ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮತ್ತು ನ್ಯಾಯಮೂರ್ತಿ ಎ.ಜಿ. ಮಸಿಹ್ ಅವರನ್ನೊಳಗೊಂಡ ಪೀಠವು, ಜಾರಿ ನಿರ್ದೇಶನಾಲಯದ ಕ್ರಮಗಳ ಬಗ್ಗೆ ಬಲವಾದ ಕಳವಳ ವ್ಯಕ್ತಪಡಿಸಿದೆ. ತಮಿಳುನಾಡಿನ ಸರ್ಕಾರಿ ಸ್ವಾಮ್ಯದ ಚಿಲ್ಲರೆ ವ್ಯಾಪಾರಿ ಸಂಸ್ಥೆ TASMAC ಮೇಲಿನ ಅಕ್ರಮ ಹಣ ವರ್ಗಾವಣೆ ಕುರಿತ ತನಿಖೆಗೆ ತಡೆ ನೀಡಿ, ಜಾರಿ ನಿರ್ದೇಶನಾಲಯದ ನಡೆ ತೀರಾ ಮಿತಿ ಮೀರಿದೆ ಎಂದು ಟೀಕಿಸಿದೆ.
ಸರಕಾರಿ ಸ್ವಾಮ್ಯದ ಸಂಸ್ಥೆಯ ಮೇಲೆ ಈಡಿಯ ಕ್ರಮದ ವಿರುದ್ಧ ಸುಪ್ರೀಂ ಕೋರ್ಟ್ ತೀವ್ರವಾಗಿ ಆಕ್ಷೇಪ ವ್ಯಕ್ತಪಡಿಸಿದೆ. ನಿಮ್ಮ ಜಾರಿ ನಿರ್ದೇಶನಾಲಯವು ಎಲ್ಲಾ ಮಿತಿಗಳನ್ನು ಮೀರುತ್ತಿದೆ. ಈ ಅಪರಾಧವು ನಿಗಮದ ವಿರುದ್ಧ ಹೇಗೆ ಆಗುತ್ತದೆ? ನೀವು ದೇಶದ ಒಕ್ಕೂಟ ರಚನೆಯನ್ನು ಸಂಪೂರ್ಣವಾಗಿ ಉಲ್ಲಂಘಿಸುತ್ತಿದ್ದೀರಿ ಎಂದು ಸಿಜೆಐ ಗವಾಯಿ ಟೀಕಿಸಿದರು.
ಚಿಲ್ಲರೆ ವ್ಯಾಪಾರಿ ಸಂಸ್ಥೆ TASMAC ಮೇಲಿನ ಜಾರಿ ನಿರ್ದೇಶನಾಲಯದ ದಾಳಿಗಳನ್ನು ಪ್ರಶ್ನಿಸಿ ತಮಿಳುನಾಡು ಸರಕಾರ ಮತ್ತು ತಮಿಳುನಾಡು ರಾಜ್ಯ ಮಾರ್ಕೆಟಿಂಗ್ ಕಾರ್ಪೊರೇಷನ್ (TASMAC) ಸಲ್ಲಿಸಿದ ಅರ್ಜಿಯನ್ನು ಇಂದು ಸುಪ್ರೀಂಕೋರ್ಟ್ನ ಸಿಜೆಐ ಬಿಆರ್ ಗವಾಯಿ ಮತ್ತು ನ್ಯಾಯಮೂರ್ತಿ ಆಗಸ್ಟೀನ್ ಜಾರ್ಜ್ ಮಸಿಹ್ ಅವರ ದ್ವಿಸದಸ್ಯ ಪೀಠವು ವಿಚಾರಣೆ ನಡೆಸಿ ಈಡಿಗೆ ನೋಟಿಸ್ ನೀಡಿದೆ.
ಜಾರಿ ನಿರ್ದೇಶನಾಲಯ ರಾಜಕೀಯ ದುರುದ್ದೇಶದಿಂದ ಕಾನೂನು ಬಾಹಿರವಾಗಿ ದಾಳಿ ನಡೆಸಿದೆ. ಜಾರಿ ನಿರ್ದೇಶನಾಲಯ ಟಿಎಎಸ್ ಎಂಎಸಿ ಮೇಲೆ ದಾಳಿ ನಡೆಸಿರುವುದು ಸಂವಿಧಾನ ಬಾಹಿರವಾಗಿದೆ ಎಂದು ಆರೋಪಿಸಿ ತಮಿಳುನಾಡು ಸರ್ಕಾರ ಇ.ಡಿ. ವಿರುದ್ಧ ಸುಪ್ರೀಂಕೋರ್ಟ್ ನಲ್ಲಿ ಪ್ರಕರಣ ದಾಖಲಿಸಿತ್ತು.