ದೆಹಲಿ: ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ಸೂಕ್ತ ನಿಯಮಗಳನ್ನು ಪಾಲಿಸದೆ ರಾಜೇಂದರ್ ನಗರ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯ ಚುನಾವಣಾಧಿಕಾರಿಗಳ (CEO) ಕಚೇರಿ ಸ್ಪಷ್ಟನೆ ನೀಡಿದೆ. ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ತೆಗೆದುಹಾಕುವ ಪ್ರಕ್ರಿಯೆಗಳು ಕಾನೂನುಬದ್ಧ ನಿಯಮಗಳ ಅಡಿಯಲ್ಲೇ ನಡೆಯುತ್ತಿವೆ ಎಂದು ಚುನಾವಣಾ ಪ್ರಾಧಿಕಾರ ತಿಳಿಸಿದೆ.
ಆಮ್ ಆದ್ಮಿ ಪಕ್ಷವು ಸೆಪ್ಟೆಂಬರ್ 8 ರಂದು ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಆಕ್ಷೇಪ ವ್ಯಕ್ತಪಡಿಸಿತ್ತು. ಇದಕ್ಕೆ ಪ್ರತಿಕ್ರಿಯಿಸಿರುವ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ, ಜನಪ್ರತಿನಿಧಿ ಕಾಯ್ದೆ 1950, ಮತದಾರರ ನೋಂದಣಿ ನಿಯಮಗಳು 1960 ಹಾಗೂ ಚುನಾವಣಾ ಆಯೋಗದ ಮಾರ್ಗಸೂಚಿಗಳಿಗೆ ಅನುಗುಣವಾಗಿ ಮಾತ್ರ ನಮೂನೆ-6, 7 ಮತ್ತು 8 ರ ಮೂಲಕ ಇಂತಹ ಅರ್ಜಿಗಳನ್ನು ವಿಲೇವಾರಿ ಮಾಡಲಾಗುತ್ತದೆ ಎಂದು ಸ್ಪಷ್ಟಪಡಿಸಿದೆ.
ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ದೆಹಲಿಯ ಕರಡು ಮತದಾರರ ಪಟ್ಟಿಯನ್ನು ಆಗಸ್ಟ್ 31 ರಂದು ಪ್ರಕಟಿಸಲಾಗಿದ್ದು, ಆಯೋಗದ ಅಧಿಕೃತ ಜಾಲತಾಣದಲ್ಲಿ ಸಾರ್ವಜನಿಕರ ವೀಕ್ಷಣೆಗೆ ಲಭ್ಯವಿದೆ. ಯಾವುದೇ ಅರ್ಹ ಮತದಾರರು ಈ ಹಿಂದೆ ನಮೂನೆ ಸಲ್ಲಿಸಲು ಸಾಧ್ಯವಾಗದಿದ್ದರೆ, ಸೆಪ್ಟೆಂಬರ್ 30 ರವರೆಗೆ ನಿಗದಿತ ಸ್ವಯಂಘೋಷಣೆಯೊಂದಿಗೆ ನಮೂನೆ-6 ಸಲ್ಲಿಸಿ ಹೆಸರು ಸೇರ್ಪಡೆಗೆ ಕೋರಬಹುದು. ಆನ್ಲೈನ್ ಮೂಲಕವೂ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕರಡು ಪಟ್ಟಿ ಪ್ರಕಟಣೆಯ ನಂತರ ಬಂದಿರುವ ಎಲ್ಲಾ ಹಕ್ಕು ಮಂಡನೆ ಮತ್ತು ಆಕ್ಷೇಪಣೆಗಳನ್ನು ಪರಿಶೀಲಿಸಲಾಗುತ್ತಿದ್ದು, ನವೆಂಬರ್ 4, 2026 ರಂದು ಅಂತಿಮ ಪೂರಕ ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು ಎಂದು ಚುನಾವಣಾಧಿಕಾರಿಗಳ ಕಚೇರಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.
