Wednesday, June 25, 2025

ಸತ್ಯ | ನ್ಯಾಯ |ಧರ್ಮ

ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಪೊಲೀಸರ ವಶಕ್ಕೆ

ರಾಜ್ಯ ವಿಧಾನಸಭಾ ಅಧಿವೇಶನ ಶುರುವಾಗುವ ಹಂತದಲ್ಲೇ ವಿವಿಧ ರೈತ ಸಂಘಟನೆಗಳ ಸಹಯೋಗದಲ್ಲಿ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಧರಣಿಗೆ ಕರೆ ಕೊಟ್ಟಿದ್ದರು. ಈ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆಯೇ ರಾಜ್ಯ ರೈತಸಂಘ ಮತ್ತು ಹಸಿರು ಸೇನೆಯ ಸಾವಿರಾರು ಕಾರ್ಯಕರ್ತರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಜಮಾಯಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆಗೆ ಇಳಿದಿದ್ದಾರೆ.

‘ಬಿಜೆಪಿ ಸರ್ಕಾರ ಚುನಾವಣಾ ಸಮಯದಲ್ಲಿ ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿದ ಯಾವ ಭರವಸೆಗಳನ್ನು ಈಡೇರಿಸಿದೆ ಎಂಬುದನ್ನು ಸ್ಪಷ್ಟಪಡಿಸಬೇಕು. ರೈತರಿಗೆ ಅನುಕೂಲ ಆಗುವ ನಿಟ್ಟಿನಲ್ಲಿ ಸಾಲಮನ್ನಾ ಮಾಡುವುದಾಗಿ ಸರ್ಕಾರ ಘೋಷಿಸಿಕೊಂಡಿತ್ತು. ಆದರೆ ಈಗ ಸಾಲಮನ್ನಾ ಇರಲಿ, ರೈತರಿಂದಲೇ ಕಸಿದು ತಿನ್ನುವ ಮಟ್ಟಕ್ಕೆ ಸರ್ಕಾರ ಇಳಿದಿದೆ’ ಎಂದು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನೆ ವೇಳೆ ಮಾತನಾಡಿದ ರೈತನಾಯಕ ಕೋಡಿಹಳ್ಳಿ ಚಂದ್ರಶೇಖರ್ ರೈತರಿಗೆ ಮಾರಕವಾಗಿರುವ ಕೃಷಿ ಕಾಯ್ದೆಯನ್ನು ಹಿಂಪಡೆಯಬೇಕು, ರೈತರ ಪಂಪ್ ಸೆಟ್ ಗಳಿಗೆ ಮೀಟರ್ ಅಳವಡಿಸಬಾರದು ಎಂದು ಆಗ್ರಹಿಸಿದ್ದಾರೆ.

ಜಾಥಾದ ನಂತರ ರೈತ ಸಂಘಟನೆ ಕಾರ್ಯಕರ್ತರು ವಿಧಾನಸೌಧ ಮುತ್ತಿಗೆಗೆ ಮುಂದಾದಾಗ ಪೊಲೀಸರು ಅವರನ್ನು ಅರ್ಧದಲ್ಲೇ ತಡೆದಿದ್ದಾರೆ. ನಂತರ ಪ್ರತಿಭಟನೆ ತೀವ್ರವಾಗಬಹುದು ಎಂದು ಅರಿತ ಪೊಲೀಸರು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಸೇರಿದಂತೆ ಪ್ರಮುಖರನ್ನು ವಶಕ್ಕೆ ಪಡೆದಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page