ಬೆಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಸೇವನೆಯ ವಿರುದ್ಧ ತನ್ನ ಹೋರಾಟವನ್ನು ತೀವ್ರಗೊಳಿಸಿದ್ದು, ಇತ್ತೀಚೆಗೆ ಸಿಗರೇಟುಗಳ ಮತ್ತು ಇತರೆ ತಂಬಾಕು ಉತ್ಪನ್ನಗಳ (ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ ಉತ್ಪಾದನೆ, ಸರಬರಾಜು ಮತ್ತು ವಿತರಣೆ) (ಕರ್ನಾಟಕ ತಿದ್ದುಪಡಿ) ಅಧಿನಿಯಮ 2024ಗೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದಾರೆ. ಈ ಹೊಸ ಕಾನೂನು ಜಾರಿಯಾದ ನಂತರ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಸೇವನೆಗೆ ಕಠಿಣ ನಿರ್ಬಂಧಗಳು ಜಾರಿಗೆ ಬಂದಿವೆ.
ಹೊಸ ನಿಯಮಗಳು ಏನು?
ಹುಕ್ಕಾ ಬಾರ್ಗಳ ಸಂಪೂರ್ಣ ನಿಷೇಧ: ಈ ಅಧಿನಿಯಮದಡಿ ಹುಕ್ಕಾ ಬಾರ್ಗಳನ್ನು ತೆರೆಯುವುದು ಅಥವಾ ನಡೆಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಸೇವನೆಯ ನಿಷೇಧ: ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಜಗಿಯುವುದು, ಉಗುಳುವುದು, ಅಥವಾ ಧೂಮಪಾನ ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಉಲ್ಲಂಘಿಸಿದವರಿಗೆ 1,000 ರೂಪಾಯಿ ದಂಡ ವಿಧಿಸಲಾಗುತ್ತದೆ.
ವಯಸ್ಸಿನ ಮಿತಿ ಮತ್ತು ದಂಡ ಹೆಚ್ಚಳ: ತಂಬಾಕು ಖರೀದಿಸುವ ವಯಸ್ಸಿನ ಮಿತಿಯನ್ನು 21 ವರ್ಷಕ್ಕೆ ಏರಿಸಲಾಗಿದ್ದು, ಉಲ್ಲಂಘನೆಗೆ ದಂಡ ಮತ್ತು ಶಿಕ್ಷೆಯ ಪ್ರಮಾಣವನ್ನು ಹೆಚ್ಚಿಸಲಾಗಿದೆ.
ಸಾರ್ವಜನಿಕ ಆರೋಗ್ಯ ರಕ್ಷಣೆಯ ದೃಷ್ಟಿಯಿಂದ ಈ ಕ್ರಮವನ್ನು ಕೈಗೊಳ್ಳಲಾಗಿದೆ ಎಂದು ಸರ್ಕಾರ ಹೇಳಿದೆ. ತಂಬಾಕು ಸೇವನೆಯಿಂದ ಆಗುವ ಆರೋಗ್ಯ ಸಮಸ್ಯೆಗಳನ್ನು ತಡೆಗಟ್ಟುವ ಜೊತೆಗೆ, ಯುವ ಜನರಲ್ಲಿ ಈ ದುಶ್ಚಟವನ್ನು ತಡೆಯುವ ಗುರಿಯನ್ನು ಸರ್ಕಾರ ಹೊಂದಿದೆ. “ತಂಬಾಕು ಕೇವಲ ಆರೋಗ್ಯವನ್ನಷ್ಟೇ ಹಾಳು ಮಾಡುವುದಿಲ್ಲ, ಇದು ನಮ್ಮ ಮನೆ, ಭವಿಷ್ಯ ಹಾಗೂ ದೇಶವನ್ನೇ ದುರ್ಬಲಗೊಳಿಸುತ್ತದೆ” ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.