ಬೆಂಗಳೂರು: ಕಾಂಗ್ರೆಸ್ ವರಿಷ್ಠರು ನನಗೆ ಕರೆ ಮಾಡಿದ್ದರು, ನನ್ನ ನಿರ್ಧಾರವನ್ನು ನಾಳೆ ಪ್ರಕಟಿಸುವುದಾಗಿ ತಿಳಿಸಿದ್ದೇನೆ ಎಂದು ಬಿಜೆಪಿಯಿಂದ ಟಿಕೇಟ್ ವಂಚಿತರಾದ ಮಾಜಿ ಸಿಎಂ ಡಿ.ವಿ.ಸದಾನಂದಗೌಡ ತಿಳಿಸಿದ್ದಾರೆ.
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಟಿಕೆಟ್ ಕೈತಪ್ಪಿದ್ದರಿಂದ ಮುನಿಸಿಕೊಂಡಿರುವ ಅವರು ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿ, ಈ ಬಾರಿ ಚುನಾವಣೆ ಸ್ಪರ್ಧಿಸುವುದಿಲ್ಲ ಎಂದು ನಿರ್ಧಾರ ಮಾಡಿದ್ದೆ. ಬಿಜೆಪಿಯ ಕೆಲವು ನಾಯಕರೇ ಚುನಾವಣೆಗೆ ಸ್ಪರ್ಧಿಸುವಂತೆ ಮನವಿ ಮಾಡಿದ್ದರು. ಹಾಗಾಗಿ ತಾವೂ ಟಿಕೆಟ್ ಆಕಾಂಕ್ಷಿ ಎಂದು ಹೇಳಿಕೊಂಡಿದ್ದೆ. ಆದರೆ ಬಿಜೆಪಿಯಿಂದ ನನಗೆ ಟಿಕೇಟ್ ಸಿಗದೇ ಮೋಸವಾಗಿದೆ ಎಂದರು.
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಟಿಕೆಟ್ ಘೋಷಿಸಿದ ಬೆನ್ನಲ್ಲೇ ಸದಾನಂದಗೌಡರು ಮುನಿಸಿಕೊಂಡಿದ್ದರು. ‘ತಮಗೆ ಟಿಕೆಟ್ ತಪ್ಪಿದ ಕಾರಣ ಒಕ್ಕಲಿಗ ಸಮುದಾಯಕ್ಕೆ ಅನ್ಯಾಯವಾಗಿದೆ ಎಂದು ದೂರಿದ್ದ ಗೌಡರು, ಇದೀಗ ತಮ್ಮ ಮುಂದಿನ ರಾಜಕೀಯ ನಡೆಯನ್ನು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಪ್ರಕಟಿಸುವುದಾಗಿ ಹೇಳಿದ್ದಾರೆ.
‘ಬಿಜೆಪಿ ನಾಯಕರು ನಿನ್ನೆ ನನ್ನ ಮನೆಗೆ ಬಂದಿದ್ದರು. ನನ್ನ ಮನವೊಲಿಸಲು ಪ್ರಯತ್ನಿಸಿದರು. ನನ್ನ ಕುಟುಂಬದ ಸದಸ್ಯರ ಮತ್ತು ಕಾರ್ಯಕರ್ತರ ಜೊತೆ ಸದಸ್ಯರ ಜತೆ ಚರ್ಚೆ ನಡೆಸಬೇಕಾಗಿದೆ. ಕಾಂಗ್ರೆಸ್ ನಾಯಕರೂ ನನ್ನನ್ನು ಸಂಪರ್ಕಿಸಿದ್ದರು’ ಎಂದು ಅವರು ಸ್ಪಷ್ಟಪಡಿಸಿದ್ದಾರೆ.