ನವದೆಹಲಿ: ಭಾರತದಲ್ಲಿ ಎಚ್ಎಂಪಿವಿ ವೈರಸ್ ಪತ್ತೆಯಾದ ಬಳಿಕ ಕೇಂದ್ರ ಆರೋಗ್ಯ ಸಚಿವಾಲಯ ಎಲ್ಲ ರಾಜ್ಯಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ಮುನ್ನೆಚ್ಚರಿಕೆ ಕ್ರಮಗಳ ಕುರಿತು ಚರ್ಚೆ ನಡೆಸಿದೆ. ಉಸಿರಾಟದ ಸೋಂಕಿನ ಕುರಿತು ಜನರಲ್ಲಿ ಜಾಗೃತಿ ಮೂಡಿಸಿ, ಸೋಂಕು ಹರಡುವಿಕೆ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ರಾಜ್ಯಗಳಿಗೆ ಸೂಚನೆ ನೀಡಿದೆ.
ಕೇಂದ್ರ ಆರೋಗ್ಯ ಕಾರ್ಯದರ್ಶಿ ಪುಣ್ಯ ಸಲಿಲ ಶ್ರೀವಾಸ್ತವ ಅವರು ಸೋಮವಾರ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಅಧಿಕಾರಿಗಳೊಂದಿಗೆ ವರ್ಚುವಲ್ ಸಭೆ ನಡೆಸಿದರು. ಸಭೆಯಲ್ಲಿ ಐಸಿಎಂಆರ್, ರಾಷ್ಟ್ರೀಯ ವೈರಾಲಜಿ ವಿಭಾಗದ ವೈದ್ಯರು ಸೇರಿ ಹಲವರು ಉಪಸ್ಥಿತರಿದ್ದರು.
ದೇಶದಲ್ಲಿ ಕರ್ನಾಟಕ, ತಮಿಳುನಾಡು ಮತ್ತು ಗುಜರಾತ್ನಲ್ಲಿ ಈವರೆಗೆ ಐದು ಎಚ್ಎಂಪಿ ವೈರಸ್ ಪ್ರಕರಣಗಳು ವರದಿಯಾಗಿವೆ. ಇದು ಎಲ್ಲಾ ವಯಸ್ಸಿನವರಲ್ಲಿ ಕಾಣಿಸಿಕೊಳ್ಳುವ ಸಾಮಾನ್ಯ ಉಸಿರಾಟದ ಸೋಂಕಾಗಿದ್ದು, ಭಯ ಪಡುವ ಅಗತ್ಯವಿಲ್ಲ. ಸೋಂಕಿನ ಪ್ರಕರಣಗಳೂ ಅನಿಯಂತ್ರಿತವಾಗಿ ಏರಿಕೆಯಾಗುತ್ತಿಲ್ಲ. ಆದರೆ ಎಲ್ಲಾ ರಾಜ್ಯಗಳಲ್ಲಿ ಜನರಲ್ಲಿ ಜಾಗೃತಿ ಮೂಡಿಸಿ, ಪರಿಸ್ಥಿತಿಯನ್ನು ಅವಲೋಕಿಸುವ ಅಗತ್ಯವಿದೆ ಎಂದು ಸಲಹೆ ನೀಡಿದ್ದಾರೆ.
ಸಭೆಯ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ದೇಶವು ಯಾವುದೇ ಸಂಭಾವ್ಯ ಉಲ್ಬಣವನ್ನು ಎದುರಿಸಲು ಸಿದ್ಧವಿದೆ ಎಂದು ಪುಣ್ಯಾ ತಿಳಿಸಿದರು.