ಬೆಂಗಳೂರು: ಉಚಿತವಾಗಿ ಮತದಾರರ ಪಟ್ಟಿ ಪರಿಷ್ಕರಣೆ ನಡೆಸಿರುವ ಚಿಲುಮೆ ಸಂಸ್ಥೆಯ ಹಿನ್ನೆಲೆ ಏನು? ಅದರ ಮಾಲೀಕರು ಯಾರು? ಹಣಕಾಸು ಸಾಮರ್ಥ್ಯ ಏನು? ಉದ್ಯೋಗಿಗಳ ಸಂಖ್ಯೆ ಎಷ್ಟು? ಅದರ ಹಣಕಾಸಿನ ಮೂಲ ಯಾವುದು? ಈ ಬಗ್ಗೆ ತನಿಖೆಯಾಗಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ವಿಪಕ್ಷ ನಾಯಕ ಸಿದ್ಧರಾಮಯ್ಯ ಶುಕ್ರವಾರದಂದು ಸರಣಿ ಟ್ವೀಟ್ ಮಾಡಿ ಕಿಡಿಕಾರಿದ್ದಾರೆ.
ಚಿಲುಮೆ ಸಂಸ್ಥೆಯು ಸುಮಾರು 7-8 ಸಾವಿರ ಸಿಬ್ಬಂದಿ ಮನೆ, ಮನೆಗೆ ಹೋಗಿ ಮತದಾರರ ಮಾಹಿತಿ ಕಲೆ ಹಾಕಿದ್ದು, ಕೆಲವರು ತಮ್ಮ ಹೆಸರನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಹೇಳಿದ್ದಾರೆ. ಈಗಾಗಲೇ ಪ್ರಕರಣದ ಕುರಿತು ದೂರು ದಾಖಲಾಗಿದ್ದು, ಚಿಲುಮೆ ಸಂಸ್ಥೆಗೆ ನೀಡಿದ್ದ ಅನುಮತಿ ಆದೇಶವನ್ನು ಗೌರವ್ ಗುಪ್ತಾ ಅವರು ಏಕಾಏಕಿ ಹಿಂಪಡೆದಿದ್ದಾರೆ. ಈ ಹಿನ್ನೆಲೆಯಲ್ಲಿ ಸಿದ್ಧರಾಮಯ್ಯ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಸಿದ್ಧರಾಮಯ್ಯ, ʼಆಪರೇಷನ್ ವೋಟರ್ ಹಗರಣವನ್ನು ಹಾಸ್ಯಾಸ್ಪದ ಎಂದು ತಳ್ಳಿಹಾಕಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ಈ ಹಗರಣದ ರೂವಾರಿಗಳನ್ನು ರಕ್ಷಿಸಲು, ಸಂಸ್ಥೆಯ ಒಬ್ಬ ಏಜೆಂಟಿನ ವಿರುದ್ಧ ಪೊಲೀಸರಿಂದ ಎಫ್ಐಆರ್ ಹಾಕಿಸಿ ತಮ್ಮ ಸರ್ಕಾರದ ಕೆಲಸ ಎಷ್ಟು ಹಾಸ್ಯಾಸ್ಪದ ಎನ್ನುವುದನ್ನು ಸಾಬೀತುಪಡಿಸಿದ್ದಾರೆʼ ಎಂದು ಟೀಕಿಸಿದ್ಧಾರೆ.
ʼಮತದಾರರ ಪಟ್ಟಿ ಪರಿಷ್ಕರಣೆಯ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬೊಮ್ಮಾಯಿ ಅವರ ವಿರುದ್ಧವೇ ನಾವು ದೂರು ನೀಡಿದ್ದೆವು. ಮುಖ್ಯಮಂತ್ರಿಗಳು 20,000 ರೂಪಾಯಿ ಸಂಬಳದ ಬಡಪಾಯಿ ಏಜೆಂಟ್ನನ್ನು ಬಲಿಪಶು ಮಾಡಿ ತಾವು ಪಾರಾಗುವ ಸಂಚು ನಡೆಸಿದ್ದಾರೆʼ ಎಂದು ಹೇಳಿದ್ದಾರೆ.
ʼಮುಖ್ಯಮಂತ್ರಿ ಬೊಮ್ಮಾಯಿಯವರು ತಮ್ಮನ್ನು ರಕ್ಷಿಸಿಕೊಳ್ಳಲು ಆಪರೇಷನ್ ವೋಟರ್ ಹಗರಣವನ್ನು ಜಾತಿಗಣತಿಗೆ ಹೋಲಿಸಿದ್ದಾರೆ. ಒಂದು ಸಂಸ್ಥೆಯ ಹಿನ್ನೆಲೆಯನ್ನೂ ಪರಿಶೀಲಿಸದೆ ಮತದಾರರ ಪಟ್ಟಿ ಪರಿಷ್ಕರಣೆಗೆ ನೀಡಿರುವ ಅನುಮತಿಗೂ, ಸುಪ್ರೀಂಕೋರ್ಟ್ ಆದೇಶದಂತೆ ರಾಜ್ಯ ಸರ್ಕಾರ ನಡೆಸಿರುವ ಜಾತಿಗಣತಿಗೂ ಏನು ಸ್ವಾಮಿ ಸಂಬಂಧ? ಉಚಿತವಾಗಿ ಮತದಾರರ ಪಟ್ಟಿ ಪರಿಷ್ಕರಣೆ ನಡೆಸಿರುವ ಚಿಲುಮೆ ಸಂಸ್ಥೆಯ ಹಿನ್ನೆಲೆ ಏನು? ಅದರ ಮಾಲೀಕರು ಯಾರು? ಹಣಕಾಸು ಸಾಮರ್ಥ್ಯ ಏನು? ಉದ್ಯೋಗಿಗಳ ಸಂಖ್ಯೆ ಎಷ್ಟು? ಅದರ ಹಣಕಾಸಿನ ಮೂಲ ಯಾವುದು? ಈ ಬಗ್ಗೆ ತನಿಖೆಯಾಗಲಿ ಎಂದು ಪ್ರಶ್ನೆಗಳ ಸುರಿಮಳೆ ಸುರಿಸಿದ್ದಾರೆ.
ʼದೂರು ಬಂದ ಕಾರಣಕ್ಕೆ ಚಿಲುಮೆಗೆ ನೀಡಿರುವ ಅನುಮತಿಯನ್ನು ಬಿಬಿಎಂಪಿ ರದ್ದುಪಡಿಸಿರುವುದನ್ನು ಸ್ವಾಗತಿಸುತ್ತೇನೆ. ಮಾಡಿರುವ ಅಪರಾಧಕ್ಕೆ ಅನುಮತಿ ರದ್ದತಿ ಶಿಕ್ಷೆ ಅಲ್ಲವಲ್ಲಾ? ಗುತ್ತಿಗೆಯನ್ನು ರದ್ದುಗೊಳಿಸುವ ಮೂಲಕ ಆಗಿರುವ ಅಪರಾಧವನ್ನು ಇಲಾಖೆಯೇ ಒಪ್ಪಿಕೊಂಡಂತಾಗಿಲ್ಲವೇ?ʼ ಎಂದು ಪ್ರಶ್ನಿಸಿದ್ದಾರೆ.
ʼಸಮಾಜ ಸೇವೆಗೆ ಬೇಕಾದಷ್ಟು ಅವಕಾಶ ಇರುವಾಗ ಮತದಾರರ ಪಟ್ಟಿ ಪರಿಷ್ಕರಣೆಯನ್ನು ಉಚಿತವಾಗಿ ಮಾಡುತ್ತೇವೆ ಎಂದು ಸಂಸ್ಥೆ ಅರ್ಜಿ ನೀಡಿದಾಗಲೇ ಅದರ ಹಿಂದಿನ ದುರುದ್ದೇಶದ ಅರಿವು ಬಿಬಿಎಂಪಿಗೆ ಆಗಬೇಕಿತ್ತು. ಆಗಿಲ್ಲ ಎಂದರೆ ಬಿಬಿಎಂಪಿ ಹಗರಣದದಲ್ಲಿ ಭಾಗಿಯಾಗಿದೆ ಎಂದು ಅರ್ಥ ಅಲ್ಲವೇ?ʼ ಎಂದು ಕಿಡಿ ಬಿಬಿಎಂಪಿ ವಿರುದ್ಧ ಕಿಡಿಕಾರಿದ್ದಾರೆ.
ʼಮತದಾರರ ಪಟ್ಟಿ ಪರಿಷ್ಕರಣೆಗಾಗಿ ಚಿಲುಮೆ ಸಂಸ್ಥೆಗೆ ನೀಡಿರುವ ಅನುಮತಿಯನ್ನು ರದ್ದುಪಡಿಸಿದ್ದೀರಿ ಸರಿ, ಆದರೆ ಆ ಸಂಸ್ಥೆ ಅಕ್ರಮವಾಗಿ ಸಂಗ್ರಹಿಸಿರುವ ಮಾಹಿತಿ ಏನಾಯಿತು? ಆ ಸಂಸ್ಥೆ ಬಿಬಿಎಂಪಿಗೆ ಸಲ್ಲಿಸಿದೆಯಾ? ಇಲ್ಲವೇ ಯಾವುದಾದರೂ ರಾಜಕೀಯ ಪಕ್ಷಕ್ಕೆ ಮಾರಿದೆಯಾ?ʼ ಎಂದು ಕೇಳಿದ್ದಾರೆ.
ʼಮತದಾರರ ಪಟ್ಟಿ ಪರಿಷ್ಕರಣೆ ಎನ್ನುವುದು ಕೆಜಿಎಫ್ ಚಿತ್ರದ ರಾಕಿಭಾಯ್ ನ ಸೇಡಿನ ಕತೆಯೂ ಅಲ್ಲ, ಕಾಂತಾರ ಚಿತ್ರದ ಗುಳಿಗ-ಪಂಜುರ್ಲಿಯ ದಂತಕತೆಯೂ ಅಲ್ಲ. ಯಾರು ಯಾವ ಕೆಲಸ ಮಾಡಬೇಕೋ, ಅದನ್ನೇ ಮಾಡಬೇಕುʼ ಎಂದು ಉದಾಹರಣೆಯ ಮುಖಾಂತರ ವ್ಯಂಗ್ಯ ಮಾಡಿದ್ದಾರೆ.