Wednesday, August 6, 2025

ಸತ್ಯ | ನ್ಯಾಯ |ಧರ್ಮ

ಗ್ಯಾನವಾಪಿ ಮಸೀದಿಯಲ್ಲಿ ಪೂಜೆ ಪ್ರಶ್ನಿಸಿದ್ದ ಅರ್ಜಿ ವಜಾ: ಪೂಜೆ ಮುಂದುವರೆಸಲು ಸೂಚಿಸಿದ ಹೈಕೋರ್ಟ್

ಪ್ರಯಾಗರಾಜ್ : ಉತ್ತರ ಪ್ರದೇಶದ ವಾರಾಣಸಿಯ ಗ್ಯಾನವಾಪಿ ಮಸೀದಿಯ ನೆಲಮಾಳಿಗೆಯಲ್ಲಿ ವಿಗ್ರಹ ಪೂಜೆಗೆ ಹಿಂದೂಗಳಿಗೆ ಅವಕಾಶ ಕಲ್ಪಿಸಿ ಆದೇಶ ಪ್ರಶ್ನಿಸಿ ಮಸೀದಿ ಆಡಳಿತ ಮಂಡಳಿ ಸಲ್ಲಿಸಿದ್ದ ಮೇಲ್ಮನವಿಯನ್ನು ಅಲಹಾಬಾದ್ ಹೈಕೋರ್ಟ್ ವಜಾ ಮಾಡಿದೆ. ವ್ಯಾಸ್ ತೆಹ್ಖಾನಾ ಎಂಬ ಮಸೀದಿಯ ದಕ್ಷಿಣದ ನೆಲಮಾಳಿಗೆಯಲ್ಲಿ ಪೂಜೆ ಮುಂದುವರಿಸಬಹುದು ಎಂದು ಹೈಕೋರ್ಟ್ ಸೂಚಿಸಿದೆ.


ವ್ಯಾಸ್ ತೆಹ್ಖಾನಾ ಎಂಬ ಮಸೀದಿಯ ದಕ್ಷಿಣದ ನೆಲಮಾಳಿಗೆಯ ರಿಸೀವರ್‌ ಆಗಿ ಡಿಸ್ಟ್ರಿಕ್ ಮ್ಯಾಜಿಸ್ಟ್ರೇಟ್ ಅವರನ್ನು ನೇಮಕ ಮಾಡಿ ಜನವರಿ 17ರಂದು ವಾರಾಣಸಿ ಜಿಲ್ಲಾ ನ್ಯಾಯಾಧೀಶರು ನೀಡಿದ್ದ ಆದೇಶ ಮತ್ತು ಜನವರಿ 31ರ ಆದೇಶದಲ್ಲಿ ನೆಲಮಾಳಿಗೆಯಲ್ಲಿ ಪೂಜೆಗೆ ಅವಕಾಶ ಕಲ್ಪಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಕೆಯಾಗಿತ್ತು.


ನ್ಯಾಯಮೂರ್ತಿ ರೋಹಿತ್ ರಂಜನ್ ಅಗರವಾಲ್, ಪ್ರಕರಣದ ಸಂಪೂರ್ಣ ದಾಖಲೆಗಳನ್ನು ಪರಿಶೀಲಿಸಿದ ಮತ್ತು ಸಂಬಂಧಪಟ್ಟವರ ವಾದಗಳನ್ನು ಪರಿಗಣಿಸಿದ ನಂತರ ಅರ್ಜಿ ವಜಾಗೊಳಿಸಿದ್ದಾರೆ. ಜನವರಿ 17ರಂದು ಜಿಲ್ಲಾ ನ್ಯಾಯಾಧೀಶರು ನೀಡಿದ ತೀರ್ಪಿನಲ್ಲಿ ಮಧ್ಯಪ್ರವೇಶಿಸಲು ನ್ಯಾಯಾಲಯಕ್ಕೆ ಯಾವುದೇ ಕಾರಣ ಸಿಕ್ಕಿಲ್ಲ ಎಂದು ಹೇಳಿದ್ದಾರೆ.


ವಾರಾಣಸಿಯ ಗ್ಯಾನವಾಪಿ ಮಸೀದಿಯ ವ್ಯವಹಾರಗಳನ್ನು ನಿರ್ವಹಿಸುವ ಅಂಜುಮನ್ ಇಂತೇಜಾಮಿಯಾ ಮಸೀದಿ ಸಮಿತಿಯು ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು. ಕಕ್ಷಿದಾರರ ಪರ ವಕೀಲರ ವಾದ ಆಲಿಸಿದ ನಂತರ ನ್ಯಾಯಮೂರ್ತಿ ಅಗರ್ವಾಲ್ ಅವರು ಫೆಬ್ರವರಿ 15ರಂದು ತೀರ್ಪನ್ನು ಕಾಯ್ದಿರಿಸಿದ್ದು, ಈಗ ತೀರ್ಪು ಪ್ರಕಟಗೊಂಡಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page