ನಾಯಕತ್ವ ಬಿಕ್ಕಟ್ಟು: ಮಲ್ಲಿಕಾರ್ಜುನ ಖರ್ಗೆವರನ್ನು ಭೇಟಿಯಾದ ಡಿಸಿಎಂ ಡಿ.ಕೆ. ಶಿವಕುಮಾರ್

ದೆಹಲಿ: ಕರ್ನಾಟಕ ಕಾಂಗ್ರೆಸ್‌ನಲ್ಲಿನ ಆಂತರಿಕ ಅಧಿಕಾರ ಹಂಚಿಕೆ ಮತ್ತು ನಾಯಕತ್ವದ ಗೊಂದಲಗಳ ನಡುವೆಯೇ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಚರ್ಚಿಸಿದ್ದಾರೆ. ಈ ಭೇಟಿಯು ರಾಜ್ಯ ರಾಜಕೀಯದಲ್ಲಿ ಮತ್ತೆ ತೀವ್ರ ಕುತೂಹಲ ಮೂಡಿಸಿದೆ.

ಡಿ.ಕೆ. ಶಿವಕುಮಾರ್ ಅವರು ತಮ್ಮ ಸಹೋದರ ಮತ್ತು ಮಾಜಿ ಸಂಸದ ಡಿ.ಕೆ. ಸುರೇಶ್ ಅವರೊಂದಿಗೆ ಖರ್ಗೆಯವರ ನಿವಾಸಕ್ಕೆ ತೆರಳಿ, ಸುಮಾರು 40 ನಿಮಿಷಗಳ ಕಾಲ ಮಹತ್ವದ ಮಾತುಕತೆ ನಡೆಸಿದ್ದಾರೆ. ಆದರೆ, ಈ ಸಭೆಯಲ್ಲಿ ನಡೆದ ಚರ್ಚೆಯ ನಿಖರ ವಿವರಗಳನ್ನು ಬಹಿರಂಗಪಡಿಸಲಾಗಿಲ್ಲ.

ಕಳೆದ ಕೆಲವು ದಿನಗಳಿಂದ ಕೇಳಿಬರುತ್ತಿರುವ ‘ರೊಟೇಷನಲ್ ಮುಖ್ಯಮಂತ್ರಿ’ (ತಲಾ ಎರಡೂವರೆ ವರ್ಷದ ಅಧಿಕಾರ) ಸೂತ್ರವನ್ನು ಜಾರಿಗೆ ತರುವಂತೆ ಶಿವಕುಮಾರ್ ಅವರು ಹೈಕಮಾಂಡ್‌ಗೆ ಒತ್ತಡ ಹೇರಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ನಡುವೆ, ರಾಜ್ಯದಲ್ಲಿ ಎಸ್‌ಸಿ ಸಮುದಾಯದ ಆಂತರಿಕ ಮೀಸಲಾತಿ ಹಂಚಿಕೆಯನ್ನು ಅಂತಿಮಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಶುಕ್ರವಾರ ನಡೆದಿದ್ದ ಮಹತ್ವದ ಸಂಪುಟ ಸಭೆಯನ್ನು ಡಿ.ಕೆ. ಶಿವಕುಮಾರ್ ಮಿಸ್ ಮಾಡಿಕೊಂಡಿದ್ದು, ಅವರ ದೆಹಲಿ ಭೇಟಿಯ ಗಂಭೀರತೆಯನ್ನು ಎತ್ತಿ ತೋರಿಸಿದೆ.

“ನನ್ನ ದೆಹಲಿ ಭೇಟಿ ವಿಹಾರಕ್ಕಲ್ಲ, ರಾಜ್ಯ ರಾಜಕೀಯದ ವಿಚಾರವಾಗಿ ಹಿರಿಯ ನಾಯಕರನ್ನು ಭೇಟಿಯಾಗಲು ಬಂದಿದ್ದೇನೆ,” ಎಂದು ಗುರುವಾರವೇ ಶಿವಕುಮಾರ್ ಸ್ಪಷ್ಟಪಡಿಸಿದ್ದರು. ಆದಾಗ್ಯೂ, ಹೈಕಮಾಂಡ್‌ನೊಂದಿಗೆ ನಡೆದ ಸಂಭಾಷಣೆಯ ವಿವರಗಳನ್ನು ಅವರು ಬಹಿರಂಗಪಡಿಸಿಲ್ಲ.

ಸದ್ಯ ಐದು ರಾಜ್ಯಗಳ ವಿಧಾನಸಭೆ ಚುನಾವಣೆಗಳು ನಡೆಯುತ್ತಿರುವುದರಿಂದ, ಚುನಾವಣೆ ಮುಗಿದ ಬಳಿಕ ರಾಹುಲ್ ಗಾಂಧಿ ಅವರು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಶಿವಕುಮಾರ್ ಅವರನ್ನು ದೆಹಲಿಗೆ ಕರೆಸಿ ನಾಯಕತ್ವದ ಸಮಸ್ಯೆ ಬಗೆಹರಿಸುವ ಸಾಧ್ಯತೆಯಿದೆ. ಆದರೆ, ಅಷ್ಟರವರೆಗೆ ಕಾಯದೆ ಆದಷ್ಟು ಬೇಗ ನಾಯಕತ್ವ ಬಿಕ್ಕಟ್ಟನ್ನು ಬಗೆಹರಿಸಲು ಹೈಕಮಾಂಡ್‌ನ ಉನ್ನತ ನಾಯಕರ ಮೇಲೆ ಶಿವಕುಮಾರ್ ಒತ್ತಡ ಹೇರುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

Related Articles

ಇತ್ತೀಚಿನ ಸುದ್ದಿಗಳು