ಚಂದ್ರಯಾನ 3 ಯಶಸ್ವಿ ಉಡಾವಣೆಯ ಬೆನ್ನಲ್ಲೇ ಭಾರತದ ಅಸಲಿ ದುಸ್ಥಿತಿಯನ್ನು ನೆನೆದು ಕನ್ನಡದ ಖ್ಯಾತ ನಟ ಕಿಶೋರ್ ಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ. ಚಂದ್ರಯಾನ ಯಶಸ್ವಿ ಉಡಾವಣೆ ಬಗ್ಗೆ ಹೆಮ್ಮೆ ಇದೆ.. ಎದೆ ಬೀಗಿದೆ. ಆದರೆ ಈ ಸಂಭ್ರಮಾಚರಣೆ ನಡುವೆ ಭಾರತದ ಜ್ವಲಂತ ಸಮಸ್ಯೆಗಳನ್ನು ಜನ ಮರೆಯದಿರಲಿ ಎಂಬ ಸಂದೇಶ ನೀಡಿದ್ದಾರೆ.
ಈ ಬಗ್ಗೆ ತಮ್ಮ ಫೇಸ್ಬುಕ್ ಗೋಡೆಯ ಮೇಲೆ ಬರೆದುಕೊಂಡಿರುವ ಅವರು, “ಚಂದ್ರನ ದಕ್ಷಿಣ ದ್ರುವದ ಮೇಲೆ ಪ್ರಪಂಚದಲ್ಲೇ ಮೊತ್ತ ಮೊದಲ ಬಾರಿಗೆ ಭಾರತದ ಉಪಗ್ರಹ ಅಡಿಯಿರಿಸಿದೆ. ಹೆಮ್ಮೆಯಿದೆ , ಎದೆ ಬೀಗಿದೆ. ಆದರೆ.. ಸಂಭ್ರಮಿಸಲೇ ಎನ್ನುತ್ತಿರುವಂತೆಯೇ ನನ್ನ ಕಣ್ಣ ಮುಂದೆ ನನ್ನ ದೇಶದ ಕುತಂತ್ರಿ ರಾಜಕಾರಣಿಗಳು, ನನ್ನ ಮನೆಯ ಹೆಣ್ಣು ಮಕ್ಕಳನ್ನು ಬೀದಿಯಲ್ಲಿ ಬೆತ್ತಲೆ ಮೆರವಣಿಗೆ ಮಾಡಿ ಅತ್ಯಾಚಾರ ಮಾಡುತ್ತಿರುವ ಚಿತ್ರ ಬಂದು ನಿಲ್ಲುತ್ತದೆ” ಎಂದು ಮಣಿಪುರದ ಹೆಣ್ಣು ಮಕ್ಕಳ ದುರಂತದ ಬಗ್ಗೆ ಪ್ರಸ್ತಾಪಿಸಿ ಬರೆದುಕೊಂಡಿದ್ದಾರೆ.
ಇದರ ಜೊತೆಗೆ ಭಾರತದಲ್ಲಿ ನಡೆದ ಐತಿಹಾಸಿಕ ರೈತ ಹೋರಾಟದ ಹಿನ್ನೆಲೆಯಲ್ಲಿ ನಡೆದ ಹಿಂಸಾಚಾರದ ಬಗ್ಗೆಯೂ ಪ್ರಸ್ತಾಪಿಸಿದ ಕಿಶೋರ್ “ನನ್ನ ರೈತ ಸಹೋದರರ ಮೇಲೆ ಜೀಪು ಹರಿಸಿ ಕೊಲ್ಲುತ್ತಿರುವ ಚಿತ್ರ. ಹಿಂದೂ ಮುಸ್ಲಿಂ ಮೂಲಭೂತವಾದಿಗಳಿಗೆ ಕುಮ್ಮಕ್ಕು ಕೊಟ್ಟು ದೇಶವನ್ನು ಒಡೆಯುತ್ತಿರುವ ಚಿತ್ರ. ನನ್ನ ಮುಸ್ಲಿಂ ಕ್ರಿಶ್ಚಿಯನ್ ಸಹೋದರ ಸಹೋದರಿಯರ ಮನೆ, ಹೊಟ್ಟೆಪಾಡಿನ ಅಂಗಡಿಗಳನ್ನು ಧರ್ಮಾಂಧ ಬುಲ್ಡೊಜರುಗಳು ಪುಡಿ ಪುಡಿ ಮಾಡುತ್ತಿರುವ ಚಿತ್ರ ಕಣ್ಣ ಮುಂದೆ ಬಂದು ನಿಲ್ಲುತ್ತಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಈ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ನಿರ್ಲಕ್ಷ್ಯದ ಬಗ್ಗೆ ಪ್ರಸ್ತಾಪಿಸಿ ಅವರನ್ನು ಅಸೂಕ್ಷ್ಮಮತಿಯ ಬಗ್ಗೆ ಪರೋಕ್ಷವಾಗಿ ಟೀಕಿಸಿದ್ದಾರೆ. “ರಾಜಕೀಯ ದಾಳಗಳಾಗಿ ಸಾಯುತ್ತಲೇ ಇರುವ ಕಶ್ಮೀರದ ಜನತೆಯ ಚಿತ್ರ. ಇಂದಿಗೂ ದಲಿತರ, ಆದಿವಾಸಿಗಳ ಮೇಲೆ ಎಸಗುತ್ತಿರುವ ಹೇಸಿಗೆ ದೌರ್ಜನ್ಯದ ಚಿತ್ರ, ದೇಶದ ಯೋಧರನ್ನು ರಾಜಕಾರಿಣಿಗಳೇ ತಯಾರು ಮಾಡಿದ ಸಾವಿನ ಕೂಪಕ್ಕೆ ತಳ್ಳುವ ಚಿತ್ರ.. ಹೀಗೇ ನೂರಾರು..ಉಪಗ್ರಹಕ್ಕಿಂತ ಪರದೆಯ ಮೇಲೆ ಹೆಚ್ಚು ರಾರಾಜಿಸಿ ಮೆರೆದ ಪ್ರಧಾನಿಯಂತೆ ನಾನೂ ಕೂಡ ಸ್ವಾರ್ಥಿಯೂ, ಅಸೂಕ್ಷ್ಮಮತಿಯೂ, ಸಂವೇದನಾಹೀನನೂ ಆಗಬಾರದಿತ್ತೆ. ಸಂಬಳವೂ ಇಲ್ಲದೆ ದುಡಿದ ನನ್ನ ದೇಶದ ವಿಜ್ಞಾನಿಗಳ ಬೆವರ ಫಲವನ್ನು ಸಂಭ್ರಮಿಸಲು” ಎಂದು ಕಿಶೋರ್ ದೇಶದ ದುಸ್ಥಿತಿ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.