ಉಪಚುನಾವಣೆ ನಡುವೆ ‘ಗ್ಯಾರಂಟಿ’ ಯೋಜನೆಗಳಿಗೆ ಗ್ರೀನ್ ಸಿಗ್ನಲ್: ಹೈಕೋರ್ಟ್ ತೀರ್ಪು

ರಾಜ್ಯದಲ್ಲಿ ಉಪಚುನಾವಣೆ ನಡೆಯುತ್ತಿರುವ ಸಂದರ್ಭದಲ್ಲೇ ಸರ್ಕಾರದ ಪ್ರಮುಖ ‘ಗ್ಯಾರಂಟಿ’ ಯೋಜನೆಗಳಿಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ. ಯೋಜನೆಗಳ ಹಣ ಬಿಡುಗಡೆಗೆ ತಡೆ ವಿಧಿಸಬೇಕೆಂದು ಸಲ್ಲಿಕೆಯಾಗಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸುವ ಮೂಲಕ ಸರ್ಕಾರ ನಿಟ್ಟುಸಿರು ಬಿಡುವಂತಾಗಿದೆ.

ಗೃಹಲಕ್ಷ್ಮಿ, ಯುವನಿಧಿ, ಗೃಹಜ್ಯೋತಿ ಮತ್ತು ಅನ್ನಭಾಗ್ಯ ಸೇರಿದಂತೆ ಜನಪ್ರಿಯ ಯೋಜನೆಗಳ ನಗದು ನೆರವು ಮುಂದುವರಿಯಲಿದೆ. ಮಾದರಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದರೂ, ಈ ಯೋಜನೆಗಳ ಹಣ ಬಿಡುಗಡೆಗೆ ತಡೆ ವಿಧಿಸುವ ಅಗತ್ಯವಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ದಾವಣಗೆರೆ ದಕ್ಷಿಣ ಉಪಚುನಾವಣೆಯ ಸ್ವತಂತ್ರ ಅಭ್ಯರ್ಥಿ ಗೌತಮ್ ಕುಮಾರ್ ಜೈನ್ ಅರ್ಜಿ ಸಲ್ಲಿಸಿದ್ದರು. ಕಳೆದ ಕೆಲವು ತಿಂಗಳಿಂದ ಬಾಕಿ ಉಳಿದಿದ್ದ ಹಣವನ್ನು ಇದೀಗ ಏಕಾಏಕಿ ಬಿಡುಗಡೆ ಮಾಡಲಾಗುತ್ತಿದೆ. ಇದು ಉಪಚುನಾವಣೆಯಲ್ಲಿ ಮತದಾರರನ್ನು ಪ್ರಭಾವಿಸಲು ಸರ್ಕಾರದ ಪ್ರಯತ್ನ ಎಂದು ಅವರು ವಾದಿಸಿದ್ದರು.

ಆದರೆ, ಅರ್ಜಿದಾರರ ಈ ಆರೋಪಗಳನ್ನು ಪರಿಗಣಿಸಿದ ನ್ಯಾಯಾಲಯ, ಕಲ್ಯಾಣ ಯೋಜನೆಗಳನ್ನು ತಡೆಹಿಡಿಯಲು ಕಾನೂನು ಆಧಾರಗಳಿಲ್ಲವೆಂದು ಹೇಳಿ ಅರ್ಜಿಯನ್ನು ತಿರಸ್ಕರಿಸಿದೆ.

ಹೈಕೋರ್ಟ್ ತೀರ್ಪಿನೊಂದಿಗೆ, ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಇದ್ದ ಅನಿಶ್ಚಿತತೆ ನಿವಾರಣೆಯಾಗಿ, ಲಕ್ಷಾಂತರ ಫಲಾನುಭವಿಗಳಿಗೆ ಹಣ ತಲುಪುವ ದಾರಿ ಸುಗಮವಾಗಿದೆ. ಉಪಚುನಾವಣೆ ನಡುವೆಯೂ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ನಿರಂತರವಾಗಿ ಜಾರಿಯಾಗಲಿವೆ ಎಂಬುದು ಸ್ಪಷ್ಟವಾಗಿದೆ.

Related Articles

ಇತ್ತೀಚಿನ ಸುದ್ದಿಗಳು