ಮುಸ್ಲಿಮರು ಹಾಗೂ ಮುಸ್ಲಿಂ ಮಹಿಳೆಯರ ಬಗ್ಗೆ ಅಸಭ್ಯ ಹಾಗೂ ಅವಹೇಳನಕಾರಿಯಾಗಿ ಮಾತನಾಡಿದ ಕಲ್ಲಡ್ಕ ಪ್ರಭಾಕರ ಭಟ್ ಮೇಲೆ 8 ಸೆಕ್ಷನ್ ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಜೆಡಿಎಸ್ ಪಕ್ಷದ ನಾಯಕಿ ಹಾಗೂ ಸಾಮಾಜಿಕ ಕಾರ್ಯಕರ್ತೆ ನಜ್ಮಾ ನಜೀರ್ ಚಿಕ್ಕನೇರಳೆ ಅವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಈ ದೂರು ಸಲ್ಲಿಸಿದ್ದು, ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಶ್ರೀರಂಗಪಟ್ಟಣದಲ್ಲಿ ಹಿಂದೂ ಜಾಗರಣಾ ವೇದಿಕೆ ವತಿಯಿಂದ ಹನುಮ ಜಯಂತಿ ಆಂಗವಾಗಿ ಆಯೋಜಿಸಿದ್ದ ಹನುಮಮಾಲೆ ಸಂಕೀರ್ತನಾ ಯಾತ್ರೆ ಸಮಾರಂಭದಲ್ಲಿ ಮಾತನಾಡಿರುವ ಕಲ್ಲಡ್ಕ ಪ್ರಭಾಕರ ಭಟ್, “ಮುಸ್ಲಿಂ ಮಹಿಳೆಯರಿಗೆ ದಿನಕ್ಕೆ ಒಬ್ಬ ಗಂಡ. ಅವರಿಗೆ ಪರ್ಮೆನೆಂಟ್ ಗಂಡ ಇರಲಿಲ್ಲ. ಪರ್ಮೆನೆಂಟ್ ಗಂಡನನ್ನ ಕೊಟ್ಟಿದ್ದು ಮೋದಿ ಸರ್ಕಾರ. ಮುಸ್ಲಿಂ ಯುವಕರು ಮಾತ್ರ ಅಲ್ಲ. ಮುಸ್ಲಿಂ ಯುವತಿಯರು ಮೋಸ ಮಾಡುತ್ತಿದ್ದಾರೆ. ಹಿಂದೂ ಯುವಕ ಯುವತಿಯರನ್ನ ಲವ್ ಜಿಹಾದ್ ಮಾಡುತ್ತಿದ್ದಾರೆ. ನಿಮ್ಮಲ್ಲಿ ಯುವತಿ ಯುವಕರು ಇಲ್ಲವೇ?” ಎಂದು ಪ್ರಚೋದಿಸುವ ರೀತಿಯಲ್ಲಿ ಹಾಗೂ ಒಂದು ಸಮುದಾಯವನ್ನು ಅವಹೇಳನ ಮಾಡುವಂತೆ ಮಾತನಾಡಿದ್ದ.
ಸಧ್ಯ ಈ ಹೇಳಿಕೆ ಅಡಿಯಲ್ಲಿ ಈಗ ಜೆಡಿಎಸ್ ನಾಯಕಿ ಹಾಗೂ ಸಾಮಾಜಿಕ ಕಾರ್ಯಕರ್ತೆ ನಜ್ಮಾ ನಜೀರ್ ಪ್ರಭಾಕರ್ ಭಟ್ಟನ ವಿರುದ್ಧ ದೂರು ದಾಖಲಿಸಿದ್ದಾರೆ. ಮಂಡ್ಯದಲ್ಲಿ ಈ ಬಗ್ಗೆ ದೂರು ದಾಖಲಿಸಿದ ನಜ್ಮಾ ನಜೀರ್ ಸೂಕ್ತ ರೀತಿಯಲ್ಲಿ ಶಿಕ್ಷೆ ವಿಧಿಸುವಂತೆ ಆಗ್ರಹಿಸಿದ್ದಾರೆ.
ಪ್ರಭಾಕರ್ ಭಟ್ಟನ ವಿರುದ್ಧ ಐಪಿಸಿ ಕಲಂ 354 – ಮಹಿಳೆಯರ ಗೌರವ, ಘನತೆ, ಸಭ್ಯತೆಗೆ ಧಕ್ಕೆ ಉಂಟು ಮಾಡುವುದು
ಐಪಿಸಿ ಕಲಂ 294 – ಸಾರ್ವಜನಿಕ ಸ್ಥಳಗಳಲ್ಲಿ ಅಸಭ್ಯ ಮಾತುಗಳನ್ನು ಆಡುವುದು
ಐಪಿಸಿ ಕಲಂ 509 – ಮಹಿಳೆಯ ಘನತೆಗೆ ಧಕ್ಕೆ ತರುವ ಮತ್ತು ಆಕೆಯ ಖಾಸಗಿತನಕ್ಕೆ ಧಕ್ಕೆ ಉಂಟು ಮಾಡುವ ರೀತಿಯಲ್ಲಿ ಮಾತಾಡುವುದು, ಧ್ವನಿ ಹೊರಡಿಸುವುದು, ಹಾವ-ಭಾವ, ಭಂಗಿಗಳನ್ನು ಪ್ರದರ್ಶಿಸುವುದು, ವಸ್ತುಗಳನ್ನು ಪ್ರದರ್ಶಿಸುವುದು
ಐಪಿಸಿ 506: ಕ್ರಿಮಿನಲ್ ಬೆದರಿಕೆ
ಐಪಿಸಿ 153ಎ – ಗುಂಪುಗಳ ನಡುವೆ ದ್ವೇಷ ಭಾವನೆ ಸೃಷ್ಟಿಸುವುದು
ಐಪಿಸಿ 295 – ಧಾರ್ಮಿಕ ಸ್ಥಳಗಳಿಗೆ ಹಾನಿ, ಧಕ್ಕೆ ಉಂಟು ಮಾಡುವುದು
ಐಪಿಸಿ 295ಎ- ಅನ್ಯ ಧರ್ಮಿಯರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡುವುದು
ಐಪಿಸಿ 298 – ಧಾರ್ಮಿಕ ಭಾವನೆಗಳನ್ನು ನೋಯಿಸುವ ಸಲುವಾಗಿ ಮಾತುಗಳನ್ನಾಡುವುದು
ಅಡಿಯಲ್ಲಿ FiR ದಾಖಲಾಗಿದೆ.