Tuesday, June 17, 2025

ಸತ್ಯ | ನ್ಯಾಯ |ಧರ್ಮ

ಪ್ರಜ್ವಲ್​​ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಲು ಕೋರ್ಟ್ ಆದೇಶ

ಬೆಂಗಳೂರು : ಮನೆ ಕೆಲಸದಾಕೆಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಜಾಮೀನು ಕೋರಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್‌ ಇಂದು ನಡೆಸಿದ್ದು, ಜೂ.20ಕ್ಕೆ ಮುಂದೂಡಿ ಆದೇಶಿಸಿದೆ. ಇದರಿಂದ ಕಳೆದ ಒಂದು ವರ್ಷದಿಂದ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಜೈಲು ಸೇರಿರುವ ಪ್ರಜ್ವಲ್​​​ಗೆ ಮತ್ತೆ ಆಘಾತವಾಗಿದೆ.

ನ್ಯಾಯಮೂರ್ತಿ ಎಸ್‌.ಆರ್‌.ಕೃಷ್ಣ ಕುಮಾರ್‌ ಅವರ ಏಕಸದಸ್ಯ ಪೀಠವು ಅರ್ಜಿ ವಿಚಾರಣೆ ನಡೆಸಿದ್ದು, ಪ್ರಜ್ವಲ್‌ ಪರ  ಹಿರಿಯ ವಕೀಲ ಪ್ರಭುಲಿಂಗ ನಾವದಗಿ ಅವರು ವಾದಿಸಿ, ಐದು ವರ್ಷಗಳ ಹಿಂದೆ ನಡೆದ ಘಟನೆಯಲ್ಲಿ ಪ್ರಜ್ವಲ್‌ ಸಿಲುಕಿ ಜೈಲು ಸೇರಿದ್ದಾರೆ. ಇದರಲ್ಲಿ ಅವರ ತಂದೆ ಹೆಚ್‌.ಡಿ.ರೇವಣ್ಣ ಅವರು ಮೊದಲನೇ ಆರೋಪಿಯಾಗಿದ್ದಾರೆ. ಪ್ರಜ್ವಲ್​​​​ ನ್ನನ್ನು ಎರಡನೇ ಆರೋಪಿ ಮಾಡಲಾಗಿದೆ.

ಲೈಂಗಿಕ ಕಿರುಕುಳ ಆರೋಪದ ಬಳಿಕ ಅತ್ಯಾಚಾರ ಆರೋಪ ಮಾಡಲಾಗಿದೆ. ಒಂದು ಪ್ರಕರಣದಲ್ಲಿ ಮಾತ್ರ ಪ್ರಜ್ವಲ್‌ ಅವರನ್ನು ವಶಕ್ಕೆ ಪಡೆಯಲಾಗಿದೆ. 158 ಸಾಕ್ಷಿಗಳನ್ನು ಉಲ್ಲೇಖಿಸಲಾಗಿದೆ. ಇದು ಸದ್ಯಕ್ಕೆ ಮುಗಿಯುವ ಸಾಧ್ಯತೆ ಇಲ್ಲ. ಆಕ್ಷೇಪಣೆ ಸಲ್ಲಿಸಿದ್ದೇವೆ ಎಂದು ವಾದಿಸಿದರು.

ಪ್ರತಿವಾದಿಸಲು ವಿಶೇಷ ಸರ್ಕಾರಿ ಅಭಿಯೋಜಕ ಬಿ ಎನ್‌ ಜಗದೀಶ್‌ ಅವರು ಕಾಲಾವಕಾಶ ಕೋರಿದರು. ಪ್ರಜ್ವಲ್‌ ವಿರುದ್ಧ ನಾಲ್ಕು ಅತ್ಯಾಚಾರ ಪ್ರಕರಣ ದಾಖಲಾಗಿದ್ದು, ಎರಡು ಪ್ರಕರಣದಲ್ಲಿ ವಿಚಾರಣೆ ಆರಂಭವಾಗಿದ್ದು, ಪ್ರಾಥಮಿಕ ಹಂತದಲ್ಲಿವೆ. ಹೀಗಾಗಿ ವಾದಿಸಲು ಕಾಲಾವಕಾಶ ನೀಡಬೇಕು ಎಂದು ಪೀಠಕ್ಕೆ ಕೋರಿದರು. ವಾದ-ಪ್ರತಿವಾದ ಆಲಿಸಿರುವ ಕೋರ್ಟ್​ ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಿತು.

ಪ್ರಜ್ವಲ್  ಜರ್ಮನಿಯಿಂದ ರಾಜ್ಯಕ್ಕೆ ಮರಳಿದ ನಂತರ ಲೈಂಗಿಕ ದೌರ್ಜನ್ಯದ ಆರೋಪದಡಿ ಕಳೆದ ವರ್ಷದ ಮೇ 31 ರಿಂದ ನ್ಯಾಯಾಂಗ ಬಂಧನದಲ್ಲಿದ್ದಾರೆ. ಪ್ರಜ್ವಲ್ ವಿರುದ್ಧ IPC ಸೆಕ್ಷನ್ 376, 376 (2) (K), 354, 354 (A) ಮತ್ತು 354 (B) ಅಡಿ ಪ್ರಕರಣ ದಾಖಲಿಸಲಾಗಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page