Home ಬೆಂಗಳೂರು ಇಷ್ಟೊಂದು ಜನ ಬರುತ್ತಾರೆಂದು ಊಹಿಸಿರಲಿಲ್ಲ: ಸಿಎಂ ಸಿದ್ದರಾಮಯ್ಯ

ಇಷ್ಟೊಂದು ಜನ ಬರುತ್ತಾರೆಂದು ಊಹಿಸಿರಲಿಲ್ಲ: ಸಿಎಂ ಸಿದ್ದರಾಮಯ್ಯ

0

ಬೆಂಗಳೂರು, ಜೂನ್ 5, 2025: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ವಿಜಯೋತ್ಸವದ ಸಂದರ್ಭದಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ಘಟನೆಯಲ್ಲಿ 11 ಮಂದಿ ಮೃತಪಟ್ಟಿರುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ವಿಷಾದ ವ್ಯಕ್ತಪಡಿಸಿದ್ದಾರೆ.

ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಾಮರ್ಶಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಕಾಲ್ತುಳಿತ ಘಟನೆಯು ದುರದೃಷ್ಟಕರ ಎಂದು ಹೇಳಿದ್ದಾರೆ. ಮೃತರ ಕುಟುಂಬಗಳಿಗೆ ತಮ್ಮ ಸಂತಾಪವನ್ನು ಸೂಚಿಸಿದ ಸಿಎಂ, ಈ ಘಟನೆಯ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವುದಾಗಿ ತಿಳಿಸಿದ್ದಾರೆ. ತನಿಖಾ ಆಯೋಗಕ್ಕೆ 15 ದಿನಗಳ ಗಡುವು ನೀಡಲಾಗಿದೆ ಎಂದು ಅವರು ಹೇಳಿದರು.

ವಿಜಯೋತ್ಸವಕ್ಕೆ ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿಗಳು ಬರುತ್ತಾರೆ ಎಂದು ಊಹಿಸಿರಲಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಕ್ರೀಡಾಂಗಣದಲ್ಲಿ ಕುಳಿತುಕೊಳ್ಳಬಹುದಾದಷ್ಟು ಅಥವಾ ಸ್ವಲ್ಪ ಹೆಚ್ಚು ಜನ ಮಾತ್ರ ಬರುತ್ತಾರೆ ಎಂದು ಭಾವಿಸಿದ್ದೆವು ಎಂದು ಅವರು ತಿಳಿಸಿದರು. ಆದರೆ, ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಆಗಮಿಸಿದ್ದಾರೆ ಎಂದು ಹೇಳಿದರು. ಕ್ರೀಡಾಂಗಣದ ಸಾಮರ್ಥ್ಯ 35 ಸಾವಿರ ಇದ್ದರೆ, 2 ಲಕ್ಷಕ್ಕೂ ಹೆಚ್ಚು ಅಭಿಮಾನಿಗಳು ಬಂದಿದ್ದಾರೆ ಎಂದು ಅವರು ವಿವರಿಸಿದರು.

ಈ ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಗಾಯಗೊಂಡವರಿಗೆ ಉಚಿತ ವೈದ್ಯಕೀಯ ಸೇವೆ ಒದಗಿಸುವುದಾಗಿ ಭರವಸೆ ನೀಡಿದರು. ಮೃತರಲ್ಲಿ ಹೆಚ್ಚಿನವರು ಯುವಕರು ಎಂದು ಅವರು ತಿಳಿಸಿದರು.

You cannot copy content of this page

Exit mobile version