ನವದೆಹಲಿ: ಕೇಂದ್ರ ಸರ್ಕಾರ ರೈತರೊಂದಿಗೆಮಾತುಕತೆ ನಡೆಸಿ ಒಂದು ಪ್ರಸ್ತಾವವನ್ನು ಮುಂದಿಟ್ಟಿತ್ತಾದರೂ ರೈತರು ಆ ಪ್ರಸ್ತಾವನೆಯನ್ನು ತಿರಸ್ಕರಿಸಿದ್ದಾರೆ. ಇಂದಿನಿಂದ ದೆಹಲಿ ಚಲೋ ಪ್ರತಿಭಟನೆಯನ್ನು ಮುಂದುವರಿಸಲು ಸಜ್ಜಾಗಿದ್ದು. ಸರ್ಕಾರ ಕೂಡ ರಾಷ್ಟ್ರರಾಜಧಾನಿಯಲ್ಲಿ ಭದ್ರತೆ ಬಿಗಿ ಹೆಚ್ಚಿಸಿದೆ. ಬಿಗಿ ಭದ್ರತೆ ನೆಪದಲ್ಲಿ ನಮಗೆ ಸರ್ಕಾರದಿಂದ ಇನ್ನಷ್ಟು ಕಿರುಕುಳ ಹೆಚ್ಚಲಿದೆ ಎಂದು ರೈತ ನಾಯಕರು ಆರೋಪಿಸಿದ್ದಾರೆ.
ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ದೆಹಲಿ ಚಲೋ ಪ್ರತಿಭಟನಾ ಮೆರವಣಿಗೆಯನ್ನು ಮುನ್ನಡೆಸುತ್ತಿವೆ.
ಕನಿಷ್ಠ ಬೆಂಬಲ ಬೆಲೆಗೆ ಒತ್ತಾಯಿಸಿ ಕಳೆದ ವಾರದಿಂದ ಸಾವಿರಾರು ರೈತರು ದೆಹಲಿಯ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರ ನೀಡಿದ್ದ ದ್ವಿದಳ ಧಾನ್ಯಗಳು, ಮೆಕ್ಕೆಜೋಳ ಮತ್ತು ಹತ್ತಿ ಬೆಳೆಗಳನ್ನು ಸರ್ಕಾರಿ ಸಂಸ್ಥೆಗಳ ಮೂಲಕ ಕನಿಷ್ಠ ಬೆಂಬಲ ಬೆಲೆಯಲ್ಲಿ (MSP) ಐದು ವರ್ಷಗಳವರೆಗೆ ಖರೀದಿಸುವ ಪ್ರಸ್ತಾವವನ್ನೂ ತಿರಸ್ಕರಿಸಿದ್ದಾರೆ. ಇಂದು ದೆಹಲಿ ಪ್ರವೇಶಿಸಲು ಸಿದ್ಧತೆ ನಡೆಸಿದ್ದಾರೆ.
ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ದೆಹಲಿಯ ಕೇಂದ್ರ ಭಾಗಕ್ಕೆ ಹೋಗುವ ವಿವಿಧ ರಸ್ತೆಗಳಲ್ಲಿ ವಾಹನಗಳನ್ನು ತಪಾಸಣೆ ಮಾಡುವುದರಿಂದ ಟ್ರಾಫಿಕ್ ಸಮಸ್ಯೆ ಹೆಚ್ಚಲಿದೆ. ಪ್ರಯಾಣಿಕರು ಸಂಚಾರ ದಟ್ಟಣೆಯನ್ನು ಎದುರಿಸಬೇಕಾಗುತ್ತದೆ ಎಂದು ಸಂಚಾರಿ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಈಗಾಗಲೇ ಟಿಕ್ರಿ ಮತ್ತು ಸಿಂಘು ಗಡಿಗಳನ್ನು ಬಂದ್ ಮಾಡಲಾಗಿದೆ. ಪೊಲೀಸರು ಮತ್ತು ಅರೆ ಸೇನಾ ಪಡೆಗಳನ್ನು ನಿಯೋಜಿಸಲಾಗಿದೆ. ಜತೆಗೆ ಕಾಂಕ್ರೀಟ್ ಮತ್ತು ಕಬ್ಬಿಣದ ಬ್ಯಾರಿಕೇಡ್ಗಳನ್ನು ಅಳವಡಿಸಲಾಗಿದೆ. ಅಗತ್ಯಬಿದ್ದರೆ, ಗಾಜಿಪುರ ಗಡಿಯನ್ನು ಬುಧವಾರವೂ ಬಂದ್ ಮಾಡಲಾಗುವುದು ಎಂದು ಅಧಿಕಾರಿಯೊಬ್ಬರು ತಿಳಿಸಿದಾರೆ.
ಒಬ್ಬ ಪ್ರತಿಭಟನಾಕಾರ ಅಥವಾ ಒಂದು ವಾಹನವೂ ದೆಹಲಿಗೆ ಪ್ರವೇಶಿಸದಂತೆ ಭದ್ರತಾ ಸಿಬ್ಬಂದಿಗೆ ನಿರ್ದೇಶನ ನೀಡಲಾಗಿದೆ. ದೆಹಲಿ ಪೊಲೀಸರು ಈಗಾಗಲೇ 30,000 ಅಶ್ರುವಾಯು ಶೆಲ್ಗಳನ್ನು ಸಂಗ್ರಹಿಸಿದ್ದಾರೆ.