Saturday, May 31, 2025

ಸತ್ಯ | ನ್ಯಾಯ |ಧರ್ಮ

ಕೋಮು ಗಲಭೆಗಳು ನಡೆಯದಂತೆ ನೋಡಿಕೊಳ್ಳುವುದು ಜಿಲ್ಲಾಧಿಕಾರಿ ಹಾಗೂ ಎಸ್‌ಪಿ ಜವಾಬ್ದಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಹಾಳುಮಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ನಿಮ್ಮ ವಿರುದ್ಧವೇ ಕ್ರಮ ಕೈಗೊಳ್ಳಬೇಕಾಗುತ್ತದೆ. ಶಾಂತಿಭಂಗವಾದ ಮೇಲೆ ಪೋಸ್ಟ್‌ ಮಾರ್ಟಮ್‌ ಮಾಡುವ ಬದಲು, ಶಾಂತಿಭಂಗ ಆಗುವ ಮೊದಲೇ ಕ್ರಮ ಕೈಗೊಳ್ಳಲು ನಿಮಗೇನು ಸಮಸ್ಯೆ?

ಕಾರು, ಬಂಗಲೆ ಮತ್ತಿತರ ಸವಲತ್ತುಗಳು ಕೊಟ್ಟಿರುವುದು ತೆರಿಗೆ ಹಣದಲ್ಲಿ ಎನ್ನುವುದು ನೆನಪಿರಲಿ… – ಇದು ಜಿಲ್ಲಾಧಿಕಾರಿಗಳು, ಸಿಇಒಗಳು ಸಹಿತ ಐಎಎಸ್‌ ಅಧಿಕಾರಿಗಳ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಟಿ ಬೀಸಿದ ಪರಿ.

ವಿಧಾನಸೌಧದಲ್ಲಿ ಶುಕ್ರವಾರ ಜರಗಿದ ಎಲ್ಲ ಜಿಲ್ಲಾಧಿಕಾರಿಗಳು ಮತ್ತು ಸಿಇಒಗಳೊಂದಿಗೆ ರಾಜ್ಯದ ಪ್ರಗತಿ ಪರಿಶೀಲನಾ ಸಭೆ ಆರಂಭದಲ್ಲೇ ಕರಾವಳಿಯಲ್ಲಿ ಮರುಕಳಿಸುತ್ತಿರುವ ಕೋಮುಗಲಭೆಗಳನ್ನು ಉಲ್ಲೇಖಿಸದೆ ರಾಜ್ಯದ ಕಾನೂನು-ಸುವ್ಯವಸ್ಥೆಗೆ ಭಂಗ ಉಂಟಾಗುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ ಸಿಎಂ, ಇದಕ್ಕೆ ನೇರ ಹೊಣೆ ಡಿಸಿ-ಎಸ್ಪಿಗಳೇ ಆಗಲಿದ್ದಾರೆ ಎಂದು ಎಚ್ಚರಿಕೆ ನೀಡಿದರು.

ದುಷ್ಟ ಶಕ್ತಿಗಳು ಇತ್ತೀಚೆಗೆ ತಲೆ ಎತ್ತುತ್ತಿದ್ದು, ಅವುಗಳನ್ನು ಮೊಳಕೆಯಲ್ಲೇ ಚಿವುಟಿ ಹಾಕುವುದು ಡಿಸಿ, ಸಿಇಒ ಮತ್ತು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ ಜವಾಬ್ದಾರಿ ಅಲ್ಲವೇ? ಜಿಲ್ಲಾ ಮಟ್ಟದ ಶಾಂತಿ ಸಮಿತಿ ಅಧ್ಯಕ್ಷರು ಜಿಲ್ಲಾಧಿಕಾರಿಗಳೇ ಆಗಿರುತ್ತಾರೆ. ಶಾಂತಿ ಕಾಪಾಡಲು ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು. ಅದನ್ನು ಬಿಟ್ಟು ಶಾಂತಿಭಂಗ ಆದ ಮೇಲೆ ಪೋಸ್ಟ್‌ ಮಾರ್ಟಮ್‌ ಮಾಡುತ್ತಾ ಕುಳಿತುಕೊಳ್ಳಬಾರದು ಎಂದು ಖಡಕ್‌ ಎಚ್ಚರಿಕೆ ನೀಡಿದರು.

ಸಂವಿಧಾನ ವಿರೋಧಿ, ಜನವಿರೋಧಿ ದುಷ್ಟಶಕ್ತಿಗಳು ಕೆಲವು ಕಡೆ ಬಾಲ ಬಿಚ್ಚುತ್ತಿವೆ. ಅವರು ಎಷ್ಟೇ ಪ್ರಭಾವಿ ಆಗಿರಲಿ, ಕಾನೂನು-ಸುವ್ಯವಸ್ಥೆ ಹಾಳುಮಾಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ನಾವು ನಿಮ್ಮ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಗುಡುಗಿದ ಸಿದ್ದರಾಮಯ್ಯ, “ಜನರ ತೆರಿಗೆ ದುಡ್ಡಿನಲ್ಲಿ ಆಡಳಿತ ನಡೆಸುತ್ತಿದ್ದೇವೆ. ನಿಮಗೆ ಕಾರು, ಮನೆ ಸೇರಿ ಎಲ್ಲ ಸವಲತ್ತುಗಳನ್ನು ನೀಡಲಾಗಿದೆ. ಅದನ್ನು ನೀವು ಅನುಭವಿಸುತ್ತಿರುವುದು ಜನರ ತೆರಿಗೆ ಹಣದಿಂದ ಎನ್ನುವುದನ್ನು ಮರೆಯಬಾರದು. ಆದ್ದರಿಂದ ಜನಪರ ಧೋರಣೆಯಲ್ಲಿ ಕೆಲಸ ಮಾಡಿ’ ಎಂದು ಚಾಟಿ ಬೀಸಿದರು.

ಡಿಸಿ-ಎಸ್ಪಿಗಳೇ ಹೊಣೆ
ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿಗಳು ಮತ್ತು ಸಿಇಒಗಳು ತಮ್ಮ ಅಹಂ ಬದಿಗೊತ್ತಿ ಸಮನ್ವಯದಿಂದ ಕೆಲಸ ಮಾಡಿದರೆ ಮಾತ್ರ ರಾಜ್ಯದ ಸಮಗ್ರ ಅಭಿವೃದ್ಧಿ ಸಾಧ್ಯ ಎಂದು ತೀಕ್ಷ್ಣವಾಗಿ ಹೇಳಿದ ಸಿಎಂ, ಕಾನೂನು ಸುವ್ಯವಸ್ಥೆ ಹದಗೆಟ್ಟರೆ ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ. ಇವೆರಡರ ನಡುವೆ ನೇರ ಸಂಬಂಧವಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟರೆ, ಅಭಿವೃದ್ಧಿ ಕುಂಠಿತವಾದಂತೆ. ಇದಕ್ಕೆ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ನೇರ ಹೊಣೆ ಎಂದು ಎಚ್ಚರಿಸಿದರು.

ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಕೆಲಸ ಮಾಡುವವರ ವಿರುದ್ಧ ಮತ್ತು ಜನಪರ ಆಶಯಗಳಿಗೆ ಸ್ಪಂದಿಸದಿದ್ದರೆ ಅವರ ವಿರುದ್ಧ ನಾವು ಕ್ರಮ ಕೈಗೊಳ್ಳಬೇಕಾಗುತ್ತದೆ. ನೀವೆಲ್ಲ ಸಂವಿಧಾನ ಓದಿದ್ದೀರಿ, ಅದರ ಆಶಯಗಳಿಗೆ, ಧ್ಯೇಯೋದ್ದೇಶಗಳಿಗೆ ಬದ್ಧರಾಗಿದ್ದೀರಿ ಎಂದು ನಂಬಿದ್ದೇನೆ. ಇದನ್ನು ಕಾರ್ಯರೂಪಕ್ಕೆ ತರುವುದರಲ್ಲಿ ವಿಫ‌ಲರಾದವರ ವಿರುದ್ಧ ನಾನು ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲು ನಿರ್ಧಿರಿಸಿದ್ದೇನೆ.

ರಾಜಿ ಇಲ್ಲ; ಕ್ರಮ ಅನಿವಾರ್ಯ
ಹಿಂದಿನ ಸಭೆಯಲ್ಲಿ ನೀಡಿದ ಸೂಚನೆಗಳು, ತೆಗೆದುಕೊಂಡ ನಿರ್ಣಯಗಳಲ್ಲಿ ಕೆಲವು ಇಲಾಖೆಗಳು ಶೇ. 100ರಷ್ಟು ಪ್ರಗತಿ ತೋರಿಸಿಲ್ಲ. ಇದನ್ನು ಸಹಿಸಲು ಸಾಧ್ಯವಿಲ್ಲ. ಈ ವಿಚಾರದಲ್ಲಿ ರಾಜಿ ಇಲ್ಲ. ಜನರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ಮೇಲೆ ನಿಷ್ಠುರವಾಗಿ ಕ್ರಮ ಕೈಗೊಳ್ಳುವುದು ಅನಿವಾರ್ಯ ಎಂದು ಎಚ್ಚರಿಸಿದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page