ಪಹಲ್ಗಾಮ್ ದಾಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ನ ಯಾವುದೇ ನಾಯಕರ ಕಡೆಯಿಂದ ವಿವಾದಾತ್ಮಕ ಹೇಳಿಕೆ ಬರಬಾರದು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಾಕೀತು ಮಾಡಿದ್ದಾರೆ. ಇದನ್ನು ದೇಶದ ಎಲ್ಲಾ ಪ್ರದೇಶ ಕಾಂಗ್ರೆಸ್ ಸಮಿತಿ ಪದಾಧಿಕಾರಿಗಳು ಅನುಸರಿಸಬೇಕು. ಈ ಆದೇಶದ ವಿರುದ್ಧ ನಡೆದುಕೊಳ್ಳಬಾರದು ಎಂದು ಹೇಳಿದ್ದಾರೆ.
ಸುದ್ದಿಗಾರ ರೊಂದಿಗೆ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, “ಈ ವಿಷಯದಲ್ಲಿ ವಿವಾದಾತ್ಮಕ ಹೇಳಿಕೆ ನೀಡದಂತೆ ಈಚೆಗೆ ನಡೆದ ಪಕ್ಷದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ನಿರ್ಣಯ ಕೈಗೊಂಡು ಸುತ್ತೋಲೆ ಹೊರಡಿಸಲಾಗಿದೆ. ಎಲ್ಲರೂ ಅದನ್ನು ಪಾಲಿಸಬೇಕು. ಇದನ್ನು ಮತ್ತೂಮ್ಮೆ ಭಿನ್ನ ಹೇಳಿಕೆ ನೀಡುವವರಿಗೆ ಮನವರಿಕೆ ಮಾಡಿಕೊಡಲಾಗುವುದು’ ಎಂದು ಹೇಳಿದರು.
ಉಗ್ರರ ದಾಳಿ ವಿಚಾರಕ್ಕೆ ಸಂಬಂಧಿಸಿ ವಿಶೇಷ ಅಧಿವೇಶನ ಕರೆಯುವಂತೆ ಪ್ರಧಾನಿಗೆ ಪತ್ರ ಬರೆದಿರುವ ಬಗ್ಗೆ ಕೇಳಿದಾಗ, “ಎಲ್ಲ ಪಕ್ಷದವರು ಒಟ್ಟಾಗಿ ಅಧಿವೇಶನ ಕರೆಯಬೇಕು ಎಂದು ನಾವು ಹೇಳಿದ್ದೇವೆ. ಆ ಅಧಿವೇಶನದಲ್ಲಿ ಪ್ರಧಾನಿ ಇದ್ದು, ಘಟನೆಗೆ ಸಂಬಂಧಿಸಿ ಯಾವೆಲ್ಲ ಕ್ರಮಗಳನ್ನು ಕೈಗೊಂಡಿದ್ದಾರೆ ಎಂಬುದನ್ನು ಹೇಳಬೇಕು’ ಎಂದು ಆಗ್ರಹಿಸಿದರು.