ಬೆಂಗಳೂರು: ದೆಹಲಿ ಪ್ರವಾಸ ಮುಗಿಸಿ ಮರಳಿದ ಮರುದಿನವೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಬೆಂಗಳೂರಿನ ಅವರ ನಿವಾಸದಲ್ಲಿ ಗುರುವಾರ ಭೇಟಿ ಮಾಡಿ ಮಾತುಕತೆ ನಡೆಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವಿನ ಅಧಿಕಾರ ಹಂಚಿಕೆಯ ವಿವಾದ ಸಾರ್ವಜನಿಕವಾಗಿ ಚರ್ಚೆಯಾಗುತ್ತಿರುವ ಈ ಸಮಯದಲ್ಲಿ ಈ ಭೇಟಿಯು ತೀವ್ರ ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ.
ಭೇಟಿಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ಖರ್ಗೆ ಅವರೊಂದಿಗೆ ಯಾವುದೇ ರಾಜಕೀಯ ಅಥವಾ ನಾಯಕತ್ವದ ವಿಚಾರವಾಗಿ ಚರ್ಚಿಸಿಲ್ಲ ಎಂದು ಸ್ಪಷ್ಟಪಡಿಸಿದರು.
ಡಿಸೆಂಬರ್ 27 ರಂದು ದೆಹಲಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿ (CWC) ಸಭೆಯ ಹಿನ್ನೆಲೆಯಲ್ಲಿ, ಕೇಂದ್ರ ಸರ್ಕಾರದ ಹೊಸ ‘ವಿಬಿ-ಗ್ರಾಮ್ ಜಿ’ (VB-GRAM G) ಕಾಯ್ದೆಯ ವಿರುದ್ಧ ಪಕ್ಷವು ಹಮ್ಮಿಕೊಳ್ಳಲಿರುವ ಹೋರಾಟದ ಕುರಿತು ಕೆಲವು ಮಾಹಿತಿಗಳನ್ನು ನೀಡಲು ಈ ಭೇಟಿ ಮಾಡಿದ್ದಾಗಿ ಅವರು ತಿಳಿಸಿದರು.
“ನಾನು ಪಕ್ಷದ ಸಾಮಾನ್ಯ ಕಾರ್ಯಕರ್ತ”:ದೆಹಲಿಯಲ್ಲಿ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲು ಸಾಧ್ಯವಾಗದಿದ್ದಾಗ ಶಿವಕುಮಾರ್ ಅವರು “ನಾನು ಯಾವುದೇ ಅಧಿಕಾರವಿಲ್ಲದೆ ಕೇವಲ ಪಕ್ಷದ ಕಾರ್ಯಕರ್ತನಾಗಿ ಇರಲು ಬಯಸುತ್ತೇನೆ” ಎಂದು ಹೇಳಿದ್ದು ಅವರ ಅಸಮಾಧಾನದ ಸೂಚನೆ ಎಂದು ವಿಶ್ಲೇಷಿಸಲಾಗಿತ್ತು.
ಈ ಕುರಿತು ಪ್ರತಿಕ್ರಿಯಿಸಿದ ಅವರು, “ನಾನು ಲೈಫ್ ಟೈಮ್ ಕಾರ್ಯಕರ್ತ. ಅಧಿಕಾರ ಇರಲಿ, ಬಿಡಲಿ ನಾನು ಪಕ್ಷಕ್ಕಾಗಿ ಕೆಲಸ ಮಾಡುವವನು. ನಾನು ಕೇವಲ ವೇದಿಕೆಯಲ್ಲಿ ಕುಳಿತು ಭಾಷಣ ಮಾಡಿಲ್ಲ; ಪಕ್ಷದ ಬಾವುಟ ಕಟ್ಟಿದ್ದೇನೆ, ಪೋಸ್ಟರ್ ಅಂಟಿಸಿದ್ದೇನೆ ಮತ್ತು ಕಸವನ್ನೂ ಗುಡಿಸಿದ್ದೇನೆ” ಎಂದು ತಮ್ಮ ನಿಷ್ಠೆಯನ್ನು ಪುನರುಚ್ಚರಿಸಿದರು.
ದೆಹಲಿಯಲ್ಲಿ ನಡೆಯುವ ಸಿಡಬ್ಲ್ಯೂಸಿ ಸಭೆಗೆ ತಾವು ಹೋಗುತ್ತಿಲ್ಲ ಎಂದು ತಿಳಿಸಿದ ಅವರು, “ಮೂವರು ಮುಖ್ಯಮಂತ್ರಿಗಳನ್ನು ಆಹ್ವಾನಿಸಲಾಗಿದೆ, ಆದರೆ ಉಪಮುಖ್ಯಮಂತ್ರಿಗಳನ್ನು ಕರೆದಿಲ್ಲ. ಕೆಪಿಸಿಸಿ ಅಧ್ಯಕ್ಷರನ್ನು ವಿಸ್ತರಿತ ಸಭೆಗಳಿಗೆ ಮಾತ್ರ ಕರೆಯಲಾಗುತ್ತದೆ. ಹೈಕಮಾಂಡ್ ಕರೆದರೆ ಮಾತ್ರ ನಾನು ದೆಹಲಿಗೆ ಹೋಗುತ್ತೇನೆ” ಎಂದು ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೂರ್ಣಾವಧಿ ಸಿಎಂ ಆಗಿ ಮುಂದುವರಿಯುವುದಾಗಿ ವಿಧಾನಸಭೆಯಲ್ಲಿ ಘೋಷಿಸಿದ ನಂತರ, ಶಿವಕುಮಾರ್ ಅವರ ಈ ನಡೆಗಳು ಪಕ್ಷದ ಹೈಕಮಾಂಡ್ ಮೇಲೆ ಒತ್ತಡ ಹೇರುವ ತಂತ್ರ ಎಂದು ರಾಜಕೀಯ ವಲಯದಲ್ಲಿ ವಿಶ್ಲೇಷಿಸಲಾಗುತ್ತಿದೆ.
