ಅಬಕಾರಿ ಇಲಾಖೆಯಲ್ಲಿ ಬರೋಬ್ಬರಿ 700 ಕೋಟಿ ರೂಪಾಯಿ ಅಕ್ರಮ ನಡೆದಿದೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಸಧ್ಯದಲ್ಲೇ ಅಬಕಾರಿ ಸಚಿವರ ರಾಜೀನಾಮೆ ಬಗ್ಗೆ ರಾಜಕೀಯ ವಲಯದಲ್ಲಿ ಮಾತುಗಳು ಕೇಳಿ ಬಂದಿವೆ. ವಿಪಕ್ಷಗಳಿಂದ ಅಬಕಾರಿ ಸಚಿವರಾದ ಆರ್.ಬಿ.ತಿಮ್ಮಾಪುರ ಅವರ ಮೇಲೆ ಬಿಡದೇ ಭ್ರಷ್ಟಾಚಾರದ ಆರೋಪ ಕೇಳಿ ಬಂದಿದ್ದು ಈ ಬಗ್ಗೆ ಕುತೂಹಲ ಮೂಡಿದೆ.
ಅಬಕಾರಿ ಇಲಾಖೆಯಲ್ಲಿ ನೂರಾರು ಕೋಟಿ ಹಗರಣ ನಡೆದಿದೆ ಎನ್ನುವ ಆರೋಪವಿದ್ದು, ಇದು ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ಗೆ ಭಾರಿ ಮುಖಭಂಗ ತಂದೊಟ್ಟಿತ್ತು. ಈ ಬಗ್ಗೆ ರಾಜ್ಯಪಾಲರಿಗೆ ದೂರು ನೀಡಿ, ರಾಜ್ಯಾದ್ಯಂತ ಬಾರ್ಗಳನ್ನು ಬಂದ್ ಮಾಡಲು ಮಾಲೀಕರು ಸಹ ಮುಂದಾಗಿದ್ದರು.
ಈ ಸಂಬಂಧ ರಾಜ್ಯದಾದ್ಯಂತ ಪ್ರತಿಭಟನೆ ಮಾಡಿ ರಾಜ್ಯ ಸರ್ಕಾರವನ್ನು ಬಾರ್ ಮಾಲೀಕರು ಎಚ್ಚರಿಸಿದ್ದರು. ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಮಿತಿಮೀರಿದ್ದು, ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಅವರನ್ನು ಕೂಡಲೇ ಆ ಸ್ಥಾನದಿಂದ ಕೆಳಗಿಳಿಸಿ ಎಂದು ಪಟ್ಟು ಹಿಡಿದಿದ್ದರು. ಆ ನಂತರ ಸಂಧಾನ ಕಾರ್ಯ ನಡೆದು ಬಾರ್ ಬಂದ್ ನಿರ್ಣಯದಿಂದ ಹಿಂದೆ ಸರಿದಿತ್ತು.
ಈಗ ಸಚಿವ ತಿಮ್ಮಾಪುರ ರಾಜೀನಾಮೆ ಪಡೆಯುವ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಕೂಡ ಸಲಹೆ ನೀಡಿದೆ. ನಿನ್ನೆ ದೆಹಲಿ ಭೇಟಿಯ ನಂತರ ಸಿದ್ದರಾಮಯ್ಯ ಅವರು ಇದೇ ವಿಚಾರವಾಗಿ ಹೈಕಮಾಂಡ್ ಜೊತೆಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.