ಬೆಂಗಳೂರು: 2023ರ ಮೊದಲಾರ್ಧದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದ್ದು, ಗುಜರಾತ್ ಚುನಾವಣೆಯಲ್ಲಿನ ಬಿಜೆಪಿಯ ಭರ್ಜರಿ ಗೆಲುವನ್ನು ನೋಡಿ, ಕಾಂಗ್ರೆಸ್ ನಾಯಕರು ಮತ್ತು ಶಾಸಕರು ಬಿಜೆಪಿಗೆ ಪಲಾಯನ ಮಾಡಲು ಬಯಸುತ್ತಿದ್ದಾರೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.
ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು ʼಹಲವಾರು ಕಾಂಗ್ರೆಸ್ ನಾಯಕರಲ್ಲಿ ಸುಮಾರು 12 ಜನರು ನನ್ನೊಂದಿಗೆ ಸಂಪರ್ಕದಲ್ಲಿದ್ದಾರೆ, ಏಕೆಂದರೆ ಅವರು ತಮ್ಮ ಪಕ್ಷವನ್ನು ತೊರೆದು ಬಿಜೆಪಿಗೆ ಸೇರಲು ಬಯಸುತ್ತಿದ್ದಾರೆʼ ಎಂದು ತಿಳಿಸಿದ್ದಾರೆ.
ʼಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯು ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಸಹಾಯ ಮಾಡಲಿಲ್ಲ.ಆದರ ಬದಲು ಎಎಪಿ ಕಾಂಗ್ರೆಸ್ ಮತಗಳನ್ನು ಪಡೆದುಕೊಂಡಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಆದರೆ ಎಎಪಿ ಸುಮಾರು 5 ಪ್ರತಿಶತದಷ್ಟು ಮತಗಳನ್ನು ಪಡೆದರೂ, ಕರ್ನಾಟಕದಲ್ಲೂ ಕಾಂಗ್ರೆಸ್ ನಿರ್ನಾಮವಾಗುತ್ತದೆʼ ಎಂದು ಟೀಕಿಸಿದ್ದಾರೆ.
ಗುರುವಾರ ಗುಜರಾತ್ ಚುನಾವಣೆಯ ಫಲಿತಾಂಶದ ಕುರಿತು ಮಾತನಾಡಿದ ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ಬಿಜೆಪಿ ನಾಯಕ ಬಿ.ಎಸ್.ಯಡಿಯೂರಪ್ಪ ಅವರು,ʼ ಬಿಜೆಪಿ ಪಕ್ಷವು ರಾಜ್ಯದಲ್ಲೂ ತನ್ನ ಗುಜರಾತ್ ಸಾಧನೆಯನ್ನು ಪುನರಾವರ್ತಿಸಲಿದೆ, ಹಾಗೆಯೇ ಮುಂಬರುವ 224 ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿ 140ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಹೇಳಿದ್ದಾರೆ.