ದೆಹಲಿ: ದೆಹಲಿ ಜಲ ಮಂಡಳಿ (ಡಿಜೆಬಿ) ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧಿತರಾಗಿದ್ದ ಆಮ್ ಆದ್ಮಿ ಪಾರ್ಟಿ (ಆಪ್) ಹಿರಿಯ ನಾಯಕ ಹಾಗೂ ಮಾಜಿ ಸಚಿವ ಸತ್ಯೇಂದ್ರ ಜೈನ್ಗೆ ದೆಹಲಿಯ ರೌಸ್ ಅವೆನ್ಯೂ ಕೋರ್ಟ್ ಗುರುವಾರ ಜಾಮೀನು ಮಂಜೂರು ಮಾಡಿದ್ದು, ಅವರಿಗೆ ದೊಡ್ಡ ಮಟ್ಟದ ನಿರಾಳತೆ ದೊರೆತಿದೆ.
₹೨ ಲಕ್ಷ ಮೊತ್ತದ ಶ್ಯೂರಿಟಿ ಬಾಂಡ್ ಹಾಗೂ ಇಬ್ಬರ ಸಾಕ್ಷಿ ಸಹಿಗಳನ್ನು ಷರತ್ತಾಗಿ ವಿಧಿಸಿ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ (ಪಿಸಿ ಆಕ್ಟ್) ವಿಶೇಷ ನ್ಯಾಯಾಧೀಶರು ಈ ಜಾಮೀನು ಆದೇಶ ಹೊರಡಿಸಿದ್ದಾರೆ. ಅರವಿಂದ್ ಕೇಜ್ರಿವಾಲ್ ನೇತೃತ್ವದ ಈ ಹಿಂದಿನ ಸರ್ಕಾರದಲ್ಲಿ ಸಚಿವರಾಗಿದ್ದ ಸಂದರ್ಭದಲ್ಲಿ, ಜಲ ಮಂಡಳಿಯ ಕೊಳಚೆ ನೀರು ಸಂಸ್ಕರಣಾ ಘಟಕದ (ಎಸ್ಟಿಪಿ) ಟೆಂಡರ್ ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ನಡೆದಿದೆ ಎಂಬ ಆರೋಪದಡಿ ಆಗಸ್ಟ್ ೧೮ರಂದು ದೆಹಲಿ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಸತ್ಯೇಂದ್ರ ಜೈನ್ ಅವರನ್ನು ಬಂಧಿಸಿತ್ತು. ಈ ಪ್ರಕರಣದಲ್ಲಿ ಜೈನ್ ಅವರೊಂದಿಗೆ ಡಿಜೆಬಿ ಮಾಜಿ ಸಿಇಒ ಉದಿತ್ ಪ್ರಕಾಶ್ ರಾಯ್, ಮಾಜಿ ಕನ್ಸಲ್ಟೆಂಟ್ ಅಂಕಿತ್ ಶ್ರೀವಾಸ್ತವ ಸೇರಿದಂತೆ ಇಬ್ಬರನ್ನು ಎಸಿಬಿ ವಶಕ್ಕೆ ಪಡೆದಿತ್ತು.
ತಮ್ಮ ಬಂಧನವನ್ನು ಪ್ರಶ್ನಿಸಿ ಮತ್ತು ಜಾಮೀನು ಕೋರಿ ಜೈನ್ ರೌಸ್ ಅವೆನ್ಯೂ ನ್ಯಾಯಾಲಯದ ಮೊರೆ ಹೋಗಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಇದೀಗ ಅವರಿಗೆ ಷರತ್ತುಬದ್ಧ ಜಾಮೀನು ನೀಡಿದೆ. ಈ ಬಂಧನ ರಾಜಕೀಯ ಪ್ರೇರಿತ ಪಿತೂರಿಯ ಭಾಗ ಎಂದು ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಈ ಹಿಂದೆ ವಾಗ್ದಾಳಿ ನಡೆಸಿದ್ದು, ಪ್ರಕರಣವು ಆಪ್ ಮತ್ತು ಬಿಜೆಪಿ ನಡುವೆ ತೀವ್ರ ರಾಜಕೀಯ ಸಮರಕ್ಕೆ ಎಡೆಮಾಡಿಕೊಟ್ಟಿತ್ತು.
