Friday, January 23, 2026

ಸತ್ಯ | ನ್ಯಾಯ |ಧರ್ಮ

ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ

ಮಾಜಿ ಸಚಿವರು ಹಾಗೂ ವೀರಶೈವ ಲಿಂಗಾಯತ ಮಹಾಸಭಾದ ಗೌರವ ಅಧ್ಯಕ್ಷರಾಗಿದ್ದ ಶತಾಯುಷಿ ಡಾ. ಭೀಮಣ್ಣ ಖಂಡ್ರೆ (103) ಅವರು ವಯೋಸಹಜ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಉಸಿರಾಟದ ತೊಂದರೆ ಹಾಗೂ ರಕ್ತದೊತ್ತಡದ ಏರುಪೇರಿನಿಂದ ಬೀದರ್‌ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಇತ್ತೀಚೆಗೆ ಮನೆಗೆ ಮರಳಿದ್ದ ಸಂದರ್ಭದಲ್ಲಿ ಕೊನೆಯುಸಿರೆಳೆದರು.

ಆರು ದಶಕಗಳಿಗೂ ಹೆಚ್ಚು ಕಾಲ ಸಾರ್ವಜನಿಕ ಜೀವನದಲ್ಲಿ ಸಕ್ರಿಯರಾಗಿದ್ದ ಡಾ. ಭೀಮಣ್ಣ ಖಂಡ್ರೆ ಅವರು ಜನಪರ ಕಾರ್ಯಕ್ರಮಗಳು, ಸಹಕಾರಿ ಚಳವಳಿ ಹಾಗೂ ಶಿಕ್ಷಣ ಕ್ಷೇತ್ರದ ಕೊಡುಗೆಗಳಿಂದ ಭಾಲ್ಕಿ ಕ್ಷೇತ್ರದಲ್ಲಷ್ಟೇ ಅಲ್ಲದೆ ಬೀದರ್ ಜಿಲ್ಲೆಾದ್ಯಂತ ಅಪಾರ ಜನಮನ್ನಣೆ ಗಳಿಸಿದ್ದರು.

ಶಾಂತಿವರ್ಧಕ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾಗಿ ಬೀದರ್‌ನಲ್ಲಿ ಅಕ್ಕಮಹಾದೇವಿ ಕಾಲೇಜು, ಭಾಲ್ಕಿಯಲ್ಲಿ ಎಂಜಿನಿಯರಿಂಗ್ ಕಾಲೇಜು ಸ್ಥಾಪಿಸಿ ಸಾವಿರಾರು ಯುವಜನರ ಭವಿಷ್ಯಕ್ಕೆ ದಾರಿ ಮಾಡಿಕೊಟ್ಟರು. ತಮ್ಮ ಸ್ವಕ್ಷೇತ್ರದಲ್ಲಿ ಎಂಜಿನಿಯರಿಂಗ್ ಕಾಲೇಜು ಸ್ಥಾಪಿಸುವ ಸಲುವಾಗಿ ಸಚಿವ ಸ್ಥಾನವನ್ನೇ ತ್ಯಾಗ ಮಾಡಿರುವುದು ಅವರ ತ್ಯಾಗಮಯ ವ್ಯಕ್ತಿತ್ವಕ್ಕೆ ಸಾಕ್ಷಿಯಾಗಿದೆ.

ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಸಮುದಾಯವನ್ನು ಸಂಘಟಿಸುವಲ್ಲಿ ಯಶಸ್ವಿಯಾದ ಅವರು, ಕೆಲವೇ ಸಾವಿರ ಸದಸ್ಯರಿದ್ದ ಮಹಾಸಭೆಯನ್ನು ಲಕ್ಷ ಸದಸ್ಯತ್ವದ ಬೃಹತ್ ಸಂಘಟನೆಯಾಗಿ ರೂಪಿಸಿದ್ದರು.

ಡಾ. ಭೀಮಣ್ಣ ಖಂಡ್ರೆ ಅವರ ಪುತ್ರ ಈಶ್ವರ ಖಂಡ್ರೆ ಅವರು ಪ್ರಸ್ತುತ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದು, ಮೊಮ್ಮಗ ಸಾಗರ್ ಖಂಡ್ರೆ ಅವರು ಬೀದರ್ ಜಿಲ್ಲೆಯ ಸಂಸದರಾಗಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page