Home ಬ್ರೇಕಿಂಗ್ ಸುದ್ದಿ ಬಿಡದಿ ಜಮೀನು ವಿಚಾರದಲ್ಲಿ ಸರ್ಕಾರದ ನಡೆ ಖಂಡಿಸಿ – ರೈತ ಜಾಥಾ

ಬಿಡದಿ ಜಮೀನು ವಿಚಾರದಲ್ಲಿ ಸರ್ಕಾರದ ನಡೆ ಖಂಡಿಸಿ – ರೈತ ಜಾಥಾ

ಹಾಸನ : ಬಿಡದಿ ಜಮೀನು ವಿಚಾರದಲ್ಲಿ ರಾಜ್ಯ ಸರ್ಕಾರದ ನಡೆ ಹಾಗೂ ಉಪಮುಖ್ಯಮಂತ್ರಿ D. K. ಶಿವಕುಮಾರ್ ಅವರ ಹೇಳಿಕೆಗಳನ್ನು ಖಂಡಿಸಿ, ಜೆಡಿಎಸ್ ವತಿಯಿಂದ ಜೂನ್ 21ರಂದು ರೈತ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕ ಲಿಂಗೇಶ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಡದಿ ಜಮೀನು ಪ್ರಕರಣವು ಕೇವಲ ಒಂದು ಪ್ರದೇಶದ ಸಮಸ್ಯೆಯಲ್ಲ, ರಾಜ್ಯದ ರೈತರ ಭೂ ಹಕ್ಕುಗಳು, ಸ್ಥಳೀಯರ ಹಿತಾಸಕ್ತಿ ಹಾಗೂ ಭೂ ಸಂರಕ್ಷಣೆಗೆ ಸಂಬಂಧಿಸಿದ ಗಂಭೀರ ವಿಷಯವಾಗಿದೆ ಎಂದು ಹೇಳಿದರು. ಸರ್ಕಾರವು ರೈತರ ಅಭಿಪ್ರಾಯ ಮತ್ತು ಸ್ಥಳೀಯ ಜನರ ಭಾವನೆಗಳನ್ನು ಕಡೆಗಣಿಸಿ ನಿರ್ಧಾರಗಳನ್ನು ಕೈಗೊಳ್ಳುತ್ತಿದೆ ಎಂದು ಆರೋಪಿಸಿದರು. ಬಿಡದಿ ಪ್ರದೇಶದ ಭೂಮಿಯನ್ನು ಕೈಗಾರಿಕಾ ಹಾಗೂ ವಾಣಿಜ್ಯ ಉದ್ದೇಶಗಳಿಗೆ ಬಳಸುವ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕೊರತೆಯಿದ್ದು, ರೈತರಿಗೆ ಅನ್ಯಾಯವಾಗುವ ಸಾಧ್ಯತೆ ಇದೆ. ಭೂಸ್ವಾಧೀನ, ಭೂ ಬಳಕೆ ಬದಲಾವಣೆ ಹಾಗೂ ಹೂಡಿಕೆದಾರರಿಗೆ ನೀಡಲಾಗುತ್ತಿರುವ ಸೌಲಭ್ಯಗಳ ಕುರಿತು ಸರ್ಕಾರ ಸ್ಪಷ್ಟನೆ ನೀಡಬೇಕು ಎಂದು ಒತ್ತಾಯಿಸಿದರು.ರಾಜ್ಯ ಸರ್ಕಾರವು ರೈತರ ಹಿತಾಸಕ್ತಿಗಿಂತ ಖಾಸಗಿ ಮತ್ತು ಹೊರರಾಜ್ಯದ ಹೂಡಿಕೆದಾರರ ಪರವಾಗಿ ಕಾರ್ಯನಿರ್ವಹಿಸುತ್ತಿದೆ ಎಂಬ ಅನುಮಾನ ಜನರಲ್ಲಿ ಮೂಡಿದೆ. ಈ ಹಿನ್ನೆಲೆಯಲ್ಲಿ ರೈತರ ಹಕ್ಕುಗಳ ರಕ್ಷಣೆಗೆ ಹಾಗೂ ಸರ್ಕಾರದ ಗಮನ ಸೆಳೆಯಲು ಜೆಡಿಎಸ್ ಹೋರಾಟದ ಮಾರ್ಗವನ್ನು ಆಯ್ಕೆ ಮಾಡಿಕೊಂಡಿದೆ ಎಂದು ಹೇಳಿದರು.

ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಜೂನ್ 21ರಂದು ಬೆಳಿಗ್ಗೆ 9 ಗಂಟೆಗೆ ಆರಂಭವಾಗಲಿರುವ ರೈತ ಜಾಥಾ ವಿವಿಧ ಗ್ರಾಮಗಳ ಮೂಲಕ ಸಾಗಲಿದ್ದು, ಹೊಸೂರಿನಲ್ಲಿ ಸಮಾರೋಪಗೊಳ್ಳಲಿದೆ. ಜಾಥಾದಲ್ಲಿ ರೈತರು, ಪಕ್ಷದ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಅವರು ಕರೆ ನೀಡಿದರು. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಜಿಲ್ಲೆಯ ಅಭಿವೃದ್ಧಿ, ನೀರಾವರಿ, ರಸ್ತೆ ಹಾಗೂ ರೈತರ ಸಮಸ್ಯೆಗಳ ಪರಿಹಾರಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಜನಪ್ರತಿನಿಧಿಗಳು ಪಕ್ಷಾತೀತವಾಗಿ ಜಿಲ್ಲೆಯ ಹಿತಾಸಕ್ತಿಗಾಗಿ ಒಗ್ಗಟ್ಟಿನಿಂದ ಕೆಲಸ ಮಾಡಬೇಕೆಂದು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ರಘು ಹೊಂಗೆರೆ, ದ್ಯಾವೇಗೌಡ ಸೇರಿದಂತೆ ಜೆಡಿಎಸ್ ಮುಖಂಡರು ಉಪಸ್ಥಿತರಿದ್ದರು.

You cannot copy content of this page

Exit mobile version