ಹಿಂದೂ ದೇವರುಗಳಿಗೆ ಅವಮಾನ, ದೇಶ ವಿರೋಧಿ ಭಾವನೆ ಹರಡುವುದು ಮತ್ತು ಧಾರ್ಮಿಕ ವಿಚಾರಗಳ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಕಾರಣಕ್ಕೆ ಪತ್ರಕರ್ತೆ ರಾಣಾ ಅಯ್ಯೂಬ್ ವಿರುದ್ಧ ಪ್ರಕರಣ ದಾಖಲಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ನ್ಯಾಯಾಲಯ ಪುರಸ್ಕರಿಸಿದೆ.
ವಿಚಾರಣೆ ನಡೆಸಿದ ಕೋರ್ಟ್ ಪತ್ರಕರ್ತೆ ರಾಣಾ ಅಯ್ಯೂಬ್ ವಿರುದ್ಧ ಪ್ರಕರಣ ದಾಖಲಿಸುವಂತೆ ದೆಹಲಿ ಪೊಲೀಸರಿಗೆ ನಿರ್ದೇಶನ ನೀಡಿದೆ.
ಈ ಕುರಿತು ವಕೀಲರೊಬ್ಬರು ಅಯ್ಯೂಬ್ ವಿರುದ್ಧ ಪ್ರಕರಣ ದಾಖಲಿಸುವಂತೆ ಮನವಿ ಮಾಡಿ ಸಲ್ಲಿಸಿದ್ದ ಅರ್ಜಿಯನ್ನು ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಖ್ಯ ಮ್ಯಾಜಿಸ್ಟ್ರೇಟ್ (ಸಿಜೆಎಂ) ಹಿಮಾಂಶು ರಮಣ್ ಸಿಂಗ್ ಅವರು ವಿಚಾರಣೆ ನಡೆಸಿದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಅಯ್ಯೂಬ್ ಅವರ ವಿರುದ್ಧ ಐಪಿಸಿ ಸೆಕ್ಷನ್ 153 ಎ (ಧರ್ಮ, ಜನಾಂಗ, ಜನ್ಮಸ್ಥಳದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಪ್ರಚೋದಿಸುವಿಕೆ), 295 ಎ (ಉದ್ದೇಶಪೂರ್ವಕವಾಗಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವುದು), 505ರ (ಸಾರ್ವಜನಿಕವಾಗಿ ಕಿಡಿಗೇಡಿತನದ ಹೇಳಿಕೆಗಳನ್ನು ನೀಡುವುದು) ಅಡಿಯಲ್ಲಿ ಪ್ರಕರಣ ದಾಖಲಿಸಿ ನ್ಯಾಯಯುತವಾಗಿ ತನಿಖೆ ನಡೆಸುವಂತೆ ಪೊಲೀಸರಿಗೆ ರಮಣ್ ಸಿಂಗ್ ಅವರು ಸೂಚಿಸಿದ್ದಾರೆ.
ದೂರುದಾರರು ಪ್ರಸ್ತಾಪಿಸಿರುವ ವಿಚಾರಗಳನ್ನು ಆಧರಿಸಿ ಅಯ್ಯೂಬ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಮತ್ತು ನ್ಯಾಯಯುತವಾಗಿ ತನಿಖೆ ನಡೆಸುವಂತೆ ದಕ್ಷಿಣ ದೆಹಲಿಯ ಸೈಬರ್ ಪೊಲೀಸ್ ಠಾಣೆಯ ಎಸ್ಎಚ್ಒಗೆ ನ್ಯಾಯಾಧೀಶರು ಸೂಚಿಸಿದ್ದಾರೆ.