ಬೆಂಗಳೂರು: ಧರ್ಮ ಕೀರ್ತಿರಾಜ್ ನಾಯಕರಾಗಿ ನಟಿಸುತ್ತಿರುವ ಹಾಗೂ ಸತ್ಯಜಿತ್ ನಿರ್ಮಿಸಿ, ನಿರ್ದೇಶಿಸುತ್ತಿರುವ “ಬುಲೆಟ್” ಚಿತ್ರದ ಮುಹೂರ್ತ ಸಮಾರಂಭ ಆರ್.ಟಿ ನಗರದ ವಿನಾಯಕನ ದೇವಸ್ಥಾನದಲ್ಲಿ ನೆರವೇರಿತು.
ಚಿತ್ರದ ಮೊದಲ ದೃಶ್ಯಕ್ಕೆ ಶಾಸಕ ಭೈರತಿ ಸುರೇಶ್, ಕರ್ನಾಟಕ ರಕ್ಷಣ ವೇದಿಕೆ ಅಧ್ಯಕ್ಷ ಪ್ರವೀಣ್ ಶೆಟ್ಟಿ ಆರಂಭ ಫಲಕ ತೋರಿದರು. ಮಹಿಮ್ ಕ್ಯಾಮೆರಾ ಚಾಲನೆ ಮಾಡಿ ಶುಭ ಕೋರಿದರು.
ಈ ಕುರಿತು ಸಿನಿಮಾ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಿರ್ದೇಶಕ ಸತ್ಯಜಿತ್, ವಿನಾಯಕನ ಸನ್ನಿಧಿಯಲ್ಲಿ ಮುಹೂರ್ತ ಮಾಡಿದ್ದೇವೆ. ಒಂದೇ ಹಂತದಲ್ಲಿ ಚಿತ್ರೀಕರಣ ನಡೆಯಲಿದೆ. ಬೆಂಗಳೂರು, ಗೋವಾ, ಮಂಗಳೂರಿನಲ್ಲಿ ಚಿತ್ರೀಕರಣ ನಡೆಯಲಿದೆ. ಈ ಚಿತ್ರದ ನಾಯಕನಾಗಿ ಧರ್ಮ ಕೀರ್ತಿರಾಜ್ ನಟಿಸುತ್ತಿದ್ದಾರೆ. ಮುಂಬೈನ ಶ್ರೀಯಾ ಶುಕ್ಲಾ ಹಾಗೂ ಅಜಿತಾ ಜಾ ನಾಯಕಿಯರಾಗಿ ಬಣ್ಣ ಹಚ್ಚಲಿದ್ದಾರೆ. ಶ್ರೀಯಾ ಅವರು ಸುಶಾಂತ್ ಸಿಂಗ್ ಅವರ ಬಯೋಪಿಕ್ ಚಿತ್ರದಲ್ಲಿ ನಟಿಸಿದ್ದಾರೆ. ಚಿತ್ರ ಕ್ರೈಮ್ ಥ್ರಿಲ್ಲರ್ ಹಾಗೂ ಫ್ಯಾಮಿಲಿ ಸೆಂಟಿಮೆಂಟ್ ಕಥೆಯನ್ನು ಆಧರಿಸಿದೆ ಎಂದು ಮಾಹಿತಿ ನೀಡಿದರು.
ನಾಯಕ ನಟ ಧರ್ಮ ಕೀರ್ತಿರಾಜ್ ಮಾತನಾಡಿ, ಸತ್ಯಜಿತ್ ಅವರು ಹಿಂದಿ, ತಮಿಳಿನಲ್ಲಿ ಕೆಲವು ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಈ ಚಿತ್ರವನ್ನು ಅವರೆ ನಿರ್ಮಿಸಿ, ನಿರ್ದೇಶಿಸುತ್ತಿದ್ದಾರೆ. ಕಥೆ ತುಂಬಾ ಚೆನ್ನಾಗಿದೆ. ಅಪ್ಪ, ಮಗನ ಸೆಂಟಿಮೆಂಟ್ ಸನ್ನಿವೇಶಗಳು ಜನರಿಗೆ ಹತ್ತಿರವಾಗಲಿದೆ. ನನ್ನ ತಂದೆಯ ಪಾತ್ರದಲ್ಲಿ ಸತ್ಯಜಿತ್ ಅವರೆ ಅಭಿನಯಿಸುತ್ತಿದ್ದಾರೆ. ಎರಡು ಶೇಡ್ ಗಳಲ್ಲಿ ನನ್ನ ಪಾತ್ರವಿರುತ್ತದೆ. ಒಳ್ಳೆಯ ತಂಡದೊಂದಿಗೆ ಕೆಲಸ ಮಾಡುತ್ತಿರುವ ಖುಷಿಯಿದೆ. ನಮ್ಮ ತಂಡಕ್ಕೆ ಎಲ್ಲರ ಪ್ರೋತ್ಸಾಹವಿರಲಿ ಎಂದರು.
ನಂತರ ನಾಯಕಿಯರಾದ ಶ್ರೀಯಾ ಶುಕ್ಲ ಹಾಗೂ ಅಜಿತಾ ಜಾ ತಮ್ಮ ಪಾತ್ರ ಪರಿಚಯ ಮಾಡಿಕೊಂಡು, ಕನ್ನಡ ಚಿತ್ರದಲ್ಲಿ ಅಭಿನಯಿಸುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸಹ ನಿರ್ದೇಶಕ , ನಟ ಇಶ್ಯಾಕ್ ಬಾಜಿ, ಛಾಯಾಗ್ರಹಕ ಪಿ.ವಿ.ಆರ್ ಸ್ವಾಮಿ, ಸಂಗೀತ ನಿರ್ದೇಶಕ ರಾಜ್ ಭಾಸ್ಕರ್ ಮುಂತಾದವರು ಉಪಸ್ಥಿತರಿದ್ದರು.