ಹೊಸದೆಹಲಿ: ಮುಡಾ ಮತ್ತು ವಾಲ್ಮೀಕಿ ಕಾರ್ಪೊರೇಷನ್ ಹಗರಣಗಳಿಂದ ಸಾರ್ವಜನಿಕರ ಗಮನವನ್ನು ಬೇರೆಡೆ ಸೆಳೆಯಲು ಕಾಂಗ್ರೆಸ್ ಸರ್ಕಾರವು ಕನ್ನಡಿಗರಿಗೆ ಖಾಸಗಿ ಕಂಪನಿಗಳ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸುವ ಮಸೂದೆಯನ್ನು ತರಲು ನಿರ್ಧರಿಸಿದೆ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಗುರುವಾರ ಹೇಳಿದ್ದಾರೆ.
ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕಳೆದ ಕೆಲವು ದಿನಗಳಿಂದ ದೊಡ್ಡ ಹಗರಣಗಳಿಂದ ಜನ ನಂಬಿಕೆ ಕಳೆದುಕೊಂಡಿದೆ. ಗಮನ ಬೇರೆಡೆ ಸೆಳೆಯಲು ರಾಜ್ಯ ಸರ್ಕಾರ ನಾನಾ ತಂತ್ರಗಳನ್ನು ಹೆಣೆಯುತ್ತಿದೆ ಎಂದು ಹೇಳಿದರು.
ಕನ್ನಡಿಗರಿಗೆ ಉದ್ಯೋಗ ಕಲ್ಪಿಸುವ ವಿಚಾರದಲ್ಲಿ ಸರ್ಕಾರ ಇಷ್ಟು ಗಂಭೀರವಾಗಿದ್ದರೆ ಮುಖ್ಯಮಂತ್ರಿಗಳು ತಮ್ಮ ನಿರ್ಧಾರವನ್ನು ಹಿಂಪಡೆದು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದ ಪೋಸ್ಟ್ ಡಿಲೀಟ್ ಮಾಡಿದ್ದು, ಈ ನಿರ್ಧಾರವನ್ನು ಹಿಂಪಡೆದುಕೊಳ್ಳುವ ಮೂಲಕ ಕಾಂಗ್ರೆಸ್ ಸರ್ಕಾರ ಮತ್ತೆ ಕನ್ನಡಿಗರಿಗೆ ದ್ರೋಹ ಬಗೆದಿದೆ ಎಂದು ಕುಮಾರಸ್ವಾಮಿ ಹೇಳಿದರು.
ಉದ್ಯೋಗ ಮೀಸಲಾತಿ ಪ್ರಕಟಿಸುವ ಮುನ್ನ ರಾಜ್ಯ ಸರ್ಕಾರ ಉದ್ಯಮಿಗಳ ಜತೆ ಚರ್ಚೆ ನಡೆಸಿ ಸಿದ್ಧತೆ ಮಾಡಿಕೊಳ್ಳಬೇಕು. ಐಟಿ ವಲಯದೊಂದಿಗೆ ಯಾವುದೇ ಚರ್ಚೆ ನಡೆಸದೆ, ಸರ್ಕಾರ ನಿರ್ಧಾರ ಕೈಗೊಂಡು ನಂತರ ಯೂ ಟರ್ನ್ ತೆಗೆದುಕೊಂಡರೆ ಹೇಗೆ ಎಂದು ಅವರು ಕೇಳಿದರು.