ಬೆಂಗಳೂರು: ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ತೆಲಂಗಾಣ ಹೈಕೋರ್ಟ್ ಸಿಬಿಐ ಕೋರ್ಟಿನ ಆದೇಶವನ್ನು ರದ್ದುಪಡಿಸಿದ ಕಾರಣ ಗಾಲಿ ಜನಾರ್ದನ ರೆಡ್ಡಿಯವರ ಶಾಸಕ ಸ್ಥಾನವನ್ನು ಮರಳಿಸಲಾಗಿದೆ.
ಗಣಿಗಾರಿಕೆ ಪ್ರಕರಣದ ವಿಚಾರಣೆ ನಡೆಸಿದ ಹೈದರಾಬಾದ್ನ ಸಿಬಿಐ ವಿಶೇಷ ನ್ಯಾಯಾಲಯವು ಮೇ ತಿಂಗಳಲ್ಲಿ ಗಾಲಿ ಜನಾರ್ದನ ರೆಡ್ಡಿಗೆ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ಪರಿಣಾಮವಾಗಿ, ಮೇ 6ರಂದು ಗಾಲಿ ಜನಾರ್ದನ ರೆಡ್ಡಿಯವರ ವಿಧಾನಸಭಾ ಸದಸ್ಯತ್ವವನ್ನು ಅನರ್ಹಗೊಳಿಸಿ ಆದೇಶ ಹೊರಡಿಸಲಾಗಿತ್ತು.
ಆದರೆ ಸಿಬಿಐ ನ್ಯಾಯಾಲಯದ ತೀರ್ಪಿನ ವಿರುದ್ಧ ಗಾಲಿ ಜನಾರ್ದನ ರೆಡ್ಡಿ ತೆಲಂಗಾಣ ಹೈಕೋರ್ಟ್ ಮೆಟ್ಟಿಲೇರಿದ್ದರು.
ಹೈಕೋರ್ಟ್ ಅವರಿಗೆ ಜಾಮೀನು ನೀಡಿ, ಈ ಹಂತದಲ್ಲಿ ಏಳು ವರ್ಷಗಳ ಜೈಲು ಶಿಕ್ಷೆ ಅಗತ್ಯವಿಲ್ಲ ಎಂದು ಅಭಿಪ್ರಾಯಪಟ್ಟಿತು. ಈ ಹಿನ್ನೆಲೆಯಲ್ಲಿ, ಅವರನ್ನು ಅನರ್ಹಗೊಳಿಸಿ ನೀಡಲಾಗಿದ್ದ ಅದೇಶವನ್ನು ರದ್ದುಗೊಳಿಸಲಾಗುತ್ತಿದೆ ಎಂದು ಶಾಸಕಾಂಗ ವ್ಯವಹಾರಗಳ ಕಾರ್ಯದರ್ಶಿ ವಿಶಾಲಾಕ್ಷಿ ಬುಧವಾರ ತಿಳಿಸಿದ್ದಾರೆ.