Tuesday, June 18, 2024

ಸತ್ಯ | ನ್ಯಾಯ |ಧರ್ಮ

ರಾಜ್ಯದಲ್ಲಿ ಗ್ರಾಮ ನ್ಯಾಯಾಲಯಗಳ ಸ್ಥಾಪನೆಗೆ ಸರ್ಕಾರ ಚಿಂತನೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಗ್ರಾಮ ನ್ಯಾಯಾಲಯಗಳ ಸ್ಥಾಪನೆಗೆ ಸರ್ಕಾರ ಗಂಭೀರ ಚಿಂತನೆ ನಡೆಸಿರುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಮಾಜಿ ಸಚಿವ ಅಬ್ದುಲ್‌ ನಜೀರ್‌ ಸಾಬ್‌ ಅವರಿದ್ದಾಗ ಗ್ರಾಮ ನ್ಯಾಯಾಲಯಗಳ ಬಗ್ಗೆ ಪ್ರಸ್ತಾಪಿಸಿದ್ದರು. ಈಗ ಆ ನಿಟ್ಟಿನಲ್ಲಿ ನಾವು ಕೆಲಸ ಮಾಡುವ ಬಗ್ಗೆ ಚಿಂತನೆ ನಡೆದಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ‌.

ವಿಧಾನಸೌಧದ ಬ್ಯಾಂಕ್ವಟ್ ಹಾಲ್‌ನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಇಲಾಖೆ ಸೋಮವಾರ ಹಮ್ಮಿಕೊಂಡಿದ್ದ 2023ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ ಪ್ರದಾನ ಸಮಾರಂಭ ಮತ್ತು ಸ್ವಚ್ಚ ಸರ್ವೇಕ್ಷಣಾ ಗ್ರಾಮೀಣ ರಾಜ್ಯ ಮಟ್ಟದ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು.

ಈ ಹಿಂದೆ ನಜೀರ್ ಸಾಬ್ ಗ್ರಾಮ ನ್ಯಾಯಾಲಯಗಳ ಬಗ್ಗೆ ಮಹತ್ವದ ಕನಸು ಇಟ್ಟಿದ್ದರು. ಈಗ ಕಾನೂನು ಸಚಿವ ಎಚ್‌ ಕೆ ಪಾಟೀಲ್‌ ಅವರು ಕೂಡ ಗ್ರಾಮ ನ್ಯಾಯಾಲಯಗಳನ್ನು ಅಸ್ತಿತ್ವಕ್ಕೆ ತರುವ ಬಗ್ಗೆ ಪ್ರಸ್ತಾಪಿಸುತ್ತಲೇ ಇದ್ದಾರೆ. ಗ್ರಾಮ ಮಟ್ಟದ ವ್ಯಾಜ್ಯಗಳು ನ್ಯಾಯಾಲಯಗಳ ಮೆಟ್ಟಿಲು ಏರಿ ವರ್ಷಗಟ್ಟಲೆ ಮುಂದೂಡುವುದಕ್ಕಿಂತ, ಸ್ಥಳೀಯವಾಗಿ ಬಗೆಹರಿಯಬೇಕು ಎಂಬ ಆಶಯ ಸರ್ಕಾರದ್ದಾಗಿದೆ ಎಂದು ಅವರು ವಿವರಿಸಿದರು.

“ಹಳ್ಳಿಗಳಲ್ಲಿಯೇ ಗ್ರಾಮಗಳ ವ್ಯಾಜ್ಯಗಳನ್ನು ಬಗೆಹರಿಸಬೇಕು ಎನ್ನುವ ಮಹತ್ವಾಕಾಂಕ್ಷೆಯಿಂದ ಗ್ರಾಮ ನ್ಯಾಯಾಲಯಗಳ ಸ್ಥಾಪನೆಗೆ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ರಾಷ್ಟ್ರಪಿತ ಗಾಂಧೀಜಿ ಮತ್ತು ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಅವರ ಗ್ರಾಮ ಸ್ವರಾಜ್ಯ ಮತ್ತು ಅಧಿಕಾರ ವಿಕೇಂದ್ರೀಕರಣದ ಆಶಯದಂತೆ ಗ್ರಾಮ ನ್ಯಾಯಾಲಯಗಳ ಸ್ಥಾಪನೆಯಾದರೆ ಗ್ರಾಮಸ್ಥರಿಗೆ ಬಹಳ ಸಹಾಯಕವಾಗಲಿದೆ” ಎಂದು ಅವರು ಹೇಳಿದರು.

Related Articles

ಇತ್ತೀಚಿನ ಸುದ್ದಿಗಳು