ದೇಶಾದ್ಯಂತ ಜನವರಿ 22 ರಂದು ಎಲ್ಲಾ ಸರ್ಕಾರಿ ಶಾಲಾ ಕಾಲೇಜು, ಸರ್ಕಾರಿ ಕಚೇರಿಗಳಿಗೆ ರಜೆ ಘೋಷಣೆ ಮಾಡಬೇಕೆಂದು ಕೇಂದ್ರ ಸರ್ಕಾರ ಎಲ್ಲಾ ರಾಜ್ಯ ಸರ್ಕಾರಗಳಿಗೂ ಸೂಚನೆ ನೀಡಿದೆ. ಆದರೆ ಕರ್ನಾಟಕದಲ್ಲಿ ಯಾವುದೇ ಸರ್ಕಾರಿ ರಜೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸರ್ಕಾರಿ ರಜೆ ಘೋಷಿಸಬೇಕು ಎಂದು ಬಿಜೆಪಿ ನಾಯಕರು, ಹಿಂದೂ ಸಂಘಟನೆ ಮುಖಂಡರು ಒತ್ತಾಯಿಸಿದ್ದರು. ಆದರೆ ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರಿ ರಜೆ ಘೋಷಣೆ ಮಾಡುವುದಿಲ್ಲ ಎಂದು ಹೇಳಿದ್ದಾರೆ.
ತುಮಕೂರಿನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾಳೆ ರಾಜ್ಯದಲ್ಲಿ ಸರ್ಕಾರಿ ರಜೆ ಘೋಷಣೆ ಮಾಡುವುದಿಲ್ಲ. ಆದರೆ ಮುಜರಾಯಿ ಇಲಾಖೆ ದೇವಾಲಯಗಳಲ್ಲಿ ನಾಳೆ ವಿಶೇಷ ಪೂಜೆ ಇರಲಿದೆ ಎಂದು ತಿಳಿಸಿದರು.
ಇನ್ನೊಂದು ಮಹತ್ವದ ಬೆಳವಣಿಗೆಯಲ್ಲಿ ತಮಿಳುನಾಡು ಸರ್ಕಾರ ಯಾವುದೇ ದೇವಸ್ಥಾನಗಳಲ್ಲೂ ವಿಶೇಷ ಪೂಜೆ ಪುನಸ್ಕಾರಕ್ಕೆ ಬ್ರೇಕ್ ಹಾಕಿದೆ. ಡಿಎಂಕೆ ಆಡಳಿತ ಇರುವ ತಮಿಳುನಾಡಿನ ಎಂಕೆ ಸ್ಟಾಲಿನ್ ನೇತೃತ್ವದ ರಾಜ್ಯ ಸರ್ಕಾರ ಮಾತ್ರ ನಾಳಿನ ಅಯೋಧ್ಯೆಯ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಯಾವುದೇ ಪೂಜೆ ಪುನಸ್ಕಾರ ನಡೆಸದಂತೆ ಆದೇಶ ಹೊರಡಿಸಿದೆ.
ಅಷ್ಟೆ ಅಲ್ಲದೆ ನಾಳೆ ಅಯೋಧ್ಯೆಯ ರಾಮಮಂದಿರದಲ್ಲಿ ನಡೆಯಲಿರುವ ಶ್ರೀರಾಮನ ವಿಗ್ರಹದ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದ ನೇರ ಪ್ರಸಾರ ಮಾಡದಂತೆ ಆದೇಶ ಹೊರಡಿಸಿದೆ ಎಂಬ ವರದಿ ತಮಿಳುನಾಡು ಮೂಲದಿಂದ ಕೇಳಿ ಬಂದಿದೆ
ತಮಿಳುನಾಡು ಸರ್ಕಾರದ ಈ ನಡೆ ವಿರುದ್ಧ ಸಿಡಿದೆದ್ದರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಟ್ವಿಟ್ಟರ್ನಲ್ಲಿ ತಮಿಳುನಾಡು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ತಮ್ಮ ಟ್ವೀಟ್ನಲ್ಲಿ ಅವರು, 22 ಜನವರಿ 2024ರ (ನಾಳೆ) ಅಯೋಧ್ಯೆ ರಾಮಮಂದಿರ ಕಾರ್ಯಕ್ರಮಗಳ ನೇರ ಪ್ರಸಾರವನ್ನು ವೀಕ್ಷಿಸುವುದನ್ನು ತಮಿಳುನಾಡು ಸರ್ಕಾರ ನಿಷೇಧಿಸಿದೆ. ತಮಿಳುನಾಡಿನಲ್ಲಿ ಶ್ರೀರಾಮನಿಗೆ ಸಂಬಂಧಿಸಿದ 200ಕ್ಕೂ ಹೆಚ್ಚು ದೇವಾಲಯಗಳಿವೆ. HR&CE ವ್ಯಾಪ್ತಿಯಡಿ ಬರುವ ದೇವಾಲಯಗಳಲ್ಲಿ ಶ್ರೀರಾಮನ ಹೆಸರಿನಲ್ಲಿ ಯಾವುದೇ ಪೂಜೆ/ಭಜನೆ/ಪ್ರಸಾದ/ಅನ್ನದಾನವನ್ನು ಮಾಡುವುದನ್ನು ನಿಷೇಧಿಸಲಾಗಿದೆ. ಖಾಸಗಿ ದೇವಸ್ಥಾನಗಳಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸುವುದನ್ನು ಪೊಲೀಸರು ತಡೆಯುತ್ತಿದ್ದಾರೆ. ಪೆಂಡಾಲ್ಗಳನ್ನು ಕಿತ್ತು ಹಾಕುತ್ತೇವೆ ಎಂದು ಸಂಘಟಕರಿಗೆ ಬೆದರಿಕೆ ಹಾಕುತ್ತಿದ್ದಾರೆ. ಈ ಹಿಂದೂ ವಿರೋಧಿ ನಡೆ. ಈ ದ್ವೇಷಪೂರಿತ ನೀತಿಯನ್ನು ಬಲವಾಗಿ ಖಂಡಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ಆದರೆ ಈ ಬಗ್ಗೆ ತಮಿಳುನಾಡು ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಈ ನಡುವೆ ಬಿಜೆಪಿ ಉದ್ದೇಶಪೂರ್ವಕವಾಗಿ ಇಂತಹದೊಂದು ಸುದ್ದಿ ಬಿತ್ತರಿಸಿ ತಮಿಳುನಾಡು ಸರ್ಕಾರದ ವಿರುದ್ಧ ಅಭಿಪ್ರಾಯ ಹುಟ್ಟುವಂತೆ ಮಾಡಿದೆ ಎಂಬ ಮಾತುಗಳು ಕೇಳಿ ಬಂದಿದೆ.
ಇತ್ತ ತಮಿಳುನಾಡು ದೇವಸ್ಥಾನಗಳಲ್ಲಿ ಯಾವುದೇ ವಿಶೇಷ ಪೂಜೆ ಇಲ್ಲ ಎಂದಿದ್ದು, ಕರ್ನಾಟಕ ಸರ್ಕಾರ ಸರ್ಕಾರಿ ರಜೆ ಘೋಷಣೆ ಇಲ್ಲ ಎಂದಿರುವ ಎರಡೂ ನಿಲುವುಗಳು RSS ಹಾಗೂ ಬಿಜೆಪಿಗೆ ನುಂಗಲಾರದ ತುತ್ತಾಗಿದೆ.
ನಾಳೆ ದಾಸೋಹ, ಪಾನಕ, ಫಲಹಾರದ ಬಗ್ಗೆ ನನಗೆ ಮಾಹಿತಿ ಇಲ್ಲ. ಆದರೆ ನಾಳೆ ರಾಜ್ಯದಲ್ಲಿ ರಜೆ ಘೋಷಣೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.