ಬೆಂಗಳೂರು : ರಾಜ್ಯದಲ್ಲಿ ನೂತನ ಸಚಿವ ಸಂಪುಟ ವಿಸ್ತರಣೆಯ (CABINET EXPANSION) ಸಂಭ್ರಮದ ನಡುವೆಯೇ ಕಾಂಗ್ರೆಸ್ ಪಕ್ಷದ ಆಂತರಿಕ ಭಿನ್ನಾಭಿಪ್ರಾಯ ಬೀದಿಗೆ ಬಂದಿದೆ. ರಾಜಭವನದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (D.K. Shivakumar) ನೇತೃತ್ವದಲ್ಲಿ ಆಯೋಜನೆಗೊಂಡಿದ್ದ ನೂತನ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (siddaramaiah) ಅವರು ಗೈರುಹಾಜರಾಗುವ ಮೂಲಕ ತಮ್ಮ ತೀವ್ರ ಅಸಮಾಧಾನವನ್ನು ಬಹಿರಂಗಪಡಿಸಿದ್ದಾರೆ.
ಸಚಿವರ ಪಟ್ಟಿಯ ಕುರಿತು ಕಾಂಗ್ರೆಸ್ ನಾಯಕರ ನಡುವೆ ಭಿನ್ನಾಭಿಪ್ರಾಯ ಹೊಗೆಯಾಡುತ್ತಿರುವ ಬೆನ್ನಲ್ಲೇ ಈ ಹೈಪ್ರೊಫೈಲ್ ಕಾರ್ಯಕ್ರಮದಿಂದ ಸಿದ್ದರಾಮಯ್ಯ ದೂರ ಉಳಿದಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಕುರುಬ ಸಮುದಾಯದ ಪ್ರಭಾವಿ ನಾಯಕಿ ಗಾಯತ್ರಿ ಶಾಂತೇಗೌಡ ಅವರ ಹೆಸರನ್ನು ಕೊನೆ ಕ್ಷಣದಲ್ಲಿ ಸಚಿವರ ಪಟ್ಟಿಯಿಂದ ಕೈಬಿಟ್ಟಿರುವುದು ಸಿದ್ದರಾಮಯ್ಯ ಅವರ ಕೆಂಗಣ್ಣಿಗೆ ಕಾರಣವಾಗಿದೆ. ನೂತನ ಸಚಿವರ ಪಟ್ಟಿಯಲ್ಲಿ ಗಾಯತ್ರಿ ಅವರಿಗೆ ಸ್ಥಾನ ನೀಡಲು ಸಿದ್ದರಾಮಯ್ಯ ಒಲವು ತೋರಿದ್ದರು ಎನ್ನಲಾಗಿದ್ದು, ದಿಢೀರ್ ಹೆಸರನ್ನು ತೆಗೆದುಹಾಕಿರುವುದು ಅವರ ಅಸಮಾಧಾನಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ.
ತಮ್ಮ ಆಪ್ತರ ಹಾಗೂ ಪ್ರಭಾವಿ ನಾಯಕರ ಹೆಸರನ್ನು ದಿಢೀರನೆ ಪಟ್ಟಿಯಿಂದ ತೆರವುಗೊಳಿಸಿರುವುದು ಸಿದ್ದರಾಮಯ್ಯ ಅವರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ ಎನ್ನಲಾಗಿದೆ.
ಸಂಪುಟ ವಿಸ್ತರಣೆಯ ಬೆನ್ನಲ್ಲೇ ಒಂದೆಡೆ ಶಾಸಕರ ರಾಜೀನಾಮೆ ಪರ್ವ ಶುರುವಾಗಿದ್ದರೆ, ಮತ್ತೊಂದೆಡೆ ಸ್ವಪಕ್ಷದ ಪ್ರಮುಖ ನಾಯಕರೇ ಕಾರ್ಯಕ್ರಮದಿಂದ ದೂರ ಉಳಿದಿರುವುದು ‘ಕೈ’ ಪಡೆಗೆ ನುಂಗಲಾರದ ಬಿಸಿತುಪ್ಪವಾಗಿ ಪರಿಣಮಿಸಿದೆ.
