ಅಹಮದಾಬಾದ್: ಮುಂದಿನ ತಿಂಗಳು ನಡೆಯಲಿರುವ ಗುಜರಾತ್ ವಿಧಾನಸಭಾ ಚುನಾವಣೆಗೆ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯ ಹೆಸರನ್ನು ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಇಂದು ಪ್ರಕಟಿಸಲಿದ್ದಾರೆ ಎಂದು ಪಕ್ಷದ ಪದಾಧಿಕಾರಿಗಳು ತಿಳಿಸಿದ್ದಾರೆ.
ಕೇಜ್ರಿವಾಲ್ ಅವರು ಶುಕ್ರವಾರ ಅಹಮದಾಬಾದ್ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಪಕ್ಷದ ಮುಖ್ಯಮಂತ್ರಿ ಹೆಸರನ್ನು ಘೋಷಿಸಲಿದ್ದಾರೆ ಎಂದು ಪಕ್ಷವು ಗುರುವಾರ ಹೇಳಿಕೆಯಲ್ಲಿ ತಿಳಿಸಿದೆ.
ಕಳೆದ ವಾರ ಕೇಜ್ರಿವಾಲ್ ಅವರು, ಗುಜರಾತ್ನಲ್ಲಿ ತಮ್ಮ ಪಕ್ಷದಿಂದ ಮುಖ್ಯಮಂತ್ರಿ ಅಭ್ಯರ್ಥಿ ಯಾರಾಗಬೇಕೆಂಬುದರ ಕುರಿತು ತಮ್ಮ ಅಭಿಪ್ರಾಯಗಳನ್ನು ನೀಡಲು, SMS, ವಾಟ್ಸಾಪ್, ಈ ಮೇಲ್ ಮೂಲಕ ಪಕ್ಷವನ್ನು ಸಂಪರ್ಕಿಸುವಂತೆ ಜನರಲ್ಲಿ ಒತ್ತಾಯಿಸಿದ್ದರು.
ಈ ಹಿನ್ನಲೆಯಲ್ಲಿ, ರಾಜ್ಯದ ಜನರು ಪಕ್ಷಕ್ಕೆ ಸಲ್ಲಿಸುವ ಅಭಿಪ್ರಾಯದ ಆಧಾರದ ಮೇಲೆ ಅಭ್ಯರ್ಥಿಯನ್ನು ಹೆಸರಿಸಲಾಗುವುದು ಎಂದು ತಿಳಿದುಬಂದಿದೆ.
ಹೀಗಾಗಿ ನವೆಂಬರ್ 3ರ ಸಂಜೆಯವರೆಗೆ ಜನರು ತಮ್ಮ ಅಭಿಪ್ರಾಯಗಳನ್ನು ಸಲ್ಲಿಸಬಹುದಾಗಿದ್ದು, ಅವರ ಅಭಿಪ್ರಾಯಗಳ ಆಧಾರದ ಮೇಲೆ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಹೆಸರನ್ನು ಮರುದಿನ ಪ್ರಕಟಿಸಲಾಗುವುದು ಎಂದು ಕೇಜ್ರಿವಾಲ್ ತಿಳಿಸಿದ್ದರು.
ಈಗಾಗಲೇ ಭಾರತೀಯ ಚುನಾವಣಾ ಆಯೋಗ (ಇಸಿಐ) ನವೆಂಬರ್ 3ರಂದು ಚುನಾವಣೆಯ ದಿನಾಂಕಗಳನ್ನು ಪ್ರಕಟಿಸಿದೆ.
ಈ ಕಾರಣ, ಮುಖ್ಯಮಂತ್ರಿ ಅಭ್ಯರ್ಥಿಯೊಂದಿಗೆ ಕೇಜ್ರಿವಾಲ್ ಮುನ್ನಡೆ ಸಾಧಿಸುವ ಮೂಲಕ ಎಎಪಿ ಪ್ರತಿದಿನ ಎರಡರಿಂದ ಮೂರು ರೋಡ್ಶೋಗಳನ್ನು ನಡೆಸಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಈ ಮೂಲಕ ಎಎಪಿ, ಬಿಜೆಪಿ ಭದ್ರಕೋಟೆಯನ್ನು ಒಡೆಯಲು ಇಂದಿನಿಂದಲೇ ಪ್ರಯೋಗಗಳನ್ನು ನಡೆಸುತ್ತಿದೆ.