ಹಾಸನ: ಗ್ರಾಮ ಪಂಚಾಯತ್ ಚುನಾವಣಾ ಮೀಸಲಾತಿ ನಿಗದಿ ವಿಚಾರದಲ್ಲಿ ತಮ್ಮ ವಿರುದ್ಧ ಮಾಜಿ ಸಚಿವ ಎಚ್.ಡಿ. ರೇವಣ್ಣ ಹಗುರವಾಗಿ ಹಾಗೂ ಕೀಳುಮಟ್ಟದಲ್ಲಿ ಮಾತನಾಡಿದ್ದಾರೆ ಎಂದು ಹಾಸನ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಸಾರ್ವಜನಿಕವಾಗಿ ಮತ್ತು ಮಾಧ್ಯಮಗಳ ಮುಂದೆ ಅಧಿಕಾರಿಗಳನ್ನು ವೈಯಕ್ತಿಕವಾಗಿ ಟೀಕಿಸುವುದು ಸರಿಯಲ್ಲ ಎಂದು ಡಿಸಿ ಅಸಮಾಧಾನ ಹೊರಹಾಕಿದ್ದಾರೆ. ಇಂತಹ ವರ್ತನೆಯು ಸಮಾಜಕ್ಕೆ ತಪ್ಪು ಸಂದೇಶ ರವಾನಿಸುವುದಲ್ಲದೆ, ಇಲಾಖೆಯ ಇತರ ಅಧಿಕಾರಿಗಳ ಮೇಲೂ ಮಾನಸಿಕ ಪರಿಣಾಮ ಬೀರುತ್ತದೆ ಎಂದು ತಿಳಿಸಿದ್ದಾರೆ.
