Home ರಾಜ್ಯ ರಾಜ್ಯದ ಮದರಸಾಗಳಲ್ಲಿ ವಾರಕ್ಕೆ ಎರಡು ದಿನ ಕನ್ನಡ ಕಲಿಕೆಗೆ ನಿರ್ಧಾರ: ಪುರುಷೋತ್ತಮ ಬಿಳಿಮಲೆ

ರಾಜ್ಯದ ಮದರಸಾಗಳಲ್ಲಿ ವಾರಕ್ಕೆ ಎರಡು ದಿನ ಕನ್ನಡ ಕಲಿಕೆಗೆ ನಿರ್ಧಾರ: ಪುರುಷೋತ್ತಮ ಬಿಳಿಮಲೆ

0

ಬೀದರ್‌: ಮುಸ್ಲಿಂ ಸಮುದಾಯದಿಂದ ಬೇಡಿಕೆ ಬಂದಿರುವುದರಿಂದ ಮದರಸಾಗಳಲ್ಲಿ ವಾರಕ್ಕೆ ಎರಡು ದಿನ ಕನ್ನಡ ಕಲಿಸುವ ಯೋಜನೆ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ತಿಳಿಸಿದ್ದಾರೆ.

ನಗರದಲ್ಲಿ ಸೋಮವಾರ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಾಯೋಗಿಕವಾಗಿ ರಾಜ್ಯದ ಬೆಂಗಳೂರು, ವಿಜಯಪುರ, ರಾಯಚೂರು ಹಾಗೂ ಕಲಬುರಗಿಯ ಕೆಲ ಆಯ್ದ ಮದರಸಾಗಳಲ್ಲಿ ಶುರು ಮಾಡಲಾಗುವುದು. ಅದರ ಸಾಧಕ–ಬಾಧಕ ನೋಡಿಕೊಂಡು ರಾಜ್ಯದ ಇತರೆ ಕಡೆಗಳಲ್ಲಿಯೂ ವಿಸ್ತರಿಸುವ ಯೋಚನೆ ಇದೆ. ಭಾಷೆಯ ಅಂತರ ದೂರ ಮಾಡುವುದು ಇದರ ಮುಖ್ಯ ಉದ್ದೇಶ. ಅಲ್ಪಸಂಖ್ಯಾತ ಮುಸ್ಲಿಮರಿಂದಲೂ ಇದಕ್ಕಾಗಿ ಬೇಡಿಕೆ ಬಂದಿತ್ತು ಎಂದರು.

ಈ ಸಂಬಂಧ ಮದರಸಾಗಳನ್ನು ನಡೆಸುತ್ತಿರುವ ಕೆಲ ವಿದ್ವಾಂಸರೊಂದಿಗೆ ಚರ್ಚಿಸಿದ್ದೇನೆ. ಯಾವ ವಿಷಯ ಕಲಿಸಬೇಕೆಂಬ ಗೊಂದಲ ಇಲ್ಲ. ಏಕೆಂದರೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದಲೇ ಪಠ್ಯ ಸಿದ್ಧಪಡಿಸಲಾಗಿದೆ ಎಂದು ತಿಳಿಸಿದರು.

ಶಾಲೆಗಳ ಅಭಿವೃದ್ಧಿ ಮಾಡಲಿಕ್ಕಾಗದ ಶಾಸಕರು ರಾಜಿನಾಮೆ ನೀಡಲಿ: ಪ್ರತಿಯೊಂದು ಕ್ಷೇತ್ರದ ಶಾಸಕರು ಅವರ ವ್ಯಾಪ್ತಿಯ ಕನಿಷ್ಠ ಐದು ಶಾಲೆಗಳನ್ನು ದತ್ತು ತೆಗೆದುಕೊಂಡು ಅಭಿವೃದ್ಧಿ ಪಡಿಸಬೇಕು. ಇಲ್ಲದಿದ್ದರೆ ರಾಜಿನಾಮೆ ನೀಡಬೇಕು ಎಂದು ಅವರು ಒತ್ತಾಯಿಸಿದರು.

ಈ ಸಂಬಂಧ ಶೀಘ್ರದಲ್ಲೇ ಎಲ್ಲ ಶಾಸಕರನ್ನು ಭೇಟಿ ಮಾಡಿ, ಅವರಿಗೆ ಮನವಿ ಪತ್ರ ಸಲ್ಲಿಸಲಾಗುವುದು. ಯಾವ ಶಾಸಕರಿಗೆ ಈ ಕೆಲಸ ಮಾಡಲು ಆಗುವುದಿಲ್ಲವೋ ಅಂತಹವರು ಅವರ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು. ಅಂತಹ ಶಾಸಕರನ್ನು ಮಾಧ್ಯಮದವರು ಕೂಡ ಪ್ರಶ್ನಿಸಬೇಕು ಎಂದು ಆಗ್ರಹಿಸಿದರು.

ಮಹಾರಾಷ್ಟ್ರ ಮತ್ತು ಕೇರಳದಲ್ಲಿ ಅವರ ಮಾತೃಭಾಷೆಯಲ್ಲಿ ಓದಿದವರಿಗೆ ಶಿಕ್ಷಣದಲ್ಲಿ ಶೇ 5ರಷ್ಟು ಮೀಸಲಾತಿ ಕಲ್ಪಿಸಲಾಗಿದೆ. ಅದೇ ನೀತಿ ನಮ್ಮ ರಾಜ್ಯದಲ್ಲೂ ಜಾರಿಗೆ ತರಬೇಕು. ಖಾಸಗಿ ವಲಯದ ಉದ್ಯೋಗಗಳಲ್ಲಿ ಶೇ 80ರಷ್ಟು ಉದ್ಯೋಗಗಳು ಕನ್ನಡಿಗರಿಗೆ ಮೀಸಲಿಡಬೇಕು. ಈ ಸಂಬಂಧ ಸರ್ಕಾರಕ್ಕೆ ಪತ್ರ ಬರೆಯಲಾಗುವುದು ಎಂದು ತಿಳಿಸಿದರು.

ಪ್ರಾಧಿಕಾರದ ಕಾರ್ಯದರ್ಶಿ ಸಂತೋಷ ಹಾನಗಲ್‌, ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಶಿಂಧೆ, ಸುದ್ದಿಗೋಷ್ಟಿಯಲ್ಲಿ ಉಪಸ್ಥಿತರಿದ್ದರು.

You cannot copy content of this page

Exit mobile version