ಮುಂಬೈ: 100 ಕೋಟಿ ರೂ. ಸುಲಿಗೆ ಹಗರಣದ ಆರೋಪ, ಮಹಾರಾಷ್ಟ್ರದ ಮಾಜಿ ಸಚಿವ ಅನಿಲ್ ದೇಶಮುಖ್ ಅವರ ಜಾಮೀನು ಅರ್ಜಿಯನ್ನು ಸಿಬಿಐ ವಿಶೇಷ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯ ತಿರಸ್ಕರಿಸಿದೆ.
ಈ ಹಿನ್ನಲೆ ಅನಿಲ್ ದೇಶಮುಖ್ ಅವರ ಆಪ್ತ ಕಾರ್ಯದರ್ಶಿಯಾಗಿದ್ದ, ಸಂಜೀವ್ ಪಲಾಂಡೆ ಅವರ ಜಾಮೀನನ್ನು ಕೂಡ ಸಿಬಿಐ ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ.
ದೇಶಮುಖ್ ಅವರನ್ನು ನವೆಂಬರ್ 2, 2021 ರಂದು 100 ಕೋಟಿ ಸುಲಿಗೆ ಹಗರಣದ ಆರೋಪದ ಮೇಲೆ ಬಂಧಿಸಿ, ಅಂದಿನಿಂದ ಆರ್ಥರ್ ರೋಡ್ ಜೈಲಿನಲ್ಲಿ ಇರಿಸಲಾಗಿತ್ತು. ನಂತರ ಏಪ್ರಿಲ್ 5, 2021 ರಂದು ಹೈಕೋರ್ಟ್ ದೇಶಮುಖ್ ವಿರುದ್ಧ ಸಿಬಿಐನಿಂದ ಪ್ರಾಥಮಿಕ ತನಿಖೆಗೆ ನಿರ್ದೇಶನ ನೀಡಿತ್ತು. ಇದಾದ ಕೆಲವೇ ದಿನಗಳಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 120 ಬಿ (ಕ್ರಿಮಿನಲ್ ಪಿತೂರಿ) ಮತ್ತು ಭ್ರಷ್ಟಾಚಾರ ತಡೆ ಕಾಯಿದೆಯ ಸೆಕ್ಷನ್ 7ರ ಅಡಿಯಲ್ಲಿ, ದೇಶಮುಖ್ ವಿರುದ್ಧ ಪ್ರಥಮ ಮಾಹಿತಿ ವರದಿಯನ್ನು ದಾಖಲಿಸಲಾಗಿತ್ತು. ತದನಂತರ ಜುಲೈ 2022 ರಲ್ಲಿ, ವಿಶೇಷ ಸಿಬಿಐ ನ್ಯಾಯಾಲಯವು ಈ ಪ್ರಕರಣದಲ್ಲಿ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ನಾಯಕನ ನಿರೀಕ್ಷಣಾ ಜಾಮೀನನ್ನು ತಿರಸ್ಕರಿಸಿತ್ತು.