ಶಿವಮೊಗ್ಗ: ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟದ ಜತೆಗೆ ವಾರದಲ್ಲಿ ಎರಡು ಬಾರಿ ಮೊಟ್ಟೆ ಅಥವಾ ಬಾಳೆ ಹಣ್ಣು ನೀಡುವ ಯೋಜನೆಯು ಆಗಸ್ಟ್ 18ರಿಂದ ಆರಂಭವಾಗಲಿದೆ. ಮಂಡ್ಯ ಜಿಲ್ಲೆಯಲ್ಲಿ ಈ ಯೋಜನೆಯು ಉದ್ಘಾಟನೆಗೊಳ್ಳಲಿದೆ ಎಂದು ಪ್ರಾಥಮಿಕ ಹಾಗ ಪೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಪೋಷಕಾಂಶಯುಕ್ತ ಆಹಾರ ನೀಡುವ ಹಿನ್ನಲೆಯಲ್ಲಿ ಈ ಯೋಜನೆಯು ಜಾರಿಗೆ ಬರಲಿದೆ ಎಂದು ಅವರು ತಿಳಿಸಿದ್ದಾರೆ. ವಾರದಲ್ಲಿ ಎರಡು ಬಾರಿ ಒಂದರಿಂದ ಹತ್ತನೇ ತರಗತಿ ಮಕ್ಕಳಿಗೆ ಮೊಟ್ಟೆ ವಿತರಿಸಲಾಗುವುದು ಮೊಟ್ಟೆ ಸೇವಿಸದ ವಿದ್ಯಾರ್ಥಿಗಳಿಗಾಗಿ ಬಾಳೆಹಣ್ಣನ್ನು ನೀಡಲಾಗುವುದು ಎಂದು ಅವರು ಹೇಳಿದ್ದಾರೆ.
ಈ ಮೊದಲು 8ನೇ ತರಗತಿಯವರೆಗೆ ಈ ಯೋಜನೆ ಜಾರಿಗೊಳಿಸಬೇಕು ಎಂದಾಗಿತ್ತು. ಆದರೆ ಈಗ ಹತ್ತನೇ ತರಗತಿವರೆಗೂ ವಿಸ್ತರಿಸಬೇಕು ಎಂಬ ನಿರ್ಧಾರ ಕೈಗೊಳ್ಳಲಾಗಿದೆ.
ರಾಜ್ಯದ ವಿದ್ಯಾರ್ಥಿಗಳು ಅಪೌಷ್ಟಿಕತೆ ಹಾಗೂ ಅನೀಮಿಯಾದಿಂದ ಬಳಲುತ್ತಿರುವುದರಿಂದ ಮೊಟ್ಟೆ ಅಥವಾ ಬಾಳೆಹಣ್ಣು ವಿತರಣೆ ಅನಿವಾರ್ಯವಾಗಿದೆ ಎಂದು ಸರ್ಕಾರ ಪ್ರತಿಪಾದಿಸಿದೆ.