರು 6 ರಿಂದ 8 ಲಕ್ಷ ರೂ. ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದಾರೆಂದು ಜಿಲ್ಲೆಯ ಏಳು ಸಹಾಯಕ ಕೃಷಿ ಅಧಿಕಾರಿಗಳು ಆರೋಪಿಸಿ ದೂರು ನೀಡಿದ್ದರು ಎನ್ನಲಾಗಿದೆ. ಈ ಸಂಬಂಧ ತಮ್ಮ ಇಲಾಖೆಯಿಂದ ಯಾವ ನೌಕರರೂ ಈ ಆರೋಪ ಮಾಡಲಿಲ್ಲ, ಇದು ನಕಲಿ ಪತ್ರ ಎಂದು ಇಲಾಖೆಯ ಹಿರಿಯ ಅಧಿಕಾರಿ ಸ್ಪಷ್ಟನೆ ನೀಡಿದ್ದಾರೆ. ಈ ಪತ್ರ ದಿನವಿಡೀ ಹಲವು ಬೆಳವಣಿಗೆಗಳಿಗೆ ಕಾರಣವಾಗಿದೆ.
ಪತ್ರದಲ್ಲಿ ಏನಿತ್ತು?
ಮಂಡ್ಯ, ಮಳವಳ್ಳಿ, ಕೆ.ಆರ್.ಪೇಟೆ, ಪಾಂಡವಪುರ, ನಾಗಮಂಗಲ, ಶ್ರೀರಂಗಪಟ್ಟಣ ಹಾಗೂ ಮದ್ದೂರು ತಾಲೂಕು ಸಹಾಯಕ ಕೃಷಿ ನಿರ್ದೇಶಕರು ಹಾಗೂ ಸಿಬ್ಬಂದಿ ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದು, ತಲಾ 6ರಿಂದ 8 ಲಕ್ಷ ರೂ. ನೀಡುವಂತೆ ಸಚಿವರು ಜಂಟಿ ಕೃಷಿ ನಿರ್ದೇಶಕರ ಮೂಲಕ ಒತ್ತಡ ಹಾಕಿಸುತ್ತಿದ್ದಾರೆ ಅಂತ ಉಲ್ಲೇಖ ಮಾಡಿದ್ದಾರೆ. ಈ ನಡುವೆ ಪತ್ರಕ್ಕೆ ಸಂಬಂಧಪಟ್ಟಂತೆ ಸೂಕ್ತವಾದ ಕ್ರವನ್ನು ತೆಗೆದುಕೊಳ್ಳುವಂತೆ ರಾಜ್ಯಪಾಲರು ಸರ್ಕಾರದ ಕಾರ್ಯದರ್ಶಿಗೆ ಪತ್ರಬರೆದಿದ್ದಾರೆ.