ಬೆಂಗಳೂರು: ಬಳ್ಳಾರಿಯಲ್ಲಿ ಶಾಸಕ ಜನಾರ್ದನ ರೆಡ್ಡಿ ಮನೆ ಸಮೀಪ ನಡೆದ ಗಲಭೆ ಹಾಗೂ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣದ ತನಿಖೆಯಲ್ಲಿ ಗಂಭೀರ ಲೋಪಗಳು ಮತ್ತು ಅನುಮಾನಾಸ್ಪದ ಬೆಳವಣಿಗೆಗಳು ನಡೆದಿವೆ ಎಂದು ಆರೋಪಿಸಿದರು. ಮೃತ ಕಾಂಗ್ರೆಸ್ ಕಾರ್ಯಕರ್ತನ ಶವವನ್ನು ಎರಡು ಬಾರಿ ಮರಣೋತ್ತರ ಪರೀಕ್ಷೆಗೆ ಒಳಪಡಿಸಿರುವುದು ಅನುಮಾನಕ್ಕೆ ಕಾರಣವಾಗಿದೆ ಎಂದು ಕುಮಾರಸ್ವಾಮಿ ಹೇಳಿದರು.
“ಎರಡು ಬಾರಿ ಶವ ಪರೀಕ್ಷೆ ಮಾಡಿದ್ದೀರಿ. ಮೊದಲ ಬಾರಿ ಏನು ವರದಿ ಬಂತು? ಎರಡನೇ ಬಾರಿ ಯಾರು ಒತ್ತಾಯ ಮಾಡಿದರು? ಯಾರ ಅನುಮತಿಯಲ್ಲಿ ಮರು ಶವ ಪರೀಕ್ಷೆ ನಡೆಸಲಾಯಿತು? ಯಾರನ್ನು ಮೆಚ್ಚಿಸಲು ಈ ಆದೇಶ?” ಎಂದು ಅವರು ಸರಣಿ ಪ್ರಶ್ನೆಗಳನ್ನು ಎತ್ತಿದರು.
ಮೊದಲ ಮರಣೋತ್ತರ ಪರೀಕ್ಷೆಯಲ್ಲಿ ಗುಂಡನ್ನು ತೆಗೆಯಲಾಗಲಿಲ್ಲ ಎಂಬ ಮಾಹಿತಿ ಇದೆ. ಇದಕ್ಕೆ ಕಾರಣವೇನು? ಇದನ್ನು ಸಮಗ್ರವಾಗಿ ತನಿಖೆ ಮಾಡುತ್ತೀರಾ ಅಥವಾ ನ್ಯಾಯವನ್ನು ಮರೆಮಾಚುತ್ತೀರಾ? ರಾಜ್ಯದ ಜನರ ರಕ್ಷಣೆಯ ಜವಾಬ್ದಾರಿ ಸರ್ಕಾರಕ್ಕಿಲ್ಲವೇ ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.
ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆಯನ್ನು ಪ್ರತಿಷ್ಠೆಯ ವಿಚಾರವನ್ನಾಗಿ ಮಾಡಿಕೊಂಡ ಪರಿಣಾಮ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಹತ್ಯೆಯಾಗಿದ್ದಾನೆ ಎಂದು ಆರೋಪಿಸಿದ ಅವರು, ಶಾಸಕ ಭರತ್ ರೆಡ್ಡಿಯ ಆಪ್ತ ಸತೀಶ್ ರೆಡ್ಡಿಯನ್ನು ಬಂಧಿಸಿದ್ದೀರಾ ಅಥವಾ ರಾಜಾತಿಥ್ಯ ನೀಡಿ ಸರ್ಕಾರಿ ವೆಚ್ಚದಲ್ಲಿ ಚಿಕಿತ್ಸೆ ಕೊಡಿಸುತ್ತಿದ್ದೀರಾ ಎಂದು ಕಿಡಿಕಾರಿದರು.
ನಿಜವಾದ ಹೊಣೆಗಾರರನ್ನು ಬಹಿರಂಗಪಡಿಸಬೇಕು: ಕುಮಾರಸ್ವಾಮಿ
ಗಲಭೆ ಪ್ರಕರಣದಲ್ಲಿ ಬಳ್ಳಾರಿ ಎಸ್ಪಿಯನ್ನು ಮಾತ್ರ ಅಮಾನತು ಮಾಡಲಾಗಿದೆ. ಆದರೆ ಐಜಿ, ಎಎಸ್ಪಿ ಹಾಗೂ ಡಿವೈಎಸ್ಪಿಗೆ ಬಳ್ಳಾರಿಯ ಹಿನ್ನೆಲೆ ಗೊತ್ತಿರಲಿಲ್ಲವೇ? ಅವರನ್ನು ಯಾಕೆ ಅಮಾನತು ಮಾಡಿಲ್ಲ ಎಂದು ಕುಮಾರಸ್ವಾಮಿ ಪ್ರಶ್ನಿಸಿದರು. ನಿಜವಾದ ಹೊಣೆಗಾರರು ಯಾರು ಎಂಬುದನ್ನು ಸರ್ಕಾರ ಜನರ ಮುಂದೆ ಇಡಬೇಕು ಎಂದು ಆಗ್ರಹಿಸಿದರು.
ಜನಾರ್ದನ ರೆಡ್ಡಿಗೆ ಬಳ್ಳಾರಿಗೆ ಪ್ರವೇಶಕ್ಕೆ ಅನುಮತಿ ನೀಡಿದ ನಂತರ ಎಷ್ಟು ಗಲಭೆಗಳು ನಡೆದಿವೆ ಎಂಬ ವಿವರಗಳನ್ನು ಸರ್ಕಾರ ಬಹಿರಂಗಪಡಿಸಬೇಕು ಎಂದ ಅವರು, ಜನವರಿ 3ರಂದು ನಡೆದ ಕಾರ್ಯಕ್ರಮಕ್ಕೆ ಸರ್ಕಾರ ಅನುಮತಿ ನೀಡಿತ್ತೇ? ಅನುಮತಿ ಇಲ್ಲದಿದ್ದರೆ ಯಾವ ಅಧಿಕಾರದ ಆಧಾರದಲ್ಲಿ ಕಾರ್ಯಕ್ರಮ ನಡೆಯಿತು ಎಂದು ಪ್ರಶ್ನಿಸಿದರು.
25 ಲಕ್ಷ ರೂ. ಹಣ ಯಾರದು?
ಮೃತ ರಾಜಶೇಖರ್ ಕುಟುಂಬಕ್ಕೆ ಮೂಟೆಯಲ್ಲಿ ತೆಗೆದುಕೊಂಡು ಹೋಗಿ ನೀಡಲಾದ 25 ಲಕ್ಷ ರೂಪಾಯಿ ಯಾರ ಹಣ? ಅದು ಸರ್ಕಾರಿ ಹಣವೇ ಅಥವಾ ಖಾಸಗಿ ಹಣವೇ? ಈ ಬಗ್ಗೆ ಆದಾಯ ತೆರಿಗೆ ಇಲಾಖೆ ಏನು ಕ್ರಮ ಕೈಗೊಂಡಿದೆ ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.
ಸಿಬಿಐ ತನಿಖೆಗೆ ಒತ್ತಾಯ
ಈ ಪ್ರಕರಣದಲ್ಲಿ ಸಿಬಿಐ ತನಿಖೆ ಹೊರತುಪಡಿಸಿ ಬೇರೆ ಯಾವುದೇ ತನಿಖೆಯಿಂದ ನ್ಯಾಯ ಸಿಗುವುದಿಲ್ಲ ಎಂದು ಕುಮಾರಸ್ವಾಮಿ ಹೇಳಿದರು. ವಿಪಕ್ಷ ನಾಯಕರು ನ್ಯಾಯಾಂಗ ತನಿಖೆಗೆ ಒತ್ತಾಯಿಸುತ್ತಿರುವಾಗ, ಡಿಸಿಎಂ ಶಾಸಕರ ಬೆಂಬಲಕ್ಕೆ ನಿಂತಿರುವುದು ನಾಚಿಕೆಗೇಡಿನ ಸಂಗತಿ ಎಂದು ಟೀಕಿಸಿದರು.
“ರಾಜ್ಯ ಸರ್ಕಾರ ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದೆ. ಇತಿಹಾಸ ನಿಮ್ಮ ಆಡಳಿತವನ್ನು ಹೇಗೆ ದಾಖಲಿಸಲಿದೆ ಎಂಬುದನ್ನು ನೀವು ಯೋಚಿಸಬೇಕು” ಎಂದು ಕಾಂಗ್ರೆಸ್ ಸರ್ಕಾರಕ್ಕೆ ಕುಮಾರಸ್ವಾಮಿ ಎಚ್ಚರಿಕೆ ನೀಡಿದರು. ಬಳ್ಳಾರಿ ಗಲಭೆ ಪ್ರಕರಣದಲ್ಲಿ ಐಜಿ, ಎಎಸ್ಪಿ ಹಾಗೂ ಡಿವೈಎಸ್ಪಿಯನ್ನೂ ಅಮಾನತು ಮಾಡಬೇಕು ಎಂದು ಅವರು ಆಗ್ರಹಿಸಿದರು.
