Thursday, June 19, 2025

ಸತ್ಯ | ನ್ಯಾಯ |ಧರ್ಮ

ಬರ: ನವೆಂಬರ್ 15ರ ಮೊದಲು ವರದಿ ಸಲ್ಲಿಸುವಂತೆ ಉಸ್ತುವಾರಿ ಸಚಿವರಿಗೆ ಮುಖ್ಯಮಂತ್ರಿ ಆದೇಶ

ಬೆಂಗಳೂರು: ರಾಜ್ಯದಲ್ಲಿ ಬರ ಪರಿಸ್ಥಿತಿ ನಿಭಾಯಿಸುತ್ತಿರುವ ಬಗ್ಗೆ ವಿಪಕ್ಷ ನಾಯಕ ಹಾಗೂ ಬಿಜೆಪಿಯ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಅವರು ಕರ್ನಾಟಕ ಸರ್ಕಾರವನ್ನು ಟೀಕಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಎಲ್ಲಾ ಸಚಿವರು ತಮ್ಮ ತಮ್ಮ ಜಿಲ್ಲೆಗಳಿಗೆ ಪ್ರವಾಸ ಮಾಡಿ ನವೆಂಬರ್ 15ರ ಮೊದಲು ವರದಿ ಸಲ್ಲಿಸುವಂತೆ ಶನಿವಾರ ಆದೇಶ ಹೊರಡಿಸಿದ್ದಾರೆ. ಕರ್ನಾಟಕದ 216 ತಾಲ್ಲೂಕುಗಳಲ್ಲಿ ಬರ ಘೋಷಿಸಲಾಗಿದೆ.

ಶನಿವಾರ ಹೊರಡಿಸಿರುವ ಆದೇಶದಲ್ಲಿ, ಮುಂದಿನ ಎರಡು ವಾರಗಳ ಕಾಲ ರಾಜ್ಯದಲ್ಲಿನ ಬರ ಪರಿಹಾರ ಕಾಮಗಾರಿಗಳನ್ನು ಪರಿಶೀಲಿಸಿ ನವೆಂಬರ್ 15ರ ಮೊದಲು ವರದಿ ಸಲ್ಲಿಸುವಂತೆ ಸಿಎಂ ಎಲ್ಲಾ ಸಚಿವರಿಗೆ ಸೂಚಿಸಿದ್ದಾರೆ.

ಜನರು ಮತ್ತು ಜಾನುವಾರುಗಳಿಗೆ ಸಾಕಷ್ಟು ಕುಡಿಯುವ ನೀರಿನ ಸೌಲಭ್ಯಗಳು, ನೀರಾವರಿಗೆ ನೀರು, ಉದ್ಯೋಗದ ಸ್ಥಿತಿ, ಬೆಳೆ ನಷ್ಟ ಮತ್ತು ಇತರ ಬರ ಪರಿಹಾರ ಕಾಮಗಾರಿಗಳನ್ನು ವೀಕ್ಷಿಸಲು ಜಿಲ್ಲಾ ಉಸ್ತುವಾರಿ ಸಚಿವರು ವಿವಿಧ ಪ್ರದೇಶಗಳಲ್ಲಿ ಪರಿಶೀಲನೆ ನಡೆಸುವಂತೆ ಆದೇಶದಲ್ಲಿ ನಿರ್ದೇಶಿಸಲಾಗಿದೆ.

ಈ ಹಿಂದೆ ಬರ ಪರಿಹಾರ ಕಾಮಗಾರಿ ಆರಂಭಿಸುವಂತೆ ಸಚಿವ ಸಂಪುಟ ಜಿಲ್ಲಾಡಳಿತಕ್ಕೆ ಸೂಚಿಸಿತ್ತು. ಪರಿಹಾರ ಕಾರ್ಯಗಳನ್ನು ಕೈಗೊಳ್ಳುವಂತೆ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಲಾಗಿದೆ.

ಬರ ಪರಿಸ್ಥಿತಿಯ ವಾಸ್ತವತೆಯನ್ನು ಅರಿಯಲು ಜಿಲ್ಲಾ ಉಸ್ತುವಾರಿ ಸಚಿವರು ತಮ್ಮ ಉಸ್ತುವಾರಿ ಜಿಲ್ಲೆಗಳಿಗೆ ಭೇಟಿ ನೀಡುತ್ತಿಲ್ಲ ಎಂದು ಯಡಿಯೂರಪ್ಪ ಗುರುವಾರ ಆರೋಪಿಸಿದ್ದರು.

ಕರ್ನಾಟಕ ಎಲ್ಲ ಜಿಲ್ಲೆಗಳಲ್ಲಿ ಬೆಳೆ ನಷ್ಟ ಸಮೀಕ್ಷೆ ನಡೆಸಿ ವರದಿ ಸಿದ್ಧಪಡಿಸಿ ಕೇಂದ್ರಕ್ಕೆ ಸಲ್ಲಿಸಿದ್ದು, ಪ್ರಕೃತಿ ವಿಕೋಪ ಪರಿಹಾರ ನಿಧಿಯಿಂದ 17,901 ಕೋಟಿ ರೂ. ನೀಡಬೇಕು ಎಂದು ಮನವಿ ಮಾಡಿದೆ.

ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿರುವ ಕರ್ನಾಟಕ ಸರ್ಕಾರ, ರಾಜ್ಯಕ್ಕೆ ಅನುದಾನ ನೀಡುವಂತೆ ರಾಜ್ಯ ಬಿಜೆಪಿ ನಾಯಕರನ್ನು ಒತ್ತಾಯಿಸಿದೆ.

ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆಯಡಿ 600 ಕೋಟಿ ರೂ.ಗಳನ್ನು ಕೇಂದ್ರ ಬಿಡುಗಡೆ ಮಾಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ. ನವೆಂಬರ್ 9ರಂದು ನಡೆಯಲಿರುವ ಮುಂದಿನ ಸಭೆಯಲ್ಲಿ ಕರ್ನಾಟಕ ಸಚಿವ ಸಂಪುಟವು ಪರಿಹಾರವನ್ನು ಬಿಡುಗಡೆ ಮಾಡುವ ನಿರ್ಧಾರವನ್ನು ತೆಗೆದುಕೊಳ್ಳುವ ಸಾಧ್ಯತೆಯಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page