ಚನ್ನಪಟ್ಟಣ ಉಪಚುನಾವಣೆಗೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಹತ್ವದ ಮಾಹಿತಿ ನೀಡಿದ್ದು, ಇಲ್ಲಿಯವರೆಗಿನ ಹಲವು ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ಆಗಾಗ ಸೃಷ್ಟಿಯಾಗುವ ವದಂತಿಗಳಿಗೆ ಯಾರೂ ಕಿವಿಗೊಡಬಾರದು ಎಂದೂ ಹೇಳಿದ್ದಾರೆ.
ಆ ಮೂಲಕ ಚನ್ನಪಟ್ಟಣ ಉಪಚುನಾವಣೆ ಸೇರಿದಂತೆ ಚುನಾವಣಾ ರಾಜಕೀಯಕ್ಕೆ ನಮ್ಮ ಕುಟುಂಬದ ಯಾರೂ ಸ್ಪರ್ಧೆ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ.
ತಮ್ಮ X ಖಾತೆಯ ಮೂಲಕ ಈ ಬಗ್ಗೆ ತಿಳಿಸಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ‘ನಮ್ಮ ಕುಟುಂಬದ ಯಾವುದೇ ಸದಸ್ಯರು ಚುನಾವಣಾ ರಾಜಕೀಯಕ್ಕೆ ಬರುವ ಪ್ರಶ್ನೆಯೇ ಇಲ್ಲ. ಈ ಬಗ್ಗೆ ನಾನು ಬಹಳ ಹಿಂದೆಯೇ ಸ್ಪಷ್ಟಪಡಿಸಿದ್ದೇನೆ. ಆದರೂ, ಈ ಬಗ್ಗೆ ಆಗಾಗ ಸೃಷ್ಟಿಯಾಗುವ ವದಂತಿಗಳಿಗೆ ಯಾರೂ ಕಿವಿಗೊಡಬಾರದು ಎಂದು ವಿನಂತಿಸುತ್ತಿದ್ದೇನೆ’ ಎಂದು ಅವರು ತಿಳಿಸಿದ್ದಾರೆ.
‘ಮಂಡ್ಯ ಲೋಕಸಭಾ ಕ್ಷೇತ್ರದಿಂದ ಎಚ್.ಡಿ.ಕುಮಾರಸ್ವಾಮಿ ಅವರು ಸಂಸದರಾಗಿ ಆಯ್ಕೆಯಾಗಿ ತೆರವಾಗಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಡಿ.ಕೆ ಶಿವಕುಮಾರ್ ಪುತ್ರಿ ಐಶ್ವರ್ಯ ಅವರು ಸ್ಪರ್ಧಿಸುತ್ತಿದ್ದಾರೆ’ ಎಂಬ ವದಂತಿ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣ ಎಕ್ಸ್ ಮೂಲಕ ಅವರು ಈ ರೀತಿಯಾಗಿ ಸ್ಪಷ್ಟನೆ ನೀಡಿದ್ದಾರೆ.