ಕೇಂದ್ರ ಸರ್ಕಾರ ಜಾರಿಗೆ ತಂದಿರುವ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜಗಾರ್ ಅಂಡ್ ಆಜೀವಿಕಾ ಮಿಶನ್ (ಗ್ರಾಮೀಣ)’ ಅಥವಾ ವಿಬಿ-ಜಿ ರಾಮ್ ಜಿ ಕಾಯ್ದೆಯು ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಮೂಲ ಆಶಯಕ್ಕೆ ವಿರುದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಪತ್ರದಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ.
ಹೊಸ ಕಾಯ್ದೆಯು ಗ್ರಾಮೀಣ ಜನರ ಹಕ್ಕು ಆಧಾರಿತ ಉದ್ಯೋಗ ಬೇಡಿಕೆಯ ವ್ಯವಸ್ಥೆಯನ್ನು ಹಾಳುಮಾಡಿ, ಅದನ್ನು ಸರ್ಕಾರದ ಸರಬರಾಜು ಆಧಾರಿತ ವ್ಯವಸ್ಥೆಯನ್ನಾಗಿ ಮಾರ್ಪಡಿಸುತ್ತಿದೆ ಎಂದು ಅವರು ದೂರಿದ್ದಾರೆ.
ಈ ಬದಲಾವಣೆಯಿಂದಾಗಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಾರ್ಮಿಕ ಬಜೆಟ್ ಸಿದ್ಧಪಡಿಸುವ ಮತ್ತು ಜನರ ಬೇಡಿಕೆಗೆ ತಕ್ಕಂತೆ ಉದ್ಯೋಗ ನೀಡುವ ಸಹಭಾಗಿತ್ವದ ವಿಧಾನವು ಇಲ್ಲದಂತಾಗುವ ಅಪಾಯವಿದೆ ಎಂದು ಅವರು ಎಚ್ಚರಿಸಿದ್ದಾರೆ.
ಹೊಸ ಕಾಯ್ದೆಯ ಹಣಕಾಸು ಹಂಚಿಕೆಯ ಸ್ವರೂಪವೂ ರಾಜ್ಯಗಳ ಮೇಲೆ ಭಾರೀ ಹೊರೆ ಹೇರುತ್ತಿದೆ ಎಂದು ಮುಖ್ಯಮಂತ್ರಿಗಳು ಪತ್ರದಲ್ಲಿ ವಿವರಿಸಿದ್ದಾರೆ. ಇಲ್ಲಿಯವರೆಗೆ ಕೇಂದ್ರ ಮತ್ತು ರಾಜ್ಯಗಳ ನಡುವೆ ಇದ್ದ ಶೇ. 90:10 ರ ಹಂಚಿಕೆಯ ಅನುಪಾತವನ್ನು ಶೇ. 60:40 ಕ್ಕೆ ಇಳಿಸಿರುವುದು ಸಾಮಾನ್ಯ ಯೋಜನೆಯಾಗಿ ಮಾರ್ಪಡುವಂತೆ ಮಾಡಿದೆ.
ಅಲ್ಲದೆ, ಕೇಂದ್ರ ಸರ್ಕಾರ ನಿಗದಿಪಡಿಸುವ ಹಣಕಾಸಿನ ಮಿತಿಗಿಂತ ಹೆಚ್ಚಿನ ಬೇಡಿಕೆ ಬಂದರೆ, ಆ ವೆಚ್ಚವನ್ನು ರಾಜ್ಯ ಸರ್ಕಾರವೇ ಸಂಪೂರ್ಣವಾಗಿ ಭರಿಸಬೇಕೆಂಬ ನಿಯಮವು ಆರ್ಥಿಕವಾಗಿ ಹೊರೆಯಾಗಲಿದೆ. ಇದು ರಾಜ್ಯಗಳೊಂದಿಗೆ ಯಾವುದೇ ಸಮಾಲೋಚನೆ ನಡೆಸದೆ ಕೈಗೊಂಡಿರುವ ನಿರ್ಧಾರವಾಗಿದ್ದು, ಸಹಕಾರಿ ಒಕ್ಕೂಟ ವ್ಯವಸ್ಥೆಯ ಅಡಿಪಾಯಕ್ಕೆ ಧಕ್ಕೆ ತರುತ್ತದೆ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.
ಕೃಷಿ ಚಟುವಟಿಕೆಗಳ ಋತುವಿನಲ್ಲಿ ಅಂದರೆ ಬಿತ್ತನೆ ಮತ್ತು ಕಟಾವಿನ ಅವಧಿಯಲ್ಲಿ 60 ದಿನಗಳ ಕಾಲ ಕೆಲಸ ನೀಡದಂತೆ ನಿರ್ಬಂಧ ಹೇರಿರುವುದು ದಲಿತರು, ಆದಿವಾಸಿಗಳು ಮತ್ತು ದುರ್ಬಲ ಸಮುದಾಯಗಳ ಮಜೂರಿ ಕೂಲಿಯ ಹಕ್ಕನ್ನು ಕಸಿದುಕೊಳ್ಳಲಿದೆ ಎಂದು ಮುಖ್ಯಮಂತ್ರಿಗಳು ಆಕ್ಷೇಪಿಸಿದ್ದಾರೆ.
ಇಂತಹ ನಿಯಮಗಳಿಂದಾಗಿ ಜನರು ಅನಿವಾರ್ಯವಾಗಿ ಕಡಿಮೆ ಕೂಲಿಗೆ ಕೆಲಸ ಮಾಡುವಂತಾಗುತ್ತದೆ ಅಥವಾ ಜೀವನೋಪಾಯಕ್ಕಾಗಿ ನಗರಗಳಿಗೆ ವಲಸೆ ಹೋಗುವಂತಾಗುತ್ತದೆ. ಅಲ್ಲದೆ, ಯೋಜನೆಯಿಂದ ಮಹಾತ್ಮಾ ಗಾಂಧೀಜಿಯವರ ಹೆಸರನ್ನು ತೆಗೆದುಹಾಕಿರುವುದು ಅತ್ಯಂತ ದುರದೃಷ್ಟಕರ ಸಂಗತಿಯಾಗಿದ್ದು, ಇದು ಯೋಜನೆಯ ನೈತಿಕ ಶಕ್ತಿಯನ್ನು ಕುಂದಿಸುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ತಾಂತ್ರಿಕ ಹಸ್ತಕ್ಷೇಪ ಮತ್ತು ಡಿಜಿಟಲ್ ಸೌಲಭ್ಯಗಳ ಅನಿವಾರ್ಯತೆಯು ಬಡತನ ರೇಖೆಗಿಂತ ಕೆಳಗಿರುವ ಗ್ರಾಮೀಣ ನಾಗರಿಕರನ್ನು ಯೋಜನೆಯಿಂದ ದೂರವಿಡುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿಗಳು ಪತ್ರದಲ್ಲಿ ಕಳವಳ ವ್ಯಕ್ತಪಡಿಸಿದ್ದಾರೆ.
ಈ ಎಲ್ಲಾ ಅಂಶಗಳನ್ನು ಪರಿಗಣಿಸಿ, ಸಂವಿಧಾನದ 258 ಮತ್ತು 280ನೇ ವಿಧಿಗಳ ಆಶಯಕ್ಕೆ ಪೂರಕವಾಗಿ ರಾಜ್ಯಗಳೊಂದಿಗೆ ಚರ್ಚಿಸದೆ ಜಾರಿಗೆ ತರಲು ಉದ್ದೇಶಿಸಿರುವ ಈ ಹೊಸ ಕಾಯ್ದೆಯ ಅನುಷ್ಠಾನವನ್ನು ತಕ್ಷಣವೇ ತಡೆಹಿಡಿಯಬೇಕು ಎಂದು ಅವರು ಪ್ರಧಾನಿಯವರನ್ನು ಒತ್ತಾಯಿಸಿದ್ದಾರೆ. ಗ್ರಾಮೀಣ ಬಡವರ ಜೀವನೋಪಾಯದ ಹಕ್ಕನ್ನು ಬಲಪಡಿಸಲು ವೈಯಕ್ತಿಕವಾಗಿ ಮಧ್ಯಪ್ರವೇಶಿಸುವಂತೆ ಅವರು ಕೋರಿದ್ದಾರೆ.
